Advertisement

ಮಕ್ಕಳ ಆರೋಗ್ಯಕ್ಕೆ ಆದ್ಯತೆ, ರಾಜ್ಯವ್ಯಾಪಿ ವಾತ್ಸಲ್ಯ

12:26 AM Aug 13, 2021 | Team Udayavani |

ಮಂಗಳೂರು: ಸಂಭಾವ್ಯ ಕೊರೊನಾ 3ನೇ ಅಲೆಯಲ್ಲಿ ಮಕ್ಕಳ ಆರೋಗ್ಯಕ್ಕೆ ಆದ್ಯತೆ ನೀಡಲಾಗುತ್ತದೆ. ಅವರ ಆರೋಗ್ಯ ಸುಧಾರಣೆಗೆ ಸಂಬಂಧಿಸಿ ಉಡುಪಿ ಮತ್ತು ಹಾವೇರಿ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಜಾರಿಗೊಂಡಿರುವ “ವಾತ್ಸಲ್ಯ’ ಯೋಜನೆಯನ್ನು ರಾಜ್ಯವ್ಯಾಪಿ ವಿಸ್ತರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ವೆನ್ಲಾಕ್‌ ಜಿಲ್ಲಾಸ್ಪತ್ರೆಯಲ್ಲಿ 32 ಹಾಸಿಗೆಗಳ ಐಸಿಯುವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಆರೋಗ್ಯದತ್ತ ಗಮನ ನೀಡುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದೇನೆ. ವಾತ್ಸಲ್ಯ ಯೋಜನೆಯನ್ನು ಎಲ್ಲ ಜಿಲ್ಲೆಗಳಿಗೆ ವಿಸ್ತರಿಸುತ್ತೇವೆ ಎಂದರು.

ಮಕ್ಕಳ ರೋಗ ನಿರೋಧಕ ಶಕ್ತಿ ಸದೃಢಗೊಳಿಸುವುದಕ್ಕಾಗಿ ಗ್ರಾಮ ಮಟ್ಟದಲ್ಲಿ ಮಕ್ಕಳ ಆರೋಗ್ಯ ಪರೀಕ್ಷೆ, ಚಿಕಿತ್ಸಾ ಶಿಬಿರ ನಡೆಸಬೇಕು, ಪೌಷ್ಟಿಕ ಆಹಾರ ಪೂರೈಕೆಗೆ ನಿಗಾ ಇರಿಸಬೇಕು ಎಂದು ಸಿಎಂ ಸೂಚನೆ ನೀಡಿದರು. ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಐಸಿಯು ನಿರ್ಮಿಸಲಾಗುವುದು, ವೆನ್ಲಾಕ್‌ ಐಸಿಯು ನಲ್ಲಿ ಶೇ. 50ರಷ್ಟು ಮಕ್ಕಳ ಚಿಕಿತ್ಸೆಗೆ ಮೀಸಲಿಡಲಾಗುವುದು ಎಂದರು.

ದ.ಕ. ಜಿಲ್ಲೆಯಲ್ಲಿ ಕೊರೊನಾ ಸಂಪೂರ್ಣ ನಿಯಂತ್ರಣ ಸರಕಾರದ ಉದ್ದೇಶ. ಕೇರಳ ಮತ್ತು ಮಹಾರಾಷ್ಟ್ರದಿಂದ ಕೋವಿಡ್‌ ರಾಜ್ಯಕ್ಕೆ ವ್ಯಾಪಿಸಿದ್ದರಿಂದ ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಆರೋಗ್ಯ ಇಲಾಖೆ ಸನ್ನದ್ಧ :

Advertisement

ಮುಂದಿನ ದಿನಗಳಲ್ಲಿ ಯಾವುದೇ ಪರಿಸ್ಥಿತಿ ಎದುರಿಸಲು ಆರೋಗ್ಯ ಇಲಾಖೆ ಸನ್ನದ್ಧವಾಗಿರಬೇಕೆಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ರಾಜ್ಯಾದ್ಯಂತ ವೆಂಟಿಲೇಟರ್‌, ಐಸಿಯು, ಆಮ್ಲಜನಕಯುಕ್ತ ಹಾಸಿಗೆ ಹೆಚ್ಚಿಸಲಾಗುವುದು ಎಂದರು.

ಎರಡೂ ಡೋಸ್‌ ಕೋವಿಡ್‌ ಲಸಿಕೆ ಪಡೆದವರಿಗೂ ಸೋಂಕು ಬಾಧಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಸಚಿವ ಡಾ| ಕೆ. ಸುಧಾಕರ್‌, ಎರಡೂ ಡೋಸ್‌ ಲಸಿಕೆ ಪಡೆದವರಿಗೆ ಸೋಂಕು ತಗಲಿರುವ ಸಂಖ್ಯೆ ವಿರಳ. ತಗಲಿದರೂ ತೀವ್ರತೆ ಕಡಿಮೆ ಇರುತ್ತದೆ ಎಂದರು.

ಪರ್ಯಾಯ ದಿನಗಳಲ್ಲಿ ತರಗತಿ:

9ನೇ ತರಗತಿಯಿಂದ ಪಿಯುಸಿಯ ವರೆಗೆ ದಿನ ಬಿಟ್ಟು ದಿನ ಶಾಲೆ, ಕಾಲೇಜು ತೆರೆಯುವ ಬಗ್ಗೆ ಚಿಂತನೆ ಮಾಡಲಾಗಿದೆ. ಇದರ ಪ್ರಗತಿಯನ್ನು ನೋಡಿ ಮುಂದಿನ ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next