Advertisement

ತನಿಖೆ ಮುಂದುವರಿಸಲು ಸಿಸಿಬಿಗೆ ಅನುಮತಿ

12:10 PM Dec 16, 2018 | |

ಬೆಂಗಳೂರು: ಆ್ಯಂಬಿಡೆಂಟ್‌ ಬಹುಕೋಟಿ ವಂಚನೆ ಪ್ರಕರಣದ ನಾಲ್ಕನೇ ಆರೋಪಿ ಎಸ್‌.ರಮೇಶ್‌ ವಿರುದ್ಧ ತನಿಖೆ ಮುಂದುವರಿಸಲು ಸಿಸಿಬಿ ಪೊಲೀಸರಿಗೆ ಅನುಮತಿ ನೀಡಿರುವ ಹೈಕೋಟ್‌, ಆರೋಪಿಗೆ ನೋಟಿಸ್‌ ಜಾರಿ ಮಾಡಿಯೇ ವಿಚಾರಣೆಗೆ ಕರೆಸುವಂತೆ ಸೂಚನೆ ನೀಡಿದೆ.

Advertisement

ಪ್ರಕರಣ ರದ್ದು ಕೋರಿ ರಮೇಶ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್‌.ದಿನೇಶ್‌ ಕುಮಾರ್‌ ಅವರಿದ್ದ ನ್ಯಾಯಪೀಠ, ಪ್ರಕರಣ ಸಂಬಂಧ ಅರ್ಜಿದಾರರ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದಂತೆ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶ ತೆರವುಗೊಳಿಸಿದೆ.

ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಬಹುದು. ಆದರೆ, ಅಗತ್ಯವಿದ್ದಾಗ ಅರ್ಜಿದಾರರಿಗೆ ನೋಟಿಸ್‌ ಜಾರಿಗೊಳಿಸಿಯೇ ವಿಚಾರಣೆ ನಡೆಸಬೇಕು ಎಂದು ಸೂಚಿಸಿ, ವಿಚಾರಣೆ ಮುಂದೂಡಿತು. ವಿಶೇಷ ಸರ್ಕಾರಿ ಅಭಿಯೋಜಕ ಎ.ಎಸ್‌.ಪೊನ್ನಣ್ಣ ವಾದ ಮಂಡಿಸಿ, ಅರ್ಜಿದಾರರು ಈಗಾಗಲೇ ಜಾಮೀನು ಪಡೆದಿದ್ದು, ಅವರನ್ನು ಬಂಧಿಸುವ ಅಗತ್ಯವಿಲ್ಲ. ಹೀಗಾಗಿ ತನಿಖೆ ಮುಂದುವರಿಸಲು ಅನುಮತಿ ನೀಡುವಂತೆ ಮನವಿ ಮಾಡಿದರು.

ರಮೇಶ್‌ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರಿಗೆ ಪೊಲೀಸರು ವಿಚಾರಣೆ ನೆಪದಲ್ಲಿ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ. ಕೇವಲ ಒಂದು ತಿಂಗಳಲ್ಲಿ 6 ಬಾರಿ ವಿಚಾರಣೆಗೆ ಕರೆಸಿದ್ದಾರೆ ಎಂದು ದೂರಿದರು. ಇದಕ್ಕೆ ನ್ಯಾಯಪೀಠ, ತನಿಖಾಧಿಕಾರಿಗಳು ನೋಟಿಸ್‌ ಜಾರಿ ಮಾಡಿದ ಬಳಿಕವೇ ಅರ್ಜಿದಾರರನ್ನು ವಿಚಾರಣೆಗೆ ಒಳಪಡಿಸಬೇಕು. ಅರ್ಜಿದಾರರೂ ಮುಂದಿನ ತನಿಖೆಗೆ ಸಹಕರಿಸಬೇಕು ಎಂದು ಸೂಚಿಸಿತು.

Advertisement

Udayavani is now on Telegram. Click here to join our channel and stay updated with the latest news.

Next