Advertisement

ಸರ್ಕಾರದ ವಿರುದ್ಧ 14ರಿಂದ ಪ್ರತಿಭಟನೆ

06:44 AM Jun 12, 2019 | Team Udayavani |

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆಯಲ್ಲಿನ ವೈಫ‌ಲ್ಯ, ಸಾಲಮನ್ನಾ ವಿಚಾರದಲ್ಲಿ ಸರ್ಕಾರದ ನಡೆ ಹಾಗೂ ಜಿಂದಾಲ್‌ ಕಂಪನಿಗೆ ಭೂಮಿ ಪರಭಾರೆ ನಿರ್ಧಾರ ಖಂಡಿಸಿ ಇದೇ 14ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

Advertisement

ನಗರದ ಡಾಲರ್ ಕಾಲೋನಿ ನಿವಾಸದ ಬಳಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮೈತ್ರಿ ಸರ್ಕಾರದ ವಿರುದ್ಧ ಜನ ಆಕ್ರೋಶಗೊಂಡಿದ್ದಾರೆ. ಜಿಂದಾಲ್‌ ಕಂಪನಿಗೆ ಭೂಮಿ ಪರಭಾರೆ ಮಾಡುವ ನಿರ್ಧಾರಕ್ಕೆ ನಮ್ಮ ವಿರೋಧವಿದೆ. ಕಂಪನಿಗೆ ಭೂಮಿ ನೀಡುವುದರ ವಿರುದ್ಧವೂ ಹೋರಾಟ ಹಮ್ಮಿಕೊಳ್ಳಲಾಗಿದೆ. ಜಿಂದಾಲ್‌ ಕಂಪನಿಗೆ ಭೂಮಿ ನೀಡುವ ನಿರ್ಧಾರ ಹಿಂಪಡೆಯಲು ಸರ್ಕಾರ ಚಿಂತನೆ ನಡೆಸಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.

ರೈತರಿಗೆ ಮುಖ್ಯಮಂತ್ರಿ ದ್ರೋಹ: ಯಾದಗಿರಿಯಲ್ಲಿ ಲೋಕಸಭಾ ಚುನಾವಣೆಗೂ ಮೊದಲು ಸಾವಿರಾರು ರೈತರ ಸಾಲಮನ್ನಾ ಮಾಡಿ ಬ್ಯಾಂಕ್‌ಗಳಿಗೆ ಜಮೆ ಮಾಡಿದ ಹಣವನ್ನು ಚುನಾವಣೆ ಬಳಿಕ ಹಿಂಪಡೆಯಲಾಗಿದೆ. ದೇಶದ ಇತಿಹಾಸದಲ್ಲಿ ಇಂಥದ್ದು ನಡೆದಿಲ್ಲ, ಕೇಳಿಲ್ಲ. ಮುಖ್ಯಮಂತ್ರಿಯಾದ 24 ಗಂಟೆಯಲ್ಲಿ ಸಾಲಮನ್ನಾ ಮಾಡುವುದಾಗಿ ಹೇಳಿ ನಂತರ ರೈತರಿಗೆ ದ್ರೋಹ ಮಾಡಿದ್ದಾರೆ. ಯಾವ ಕಾರಣಕ್ಕೆ ಹಣ ವಾಪಸ್‌ ಪಡೆಯಲಾಗಿದೆ ಎಂಬ ಬಗ್ಗೆ ಮುಖ್ಯಮಂತ್ರಿಯವರು ಸ್ಪಷ್ಟನೆ ನೀಡಬೇಕು. ಕೂಡಲೇ ಮುಖ್ಯಮಂತ್ರಿಯವರು ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿ, ಐಎಂಎ ಜ್ಯುವೆಲ್ಲರ್ ಹೂಡಿಕೆದಾರರಿಗೆ ಮೋಸ ಮಾಡಿದಂತೆ ರಾಜ್ಯ ಸರ್ಕಾರ ರೈತರಿಗೆ ಮೋಸ ಮಾಡುತ್ತಿದೆ. 49,000 ಕೋಟಿ ರೂ. ಸಾಲ ಮನ್ನಾ ಮಾಡುವುದಾಗಿ ಹೇಳಿದ್ದವರು ನಂತರ ಮೋಸ ಮಾಡುತ್ತಿದ್ದಾರೆ. ಚುನಾವಣೆಗೂ ಮೊದಲು ಹಣ ಜಮೆ ಮಾಡಿ ನಂತರ ವಾಪಸ್‌ ಪಡೆಯುವುದು ಎಂದರೆ ಏನರ್ಥ. ಕೂಡಲೇ ಮುಖ್ಯಮಂತ್ರಿಯವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next