Advertisement

ಶಿಶು ಮರಣ ಪ್ರಮಾಣ ತಗ್ಗಿಸಲು ಕಾರ್ಯಕ್ರಮ ಹಾಕಿಕೊಳ್ಳಿ

06:28 AM Jan 24, 2019 | Team Udayavani |

ಕಲಬುರಗಿ: ಜಿಲ್ಲೆಯಲ್ಲಿ ಕಡಿಮೆ ತೂಕದ ಜನನ ಹಾಗೂ ಅಸಿಕ್ಸಿಯಾವೇ ಶಿಶು ಮರಣಕ್ಕೆ ಮೂಲ ಕಾರಣವಾಗಿದೆ. ಇದನ್ನು ತಡೆಗಟ್ಟಲು ಆರೋಗ್ಯ ಇಲಾಖೆಯೂ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮಿಷನ್‌ ಕುರಿತು ಆರೋಗ್ಯ ಇಲಾಖೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಡಿಮೆ ತೂಕದ ಮಕ್ಕಳ ಜನನಕ್ಕೆ ಕಡಿವಾಣ ಹಾಕಲು ಹಾಗೂ ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಲು ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ನೀಡುವ ಮಾತೃಪೂರ್ಣ ಯೋಜನೆ ಜಾರಿಗೊಳಿಸಲಾಗಿದೆ. ಇಲ್ಲಿ ಗರ್ಭಿಣಿಯರು ಉತ್ತಮ ಪೌಷ್ಟಿಕ ಆಹಾರ ಸೇವಿಸುತ್ತಿರುವ ಬಗ್ಗೆ ಸ್ಥಳೀಯ ಆಶಾ ಕಾರ್ಯಕರ್ತೆಯರು ಮೇಲ್ವಿಚಾರಣೆ ಮಾಡಬೇಕು ಎಂದು ಹೇಳಿದರು.

ಇದಲ್ಲದೆ ಆಶಾ ಕಾರ್ಯಕರ್ತೆಯರು ವಾರಕೊಮ್ಮೆ ತಮ್ಮ ವ್ಯಾಪ್ತಿಯಲ್ಲಿ ಬರುವ ಗರ್ಭಿಣಿಯರ ಮನೆಗೆ ಭೇಟಿ ನೀಡಿ ಅವರ ವೈದ್ಯಕೀಯ ಚಿಕಿತ್ಸೆ ಮತ್ತು ಊಟೋಪಚಾರದ ಬಗ್ಗೆ ವಿಚಾರಿಸುವಂತಾಗಬೇಕು. ಈ ಬಗ್ಗೆ ಆಶಾ ಕಾರ್ಯಕರ್ತೆಯರಿಗೆ ಅಗತ್ಯ ನಿರ್ದೇಶನ ನೀಡಿ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಆಯಾ ಸಿಎಚ್ಸಿ ಮತ್ತು ಪಿಎಚ್ಸಿ ವೈದ್ಯಾಧಿಕಾರಿಗಳು ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಸಹ ನಿಯಮಿತವಾಗಿ ಮನೆ ಮನೆಗೆ ಭೇಟಿ ನೀಡಿ ಗರ್ಭಿಣಿಯರ ಆರೋಗ್ಯ ವಿಚಾರಣೆ ಮತ್ತು ಅವರ ಆಹಾರ ಸೇವನೆ ಕ್ರಮದ ಬಗ್ಗೆ ಪರಿಶೀಲಿಸಬೇಕು ಎಂದು ಹೇಳಿದರು.

Advertisement

ಜಿಲ್ಲೆಗೆ 108 ತುರ್ತು ಸೇವೆಯಡಿ 17 ಹೊಸ ಆಂಬ್ಯುಲೆನ್ಸ್‌ ವಾಹನಗಳು ಸರಬರಾಜಾಗಿದ್ದು, ಒಟ್ಟಾರೆ 25 ವಾಹನಗಳನ್ನು ಕಾರ್ಯನಿರ್ವಹಿಸುತ್ತಿವೆ. 108 ತುರ್ತು ಸೇವೆಗೆ ಜಿಲ್ಲೆಗೆ ಹಂಚಿಕೆಯಾಗಿರುವ ವಾಹನಗಳಲ್ಲಿ ಅಗತ್ಯವಿರುವ ವೈದ್ಯಕೀಯ ಉಪಕರಣಗಳ ಬಗ್ಗೆ ಆಗಾಗ ಪರಿಶೀಲಿಸಲು ಅಧಿಕಾರಿಗಳ ತಂಡ ರಚಿಸಿ. ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲ ಆರೋಗ್ಯ ಸಂಸ್ಥೆಗಳಲ್ಲಿ ಕನಿಷ್ಠ ಪ್ರಮಾಣದಲ್ಲಿಯಾದರು ನಿಯಮಿತವಾಗಿ 24 ಗಂಟೆ ನಿರಂತರ ರಕ್ತ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಗರ್ಭಿಣಿಯರಿಗೆ ಆರೋಗ್ಯ ಇಲಾಖೆಯಿಂದ ನೀಡಲಾಗುವ ಆರೋಗ್ಯ ಸೇವೆಗಳು ಸರಿಯಾಗಿ ಫಲಾನುಭವಿಗಳಿಗೆ ತಲುಪುತ್ತಿವೆ ಎಂಬುದರ ಬಗ್ಗೆಯೂ ನಿಗಾವಹಿಸಿ ಹಾಗೂ ಮಾಸಿಕವಾಗಿ ಇದನ್ನು ಸಹ ಅಡಿಟ್ ಮಾಡಿಸಿ. ಮುಂದಿನ ಸಭೆಗೆ ಬರುವಾಗ ಹಿಂದಿನ ಸಭೆಗಳಲ್ಲಿ ಕೈಗೊಂಡ ನಿರ್ಣಯಕ್ಕನುಗುಣವಾಗಿ ಕ್ರಿಯಾ ಯೋಜನೆ ಮತ್ತು ಕಾರ್ಯಾನುಷ್ಠಾನದ ವರದಿ ತರಬೇಕು ಎಂದು ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next