Advertisement
ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಿಎಂ ಯಡಿಯೂರಪ್ಪ ವಿಧಾನಸೌಧ ಪ್ರವೇಶಿಸುತ್ತಿದ್ದಂತೆ ಇತ್ತ ರಸ್ತೆಯಲ್ಲಿ ಜಮಾವಣೆಗೊಂಡ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಪಕ್ಷದ ಧ್ವಜ ಹಿಡಿದು ಪ್ರತಿಭಟನೆಗೆ ಮುಂದಾದರು.
Related Articles
Advertisement
ಮೆರವಣಿಗೆ ನಡೆಸಿದ ವಕೀಲರು ರಾಜ್ಯಪಾಲ ವಜೂಭಾಯಿವಾಲಾ ಗೋಬ್ಯಾಕ್, ಪ್ರಧಾನಿ ಮೋದಿಗೆ ಧಿಕ್ಕಾರ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರತಿಭಟನಾಕಾರರನ್ನು ರಾಜಭವನದ ಗೇಟ್ನಲ್ಲಿ ಪೊಲೀಸರು ತಡೆದರು.
ಈ ವೇಳೆ ಮಾತನಾಡಿದ ಪ್ರೊ. ರವಿವರ್ಮಕುಮಾರ್, ಸ್ಪಷ್ಟ ಬಹುಮತ ಸಾಬೀತಿಗೆ ಶಾಸಕ ಬಲ ಹೊಂದಿಲ್ಲದಿದ್ದರೂ ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡಿರುವ ರಾಜ್ಯಪಾಲರ ನಡೆ ಪ್ರಜಾತಂತ್ರದ ಕಗ್ಗೊಲೆ ಎಂದು ಆರೋಪಿಸಿದರು.
ಇನ್ನು ಮುಂಜಾಗ್ರತಾ ಕ್ರಮವಾಗಿ ರಾಜಭವನ, ವಿಧಾನಸೌಧ, ವಿಕಾಸ ಸೌಧ ಸೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಕೆಎಸ್ಆರ್ಪಿ ತುಕಡಿಗಳು ಸೇರಿದಂತೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಡಿಸಿಪಿ ಸೇರಿ ಹಿರಿಯ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು.
ಲಾಠಿ ಬೀಸಿದ ಪೊಲೀಸರು: ಬಹುಮತ ಇಲ್ಲದಿದ್ದರೂ ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ನೀಡಿದ ರಾಜ್ಯಪಾಲರ ನಿರ್ಧಾರವನ್ನು ಖಂಡಿಸಿ ಕಾರ್ಯಕರ್ತರು ರಾಜಭವನ ಮುತ್ತಿಗೆಗೆ ಯತ್ನಿಸಿದರು. ಈ ಸಂದರ್ಭದಲ್ಲಿ ಗುಂಪು ಚದುರಿಸಲು ಪೊಲೀಸರು ಲಾಠಿ ಬೀಸಿದರು.
ಮತ್ತೂಂದೆಡೆ ಯಡಿಯೂರಪ್ಪ ಅವರ ಅಧಿಕಾರ ಸ್ವೀಕಾರ ವಿರೋಧಿಸಿ ವಿಧಾನಸೌಧ ಹಿಂಭಾಗದ ಪ್ರವೇಶ ದ್ವಾರದ ಬಳಿ ಬೆಂಗಳೂರು ನಗರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್. ಪ್ರಕಾಶ್ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕತìರು ಪ್ರತಿಭಟನೆ ನಡೆಸಿದರು. ಬೆಳಗ್ಗೆ 10 ಗಂಟೆಗೆ ಜಮಾಯಿಸಿದ ಕಾರ್ಯಕರ್ತರು, ಕೆಲಹೊತ್ತು ರಾಜ್ಯಪಾಲರು ಹಾಗೂ ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿದರು. ಬಳಿಕ ಗಾಂಧಿಪ್ರತಿಮೆ ಮುಂಭಾಗ ಪಕ್ಷದ ಶಾಸಕರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ತೆರಳಿದರು.
ಖಾಕಿಮಯ: ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರತಿಭಟನೆ ಮುನ್ಸೂಚನೆ ಹಿನ್ನೆಲೆಯಲ್ಲಿ ಪೊಲೀಸರು, ಅಹಿತಕರ ಘಟನೆಗಳು ಸಂಭವಿಸಿದಂತೆ ತೀವ್ರ ನಿಗಾವಹಿಸಿದ್ದರು. ಇದರಿಂದ ರಾಜಭವನ ಬಳಿ ಕೇಸರಿ ಪಡೆಗಿಂತ ಖಾಕಿಧಾರಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು. ರಾಜಭವನ ರಸ್ತೆ, ಚಾಲುಕ್ಯ ವೃತ್ತ ಹಾಗೂ ವಿಧಾನಸಭಾ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಖುದ್ದು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಬಿ.ಕೆ. ಸಿಂಗ್ ಭದ್ರತಾ ಉಸ್ತುವಾರಿ ವಹಿಸಿದ್ದರು.