Advertisement

ವಿದ್ಯಾರ್ಥಿಗಳ ಹಾಸ್ಟೆಲ್‌ ಸಮಸ್ಯೆಗೆ ಶಾಶ್ವತ ಪರಿಹಾರ: ಸಿಎಂ

08:28 PM Dec 15, 2021 | Team Udayavani |

ಸುವರ್ಣ ವಿಧಾನಸೌಧ: ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಎದುರಿಸುತ್ತಿರುವ ವಸತಿ ನಿಲಯದ ಕೊರತೆಗೆ ಮುಂದಿನ ಬಜೆಟ್‌ನಲ್ಲಿ ವಿಶೇಷ ಅನುದಾನ ಒದಗಿಸಿ, ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ವಿದ್ಯಾರ್ಥಿಗಳ ವಸತಿ ನಿಲಯದ ಕೊರತೆ ಸಂಬಂಧ ಬಿಜೆಪಿಯ ಎಲ್‌. ನಾಗೇಂದ್ರ ಕೇಳಿದ ಪ್ರಶ್ನೆ ಸಂಬಂಧ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಗ್ರಾಮೀಣ ಭಾಗದಲ್ಲಿ ವಿದ್ಯಾಸಂಸ್ಥೆಗಳು ಇಲ್ಲದೇ ಇರುವುದರಿಂದ ಧಾರವಾಡ, ಮೈಸೂರು, ಕಲಬುರ ಗಿ, ಮಂಗಳೂರು ಭಾಗಕ್ಕೆ ಕಲಿಕೆಗಾಗಿ ವಿದ್ಯಾರ್ಥಿಗಳು ಹೋಗುತ್ತಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸೇರಿ ಕಲಿಕೆಗೆ ಬೇರೆ ಕಡೆ ಹೋಗುವ ವಿದ್ಯಾರ್ಥಿಗಳಿಗೆ ವಸತಿ ನಿಲಯದ ಸಮಸ್ಯೆ ಎದುರಾಗುತ್ತಿರುವ ಗಮನಕ್ಕೆ ಬಂದಿದೆ. ಇದಕ್ಕೆ ಅಧಿಕಾರಿಗಳ ಸಭೆ ಕರೆದು ಶಾಶ್ವತ ಪರಿಹಾರ ಕಂಡುಕೊಳ್ಳಲಿದ್ದೇವೆ ಎಂದರು.

ವಸತಿ ಸೌಲಭ್ಯ ಇಲ್ಲ ಎನ್ನುವ ಕಾರಣಕ್ಕೆ ಯಾವೊಬ್ಬ ವಿದ್ಯಾರ್ಥಿಯೂ ಕಲಿಕೆಯಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ವಸತಿ ಸೌಲಭ್ಯ ಹೆಚ್ಚಿಸಲು ಮುಂದಿನ ಬಜೆಟ್‌ನಲ್ಲಿ ವಿಶೇಷ ಅನುದಾನ ಒದಗಿಸಲಾಗುತ್ತದೆ ಎಂದರು.
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಚಾಮರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಖಾಸಗಿ ಕಟ್ಟಡಗಳಲ್ಲಿ ವ್ಯವಸ್ಥೆ ಮಾಡಬಹುದಾದ ಸಾಧ್ಯತೆಗಳು ಮತ್ತು ಆರ್ಥಿಕ ಲಭ್ಯತೆಯನ್ನು ಪರಿಶೀಲಿಸಲಾಗುತ್ತದೆ ಎಂದು ಹೇಳಿದರು.

ಎಲ್‌. ನಾಗೇಂದ್ರ ಮಾತನಾಡಿ, ಚಾಮರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಸ್ಟೆಲ್‌ ಇಲ್ಲದೆ 4 ಸಾವಿರ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಖಾಸಗಿ ಕಟ್ಟಡದಲ್ಲಾದರೂ ವಸತಿ ವ್ಯವಸ್ಥೆಯ ಸೌಲಭ್ಯ ಮಾಡಬೇಕು. ಹೊಸ ಹಾಸ್ಟೆಲ್‌ಗ‌ಳ ನಿರ್ಮಾಣಕ್ಕೂ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದರೆ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ. ಕಲಿಕೆಗೆ ಅನಾನುಕೂಲವಾಗುತ್ತದೆ ಎಂದು ಸರ್ಕಾರದ ಗಮನ ಸೆಳೆದರು.

ಇದನ್ನೂ ಓದಿ:ಪ್ರವಾಹದಿಂದ ನೊಂದವರಿಗೆ ಪರಿಹಾರ ನೀಡಿ ಶಾಸಕರ ಮರ್ಯಾದೆ ಉಳಿಸಿ : ಶಿವಲಿಂಗೇಗೌಡ

Advertisement

ವಿದ್ಯಾರ್ಥಿಗಳ ಅನುಕೂಲಕ್ಕೆ ಕ್ರಮ: ಸಚಿವ ಶ್ರೀರಾಮುಲು
ಸುವರ್ಣ ವಿಧಾನಸೌಧ: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ವಿತರಿಸುವ ಕಾರ್ಯ ಆರಂಭವಾಗಿದೆ. ನಿರ್ದಿಷ್ಟ ಪಾಸ್‌ ಮೂಲಕ 60 ಕಿ.ಮೀ ದೂರ ಮಾತ್ರ ಕ್ರಮಿಸಲು ಸಾಧ್ಯವಿದ್ದು, ಅದನ್ನು 100 ಕಿ.ಮೀ. ವಿಸ್ತರಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.

ಎಚ್‌.ಕೆ.ಕುಮಾರಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿದ್ಯಾರ್ಥಿಗಳ ಬಸ್‌ ಪಾಸ್‌ ನೀಡಲು ಸೇವಾಸಿಂಧು ಪೋರ್ಟಲ್‌ ಮೂಲಕ ಅರ್ಜಿ ಆಹ್ವಾನಿಸಿ, ಪಾಸ್‌ ವಿತರಿಸುವ ಪ್ರಕ್ರಿಯೆ ನಡೆಯುತ್ತಿದೆ. ಕೆಎಸ್‌ಆರ್‌ಟಿಸಿ, ಬಿಎಂಸಿಟಿಸಿ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳ 2021-22ನೇ ಸಾಲಿಗೆ ಶಾಲಾ ಕಾಲೇಜುಗಳಲ್ಲಿ ಪಾವತಿಸಿರುವ ಶುಲ್ಕದ ರಸೀದಿ ಅಥವಾ ಶಾಲಾ ಕಾಲೇಜಿನ ಗುರುತಿನ ಚೀಟಿಯೊಂದಿಗೆ ಸಾಮಾನ್ಯ ಸೇವೆಯಲ್ಲಿ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಕಲ್ಪಿಸಿರುತ್ತದೆ. ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜಿಗೆ ಹೋಗಿ ಬರಲು ಯಾವುದೇ ಸಮಸ್ಯೆಯಾಗದಂತೆ ಎಚ್ಚರ ವಹಿಸಿದ್ದೇವೆ ಎಂದರು.

ಲಾಭದತ್ತ ಕೊಂಡೊಯ್ಯಲು ಕ್ರಮ: ಶ್ರೀರಾಮುಲು
ಸುವರ್ಣ ವಿಧಾನಸೌಧ: ಸಾರ್ವಜನಿಕರ ಪ್ರಯಾಣದ ಹಿತದೃಷ್ಟಿಯಿಂದ ಕಳೆದ ನಾಲ್ಕೆçದು ವರ್ಷದಿಂದ ಸರ್ಕಾರಿ ಸಾರಿಗೆ ಬಸ್‌ಗಳ ಪ್ರಯಾಣ ದರ ಹೆಚ್ಚಳ ಮಾಡಿಲ್ಲ. ನಷ್ಟದಲ್ಲಿರುವ ನಿಗಮಗಳನ್ನು ಲಾಭದಾಯಕವಾಗಿಸಲು ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.

ಕಾಂಗ್ರೆಸ್‌ ಸದಸ್ಯ ಶರತ್‌ ಬಚ್ಚೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿ, ನಷ್ಟದಲ್ಲಿರುವ ಕೆಎಸ್‌ಆರ್‌ಟಿಸಿ, ಬಿಎಂಸಿಟಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನಷ್ಟ ಸರಿದೂಗಿಸಲು ನಿವೃತ್ತ ಐಎಎಸ್‌ ಅಧಿಕಾರಿ ಎಂ.ಆ ರ್‌. ಶ್ರೀ ನಿ ವಾಸ್‌ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿತ್ತು. ಈ ಎಲ್ಲ ಸಂಸ್ಥೆಗಳನ್ನು ಲಾಭದಾಯಕವಾಗಿಸಲು ಸಮಿತಿಯು ನಿರ್ದಿಷ್ಟ ಮಾರ್ಗೋಪಾಯದೊಂದಿಗೆ ವರದಿಯನ್ನು ಸಲ್ಲಿಸಿದೆ. ಅದರಂತೆ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next