Advertisement

ಸಿದ್ದರಾಮಯ್ಯ ಅವಧಿಯಲ್ಲಿ ಪಿಎಫ್ಐ ಕೇಸ್‌ ಹಿಂಪಡೆದಿಲ್ಲ: ರಾಮಲಿಂಗಾರೆಡ್ಡಿ

10:38 PM Oct 07, 2022 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ಅವಧಿಯಲ್ಲಿ ಕಾಂಗ್ರೆಸ್‌ ಸರ್ಕಾರ ಪಿಎಫ್‌ಐ ಮೇಲಿನ ಒಂದೇ ಒಂದು ಪ್ರಕರಣವನ್ನು ಹಿಂಪಡೆದಿಲ್ಲ. ಆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಆರ್‌.ಅಶೋಕ್‌, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಮಾಡಿರುವ ಆರೋಪಗಳನ್ನು ಹಿಂಪಡೆಯಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆಗ್ರಹಿಸಿದ್ದಾರೆ.

Advertisement

ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಸಿದ್ದರಾಮಯ್ಯ ಸರ್ಕಾರದಲ್ಲಿ ಪಿಎಫ್‌ಐ ಮೇಲಿನ ಪ್ರಕರಣಗಳನ್ನು ವಾಪಸ್‌ ಪಡೆಯಲಾಗಿದೆ ಎಂದು ಆರೋಪ ಮಾಡುತ್ತಿದ್ದಾರೆ. ಆದರೆ ನಾನು, ಆರ್‌ಟಿಐ ಮೂಲಕ ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಆದರೆ ಒಂದೇ ಒಂದು ಪಿಎಫ್ಐ ಕೇಸ್‌ ಹಿಂಪಡೆದಿಲ್ಲ ಎಂದು ಅಂಕಿ-ಅಂಶ ಸಮೇತ ಮಾಹಿತಿ ನೀಡಿದರು.

ಗೃಹ ಇಲಾಖೆಯಿಂದ ಒಟ್ಟು 205 ಪುಟಗಳ ಮಾಹಿತಿ ಪಡೆದಿದ್ದೇನೆ. ನಮ್ಮ ಸರ್ಕಾರ ಹಾಗೂ ಸಮ್ಮಿಶ್ರ ಸರ್ಕಾರ ಇದ್ದಾಗ 254 ಪ್ರಕರಣಗಳನ್ನು ಹಿಂಪಡೆದಿದ್ದೇವೆ. ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ ಪಿಎಫ್‌ಐ ಗೆ ಸಂಬಂಧಿಸಿದಂತೆ ಯಾವುದೇ ಕೇಸ್‌ ಹಿಂಪಡೆದಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಒಟ್ಟು 367 ಕೇಸ್‌ ಹಿಂಪಡೆಯಲಾಗಿದೆ. ಸಂಘ ಪರಿವಾರಕ್ಕೆ ಸಂಬಂಧಿಸಿದಂತೆ 40, ಟಿಪ್ಪು ವಿವಾದ 21, ಕೋಮುಗಲಭೆಗೆ ಸಂಬಂಧಿಸಿದ 8 ಪ್ರಕರಣಗಳನ್ನು ಹಿಂಪಡೆಯಲಾಗಿದೆ. 2022ರಲ್ಲಿ ಬಿಜೆಪಿ ಸರ್ಕಾರ ಸಂಘಪರಿವಾರದ ಮೂಲದವರ ಒಟ್ಟು 58 ಪ್ರಕರಣಗಳನ್ನು ಹಿಂಪಡೆದಿದೆ ಎಂದು ತಿಳಿಸಿದರು.

ಅರ್ಥವಿಲ್ಲದ ಆರೋಪ ಮಾಡುತ್ತಾ ಬಿಜೆಪಿ ಮುಖಂಡರು ನಾಡಿನ ಜನರನ್ನ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಪಿಎಫ್‌ ಐ ಪ್ರಕರಣ ಹಿಂಪಡೆದಿದ್ದರೆ ಅದನ್ನು ಸಾಬೀತುಪಡಿಸಲಿ ಎಂದು ಸವಾಲು ಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next