Advertisement

ಬಡ್ತಿ ಮೀಸಲಾತಿ:ಕೋರ್ಟ್‌ ಆದೇಶ ಪಾಲನೆಗೆ ಸಿಎಸ್‌ ಸೂಚನೆ

07:00 AM Apr 05, 2018 | Team Udayavani |

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಸರ್ಕಾರಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವ ಕಾಯ್ದೆಯನ್ನು ರದ್ದುಪಡಿಸಿ ಸುಪ್ರೀಂ ಕೋರ್ಟ್‌ ನೀಡಿದ ಆದೇಶವನ್ನು ಎಲ್ಲಾ ಇಲಾಖೆಗಳು ಕಡ್ಡಾಯವಾಗಿ ಪಾಲನೆ ಮಾಡಿ, ಏಪ್ರಿಲ್‌ 16 ರೊಳಗೆ ವರದಿ ಸಲ್ಲಿಸುವಂತೆ ಮುಖ್ಯಕಾರ್ಯದರ್ಶಿ ರತ್ನಪ್ರಭಾ ಇಲಾಖಾ ಮುಖ್ಯಸ್ಥರಿಗೆ ನಿರ್ದೇಶನ ನೀಡಿದ್ದಾರೆ.

Advertisement

ಈ ಕುರಿತು ಸುತ್ತೋಲೆ ಹೊರಡಿಸಿರುವ ಮುಖ್ಯ ಕಾರ್ಯದರ್ಶಿಗಳು, ಬಡ್ತಿ ಮೀಸಲು ಕುರಿತ ಸುಪ್ರೀಂ ಕೋರ್ಟ್‌ ಆದೇಶ ಪಾಲನೆಗೆ ಸಮಯಾವಕಾಶ ಕೇಳಲು ಸಾಧ್ಯವಿಲ್ಲ ಎಂದು ಅಡ್ವೋಕೇಟ್‌ ಜನರಲ್‌ ಮತ್ತು ಕಾನೂನು ಇಲಾಖೆ ತನ್ನ ಅಭಿಪ್ರಾಯ ತಿಳಿಸಿದೆ. ಹೀಗಾಗಿ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಬಡ್ತಿ ಮೀಸಲಾತಿ ವಿಷಯವನ್ನು ಆದ್ಯತೆ ಮೇಲೆ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು. ಸುಪ್ರೀಂ ಕೋರ್ಟ್‌ ಆದೇಶ ಪಾಲನೆ ಮಾಡದ ಇಲಾಖೆಗಳ ಮುಖ್ಯಸ್ಥರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಈ ನಿಯಮ ಸರ್ಕಾರಿ ಇಲಾಖೆಗಳು ಮಾತ್ರವಲ್ಲದೆ, ವಿಶ್ವ ವಿದ್ಯಾಲಯಗಳು, ಸ್ವಾಯತ್ತ ಸಂಸ್ಥೆಗಳು, ಸಾರ್ವಜನಿಕ ಉದ್ದಿಮೆ, ಆಯೋಗ, ನಿಗಮ ಮಂಡಳಿಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವ ಸಂಸ್ಥೆಗಳಿಗೂ ಅನ್ವಯವಾಗಲಿದೆ ಎಂದು ಅವರು ಹೇಳಿದ್ದಾರೆ.

ಬಿ.ಕೆ. ಪವಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ 2017ರ ಫೆ. 9ರಂದು ಬಡ್ತಿ ಮೀಸಲು ಕಾಯ್ದೆಯನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿತ್ತು. ಆದರೆ, ಈ ಆದೇಶ ಪಾಲಿಸದ ಕಾರಣ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ಇನ್ನು ಒಂದು ತಿಂಗಳಲ್ಲಿ ಬಡ್ತಿ ಮೀಸಲಿನ ಅನುಕೂಲ ಪಡೆದವರಿಗೆ ಹಿಂಬಡ್ತಿ ನೀಡಬೇಕು. ಇಲ್ಲವಾದಲ್ಲಿ ಮುಖ್ಯ ಕಾರ್ಯದರ್ಶಿಯವರು ಏ. 25ರಂದು ಖುದ್ದು ಹಾಜರಾಗಬೇಕು ಎಂದು ಮಾ. 20ರಂದು ಸ್ಪಷ್ಟ ನಿರ್ದೇಶನ ನೀಡಿತ್ತು. ಅದರಂತೆ ಸುಪ್ರೀಂ ಕೋರ್ಟ್‌ ನೀಡಿರುವ ಕಾಲಮಿತಿ ಏ. 19ರಂದು ಕೊನೆಗೊಳ್ಳುತ್ತದೆ. ಇದರಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರ, ಸುಪ್ರೀಂ ಕೋರ್ಟ್‌ ಆದೇಶ ಪಾಲಿಸಲೇ ಬೇಕಾದ ಅನಿವಾರ್ಯತೆಗೆ ಸಿಲುಕಿದೆ.

Advertisement

Udayavani is now on Telegram. Click here to join our channel and stay updated with the latest news.

Next