Advertisement

Politics: ಲೋಕ ಚುನಾವಣೆ: ಮೀಸಲು ಕ್ಷೇತ್ರಗಳಲ್ಲಿ ಪರಿಶಿಷ್ಟರ ಸಂಘಟಿಸಲು ಕೈ ಸಚಿವರ ಸಂಕಲ್ಪ

10:17 PM Feb 08, 2024 | Team Udayavani |

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಕನಿಷ್ಠ 15 ಕ್ಷೇತ್ರಗಳಲ್ಲಿ ಗೆಲ್ಲದಿದ್ದರೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆಯನ್ನು ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಈ ಗುರಿಯನ್ನು ಮುಟ್ಟಲು ಮೀಸಲು ಕ್ಷೇತ್ರಗಳಲ್ಲಿ ಪರಿಶಿಷ್ಟರನ್ನು ಜಾಗೃತಿಗೊಳಿಸುವ ಹಾಗೂ ಸಂಘಟಿಸುವ ಕೆಲಸಕ್ಕೆ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಸಚಿವರ ಸಭೆ ಸಂಕಲ್ಪ ಮಾಡಿದೆ.
ತೆರಿಗೆ ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಪ್ರತಿಭಟಿಸಲು ದಿಲ್ಲಿಗೆ ತೆರಳಿದ್ದ ಸಚಿವರು, ಶಾಸಕರು, ಮೇಲ್ಮನೆ ಸದಸ್ಯರು ಬೆಂಗಳೂರಿಗೆ ವಾಪಸಾಗಿದ್ದು, ಅವರಲ್ಲಿ ಕೆಲವು ಸಚಿವರು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪರ ನಿವಾಸದಲ್ಲಿ ಸಮಾಲೋಚನೆ ನಡೆಸಿದ್ದಾರೆ.

Advertisement

ಗೃಹ ಸಚಿವ ಡಾ| ಜಿ.ಪರಮೇಶ್ವರ್‌, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹಾಗೂ ಸಮಾಜ ಕಲ್ಯಾಣ ಸಚಿವ ಡಾ| ಎಚ್‌.ಸಿ.ಮಹದೇವಪ್ಪ ಅವರು ಲೋಕಸಭಾ ಚುನಾವಣೆಯ ತಂತ್ರಗಾರಿಕೆ ಬಗ್ಗೆ ಸಮಾಲೋಚಿಸಿದ್ದಾರೆ. ಪಕ್ಷವು 15 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ತಲುಪಲು ಮೀಸಲು ಕ್ಷೇತ್ರಗಳು (ಎಸ್‌ಸಿ-5, ಎಸ್‌ಟಿ-2) ಅತ್ಯಂತ ಪ್ರಮುಖವಾಗಿವೆ. ಈ ಕ್ಷೇತ್ರಗಳಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಸ್ಥಾನಗಳು ದೊರೆತಿದ್ದು, ಅವುಗಳನ್ನು ಅದೇ ರೀತಿ ಮುಂದುವರಿಸಿಕೊಂಡು ಹೋದರೆ ಈ ಸಲವೂ ಹೆಚ್ಚಿನ ಫ‌ಲಿತಾಂಶ ಸಿಗಲಿದೆ. ಅದಕ್ಕಾಗಿ ಬಿಜೆಪಿಯ ಕುತಂತ್ರದ ಬಗ್ಗೆ ಪರಿಶಿಷ್ಟರು ಮೋಸಕ್ಕೆ ಒಳಗಾಗದಂತೆ ಜಾಗೃತಿಗೊಳಿಸುವ ಮತ್ತು ಸಂಘಟಿಸುವ ಕೆಲಸ ಆಗಬೇಕಾಗಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿವೆ ಎನ್ನಲಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಕೇವಲ 5 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂಬ ಸಮೀಕ್ಷೆ ವರದಿಗಳ ಬಗ್ಗೆಯೂ ಸಭೆ ಕಳವಳ ವ್ಯಕ್ತಪಡಿಸಿದೆ ಎಂದು ಹೇಳಲಾಗಿದೆ. ಈ ಸಮೀಕ್ಷೆಗಳೆಲ್ಲವನ್ನೂ ಸುಳ್ಳು ಮಾಡಬೇಕಾದರೆ ಆದಷ್ಟು ಬೇಗ ಅಭ್ಯರ್ಥಿಗಳನ್ನು ಪ್ರಕಟಿಸಿ ಕ್ಷೇತ್ರಗಳಲ್ಲಿ ಪ್ರಚಾರಕ್ಕಿಳಿಸಬೇಕು ಹಾಗೂ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸಬೇಕು ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಕಾಂಗ್ರೆಸ್‌ ಪಕ್ಷ ಸೇರ್ಪಡೆಗೆ ದಿನಾಂಕ ನಿಗದಿಗೆ ಕಾಯುತ್ತಿರುವ ತುಮಕೂರಿನ ಮಾಜಿ ಸಂಸದ ಎಸ್‌.ಪಿ.ಮುದ್ದಹನುಮೇ ಗೌಡ ಹಾಗೂ ಚಿತ್ರದುರ್ಗ ಮಾಜಿ ಸಂಸದ ಬಿ.ಎನ್‌.ಚಂದ್ರಪ್ಪ ಕೂಡ ಈ ಸಭೆಯಲ್ಲಿ ಭಾಗಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next