ನವದೆಹಲಿ: ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಪ್ರತಿಪಕ್ಷಗಳ ಒಗ್ಗಟ್ಟಿಗೆ ಕರೆ ನೀಡಿದ್ದು, ಶನಿವಾರ 22 ಮಂದಿ ಪ್ರಮುಖ ವಿಪಕ್ಷ ನಾಯಕರಿಗೆ ಪಾತ್ರ ಬರೆದು ಜೂನ್ 15 ರಂದು ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗಿಯಾಗಿ ಸಾಂವಿಧಾನಿಕ ಚೌಕಟ್ಟಿನಲ್ಲಿ ಒಂದಾಗಲು ಮನವಿ ಮಾಡಿದ್ದಾರೆ.
ದೆಹಲಿ ಸಿಎಂ, ಆಪ್ ನಾಯಕ ಅರವಿಂದ್ ಕೇಜ್ರಿವಾಲ್, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಕೇರಳದ ಪಿಣರಾಯಿ ವಿಜಯನ್, ಒಡಿಶಾ ಸಿಎಂ ನವೀನ್ ಪಟ್ನಾಯಕ್, ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್, ತಮಿಳುನಾಡಿನ ಎಂಕೆ ಸ್ಟಾಲಿನ್, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್, ಪಂಜಾಬ್ ಸಿಎಂ ಭಗವಂತ್ ಮಾನ್ ಮತ್ತು ಇತರ ವಿಪಕ್ಷಗಳ ನಾಯಕರಿಗೆ ಬಿಜೆಪಿ ವಿರುದ್ಧ ಸಂಘಟಿತವಾಗಲು ಕರೆ ನೀಡಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಮತಾ ಬ್ಯಾನರ್ಜಿ ಮತ್ತು ಡಿಎಂಕೆ, ಸಿಪಿಐ, ಸಿಪಿಐ-ಎಂ ಮತ್ತು ಎಎಪಿ ನಾಯಕರೊಂದಿಗೆ ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯನ್ನು ಘೋಷಿಸಲು ಸಮಾಲೋಚನೆ ನಡೆಸಿದ ನಂತರ ಈ ಬೆಳವಣಿಗೆಯಾಗಿದ್ದು, ಪಿಟಿಐ ಮೂಲಗಳ ಪ್ರಕಾರ, ಖರ್ಗೆ ಅವರು ಬ್ಯಾನರ್ಜಿ ಅವರಿಗೆ ಕರೆ ಮಾಡಿ,ಉನ್ನತ ಹುದ್ದೆಗೆ ಒಮ್ಮತದ ಅಭ್ಯರ್ಥಿಯನ್ನು ಪ್ರತಿಪಕ್ಷಗಳು ಹಾಕಬೇಕು ಎಂದು ಹೇಳಿದ್ದಾರೆ.
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಕೊನೆಗೊಳ್ಳುವ ಹಿನ್ನೆಲೆಯಲ್ಲಿ, ಭಾರತದ ಮುಂದಿನ ರಾಷ್ಟ್ರಪತಿ ಆಯ್ಕೆಗೆ ಜುಲೈ 18 ರಂದು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಗುರುವಾರ ಪ್ರಕಟಿಸಿದೆ.
ಮುಂದಿನ ರಾಷ್ಟ್ರಪತಿಯನ್ನು ಆಯ್ಕೆ ಮಾಡಲು ಸಂಸದರು ಮತ್ತು ಶಾಸಕರನ್ನು ಒಳಗೊಂಡ 4,809 ಮತದಾರರು ಮತ ಚಲಾಯಿಸಲಿದ್ದಾರೆ. ಲೋಕಸಭೆ, ರಾಜ್ಯಸಭೆ ಮತ್ತು ಹಲವಾರು ರಾಜ್ಯ ವಿಧಾನಸಭೆಗಳಲ್ಲಿ ಬಿಜೆಪಿ ಬಲವನ್ನು ಪರಿಗಣಿಸಿದರೆ ಬಿಜೆಪಿಯ ಅಭ್ಯರ್ಥಿಯು ಆರಾಮದಾಯಕ ಗೆಲುವು ಸಾಧಿಸುವ ನಿರೀಕ್ಷೆಯಿದೆ.