ಬೆಂಗಳೂರು: ಉಪ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್-ಜೆಡಿಎಸ್ ಈಗ ಸಮ್ಮಿಶ್ರ ಸರ್ಕಾರದಲ್ಲಿ ಖಾಲಿ ಇರುವ ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಮುಂದಾಗಿದೆ. ಈ ನಿಟ್ಟಿನಲ್ಲಿ ಮಾತುಕತೆಗಳು ಪ್ರಾರಂಭವಾಗಿದ್ದು ನವೆಂಬರ್ 25 ರೊಳಗೆ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗುವ ಸಾಧ್ಯತೆಯಿದೆ.
ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆ ನಗರದಲ್ಲಿದ್ದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಚರ್ಚಿಸಿದ್ದು ಸಂಪುಟ ವಿಸ್ತರಣೆಗೆ ಗೌಡರೂ ಕೂಡ ಒಪ್ಪಿಗೆ ನೀಡಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಜತೆಗೆ 30 ಪ್ರಮುಖ ನಿಗಮ-ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನ ಭರ್ತಿ ಮಾಡಲು ಬಹುತೇಕ ತೀರ್ಮಾನವಾಗಿದ್ದು ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಅವರ ಜತೆ ಮಾತನಾಡಿ ಅಂತಿಮಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಮಧ್ಯೆ, ಉಪ ಚುನಾವಣೆ ಫಲಿತಾಂಶದ ಬೆನ್ನಲ್ಲೇ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ನಲ್ಲಿರುವ ಸಚಿವಾಕಾಂಕ್ಷಿಗಳು ಲಾಬಿ ಪ್ರಾರಂಭಿಸಿದ್ದು ನಾಯಕರ ಮೇಲೆ ಒತ್ತಡ ಹಾಕುತ್ತಿದ್ದಾರೆ.
ಸಂಪುಟದಲ್ಲಿ ಕಾಂಗ್ರೆಸ್ನಿಂದ ಆರು ಸ್ಥಾನಗಳು ಖಾಲಿ ಇದ್ದು ಜೆಡಿಎಸ್ನಿಂದ ಎರಡು ಸ್ಥಾನಗಳು ಖಾಲಿ ಉಳಿದಿವೆ. ಕಾಂಗ್ರೆಸ್ನ ಆರು ಸ್ಥಾನಕ್ಕೆ 20 ಕ್ಕೂ ಹೆಚ್ಚು ಶಾಸಕರು ಪೈಫೋಟಿಯಲ್ಲಿದ್ದು, ಅವರಲ್ಲಿ ಕೆಲವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಸಮಾಧಾನ ಪಡಿಸಲು ನಿರ್ಧರಿಸಲಾಗಿದೆ.