Advertisement

ಲೋಪ ಕಂಡು ಬಂದರೆ ನೋಟಿಸ್‌ ನೀಡಿ

05:46 PM Jun 30, 2020 | Suhan S |

ಬೆಳಗಾವಿ: ಸ್ಮಾರ್ಟ್‌ಸಿಟಿ ಯೋಜನೆ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಲ್ಲಿ ಸಮಾಧಾನಕರ ಪ್ರತಿಕ್ರಿಯೆ ಇಲ್ಲ. ದೂರುಗಳು ಸಾಕಷ್ಟು ಕೇಳುತ್ತಿವೆ. ಈ ಹಿನ್ನೆಲೆಯಲ್ಲಿ ನಿಗದಿತ ಸಮಯಕ್ಕೆ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸದೇ ಇದ್ದರೆ ನೋಟಿಸ್‌ ನೀಡಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸೋಮವಾರ ಮಹಾನಗರ ಪಾಲಿಕೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸ್ಮಾರ್ಟ್‌ಸಿಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಮಗಾರಿಗಳನ್ನು ಕೈಗೊಂಡ ಸಮಯದಲ್ಲಿ ಲೋಪಗಳು ಕಂಡು ಬಂದರೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮೊದಲು ನೋಟಿಸ್‌ ನೀಡಿ ನಂತರ ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಬೇಕು. ಸ್ಮಾರ್ಟ್ ಸಿಟಿ ಕಾಮಗಾರಿಗೆ ಪರಿಸರ ಇಲಾಖೆಯವರು ತಡ ಮಾಡದೆ ಅನುಮತಿ ನೀಡಬೇಕು. ಪರಿಸರ ಇಲಾಖೆಯಿಂದ ಅನುಮತಿ ಸಿಗದ ಕಾರಣ ಸಾಕಷ್ಟು ಕಾಮಗಾರಿಯಲ್ಲಿ ವಿಳಂಬ ಆಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.

ನಗರದ ವಂಟಮೂರಿ ಪ್ರದೇಶದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಾಣ ಆಗಿರುವ ರಸ್ತೆಗಳ ಪಕ್ಕದಲ್ಲಿ ನೆಲ ಅಗೆಯಲಾಗಿದ್ದು, ಇದರಿಂದ ಜನರಿಗೆ ತುಂಬಾ ತೊಂದರೆ ಆಗುತ್ತಿದೆ. ಈಗ ಮಳೆಗಾಲ ಆರಂಭವಾಗಿರುವುದರಿಂದ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚು. ಕಾರಣ ತಕ್ಷಣ ಇದರ ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು ಎಂದು ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ಅವರಿಗೆ ಸೂಚನೆ ನೀಡಿದರು. ನಗರದಲ್ಲಿ ಕಸ ವಿಲೇವಾರಿಗೆ ಸಂಬಂಧಿಸಿದಂತೆ ಬುಡಾ, ಪಾಲಿಕೆ ಹಾಗೂ ಕಂಟೇನ್ಮೆಂಟ್‌ ಬೋರ್ಡ್‌ದವರು ಮೀಟಿಂಗ್‌ ಮಾಡಿಕೊಂಡು ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು.

ಬೆಳಗಾವಿ ಉತ್ತರ ಶಾಸಕ ಅನಿಲ ಬೆನಕೆ ಮಾತನಾಡಿ, ನಗರದ ಅನೇಕ ಕಡೆಗಳಲ್ಲಿ ವಿದ್ಯುತ್‌ ಸಮಸ್ಯೆ ಉಂಟಾಗುತ್ತಿದೆ. ಅಂಡರ್‌ ಕೇಬಲ್‌ ಕಾಮಗಾರಿ ವೇಳೆ ರಸ್ತೆಗಳನ್ನು ಅಗೆಯಲಾಗಿದ್ದು, ಈ ರಸ್ತೆಗಳನ್ನು ಸರಿಪಡಿಸುವ ಕಾಮಗಾರಿ ಇದುವರೆಗೆ ಪೂರ್ಣವಾಗಿಲ್ಲ. ಇದರಿಂದಾಗಿ ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಸಾಕಷ್ಟು ಸಲ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಮಾತನಾಡಿ, ತಮ್ಮ ಕ್ಷೇತ್ರದಲ್ಲಿ ಸ್ಮಾರ್ಟ್‌ಸಿಟಿಯ 90 ಪ್ರತಿಶತ ಕಾಮಗಾರಿಗಳು ಪೂರ್ಣಗೊಂಡಿವೆ. ಆದರೆ ಉಳಿದ ಕಾಮಗಾರಿಗಳಲ್ಲಿ ವಿಳಂಬವಾಗುತ್ತಿದೆ. ಟೆಂಡರ್‌ ಪಡೆದುಕೊಂಡವರು ನಿಗದಿತ ಸಮಯಕ್ಕೆ ಕಾಮಗಾರಿ ಮುಗಿಸದಿದ್ದರೆ ಅವರಿಗೆ ನೋಟಿಸ್‌ ನೀಡಬೇಕು. ಪಿಎಂಸಿ ಕಂಪನಿಯವರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಹೇಳಿದರು.

Advertisement

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಮಾತನಾಡಿ, ಮಹಾನಗರ ಪಾಲಿಕೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸ್ಮಾರ್ಟ್‌ ಸಿಟಿ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಸ್ಥಳೀಯ ಮಟ್ಟದಲ್ಲಿ ಆಗುವ ಕೆಲಸಗಳಿಗೆ ಆದ್ಯತೆ ನೀಡಬೇಕು. ಸರ್ಕಾರಕ್ಕೆ ವರದಿ ಸಲ್ಲಿಸಿ ಅನುಮತಿ ಸಿಗುವವರೆಗೆ ಕಾಯಬೇಡಿ ಎಂದು ಸಲಹೆ ನೀಡಿದರು.

ಸ್ಮಾರ್ಟ್‌ಸಿಟಿ ಕಾಮಗಾರಿಗಳ ಬಗ್ಗೆ ವಿವರಣೆ ನೀಡಿದ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ, ಈಗಾಗಲೇ 49 ಕೋಟಿ ರೂ. ವೆಚ್ಚದಲ್ಲಿ ಕಮಾಂಡ್‌ ಸೇಂಟರ್‌ ನಿರ್ಮಾಣ ಮಾಡಲಾಗಿದೆ. ಒಂಟಮೂರಿಯಲ್ಲಿ 30 ಹಾಸಿಗೆ ಆಸ್ಪತ್ರೆ ನಿರ್ಮಾಣ, 5 ಕೋಟಿ ರೂ. ವೆಚ್ಚದಲ್ಲಿ 11 ಸ್ಮಾರ್ಟ್‌ ಕ್ಲಾಸ್‌ ರೂಮ್‌ ನಿರ್ಮಾಣ ಮಾಡಲಾಗಿದೆ. ನಗರದ 12 ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ ಮಾಡಲಾಗಿದೆ. 32 ಕೋಟಿ ವೆಚ್ಚದಲ್ಲಿ ಸಿಬಿಟಿ ಬಸ್‌ ನಿಲ್ದಾಣ ಕಾಮಗಾರಿ ಆರಂಭಿಸಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದು ಹೇಳಿದರು.

ಪಾಲಿಕೆ ಆಯುಕ್ತ ಜಗದೀಶ ಕೆ.ಎಚ್‌ ಮಾತನಾಡಿ, ಮಹಾನಗರ ಪಾಲಿಕೆ ವ್ಯಾಪ್ತಿಯ ಎಪಿಎಂಸಿ ರಸ್ತೆಯಲ್ಲಿ ನಿರ್ಮಾಣ ಮಾಡುತ್ತಿರುವ ಕಾಂಪ್ಲೆಕ್ಸ್‌ ಕಾಮಗಾರಿ ಅಂತಿಮ ಹಂತದಲ್ಲಿದೆ ಎಂದರು. ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪ್ರೀತಮ ನಸಲಾಪುರೆ ಮಾತನಾಡಿ, ನಗರಾಭಿವೃದ್ಧಿ ಪ್ರಾಧಿಕಾರವು ಒಟ್ಟು 19 ಯೋಜನೆ ಒಳಗೊಂಡಿದೆ. ಅದರಲ್ಲಿ 17 ಯೋಜನೆಗಳನ್ನು ಪಾಲಿಕೆಗೆ ಹಸ್ತಾಂತರ ಮಾಡಲಾಗಿದೆ ಎಂದರು. ರಾಮತೀರ್ಥ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ವರದಿ ಸಲ್ಲಿಸಲಾಗಿದ್ದು, ಅನುಮೋದನೆ ಸಿಕ್ಕ ತಕ್ಷಣ ಕೆಲಸ ಪ್ರಾರಂಭಿಸಲಾಗುವುದು. ಇದಲ್ಲದೆ ಯೋಜನೆ ಸಂಖ್ಯೆ 61ರ ಅಡಿ ಕಣಬರ್ಗಿಯಲ್ಲಿ 23 ಎಕರೆಯಲ್ಲಿ ಹೊಸದಾಗಿ 3,000 ಮನೆಗಳ ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದರು.

ವಿಧಾನ ಪರಿಷತ್‌ ಸರಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗೂಳಪ್ಪ ಹೊಸಮನಿ, ಡಿಸಿ ಡಾ| ಎಸ್‌.ಬಿ ಬೊಮ್ಮನಹಳ್ಳಿ ಇದ್ದರು. ನಗರದ ತ್ಯಾಜ್ಯ ನಿರ್ವಹಣೆ ಮತ್ತು ವಿಲೇವಾರಿಯ ಐದು ಹೆಚ್ಚುವರಿ ವಾಹನಗಳಿಗೆ ಸಚಿವ ರಮೇಶ ಜಾರಕಿಹೊಳಿ ಚಾಲನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next