Advertisement

ಸಂಸದ ಪ್ರತಾಪ್‌ ಸಿಂಹ ಬಂಧನ ಖಂಡಿಸಿ ಪ್ರತಿಭಟನೆ

04:34 PM Dec 05, 2017 | Team Udayavani |

ಬೆಂಗಳೂರು: ಹನುಮ ಜಯಂತಿಯಲ್ಲಿ ಪಾಲ್ಗೊಳ್ಳಲು ಮೈಸೂರಿನಿಂದ ಹುಣಸೂರಿಗೆ ತೆರಳುತ್ತಿದ್ದ ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್‌ ಸಿಂಹ ಅವರನ್ನು ಪೊಲೀಸರು ಬಂಧಿಸಿದ್ದನ್ನು ವಿರೋಧಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

Advertisement

ಬಿಜೆಪಿ ಯುವ ಮೋರ್ಚಾ ಬೆಂಗಳೂರು ಅಧ್ಯಕ್ಷ ಸಪ್ತಗಿರಿಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ತಮ್ಮೇಶ್‌ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಯುವ ಮೋರ್ಚಾ ನೂರಾರು ಕಾರ್ಯಕರ್ತರು ರಾಜ್ಯದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ರಾಮಲಿಂಗಾರೆಡ್ಡಿ ಅವರ ಪ್ರತಿಕೃತಿ ದಹಿಸಿದರು.

ರಾಜ್ಯ ಸರ್ಕಾರ ಹಿಂದೂಗಳ ಬಗ್ಗೆ ದಮನಕಾರಿ ನೀತಿ ಅನುಸರಿಸುತ್ತಿದೆ. ಶಾಂತಿಯುತವಾಗಿ ಹನುಮ ಜಯಂತಿ ಆಚರಿಸಲು ಮುಂದಾದರೂ ಅದಕ್ಕೆ ಅಡ್ಡಿಪಡಿಸಿದೆ. ಅಲ್ಲದೆ, ಹನುಮಜಯಂತಿಗೆ ತೆರಳುತ್ತಿದ್ದ ಸಂಸದ ಪ್ರತಾಪ್‌ ಸಿಂಹ ಅವರನ್ನು ಬಂಧಿಸುವ ಮೂಲಕ ಸರ್ಕಾರವೇ ಕಾನೂನು ಸುವ್ಯವಸ್ಥೆ ಹಾಳುಗೆಡವಲು ಯತ್ನಿಸಿದೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಕನ್ನಡ ಭಾಷೆ ಮತ್ತು ಹಿಂದೂ ವಿರೋಧಿಯಾಗಿದ್ದ ಟಿಪ್ಪೂ ಜಯಂತಿಯನ್ನು ಸರ್ಕಾರದ ವತಿಯಿಂದಲೇ ಆಚರಿಸಿದರೂ ಹನುಮ ಜಯಂತಿಯನ್ನು ಆಚರಿಸಲು ಅವಕಾಶ ಕೊಡದೆ ಬಹುಸಂಖ್ಯಾತರ ಭಾವನೆಗಳಿಗೆ ಧಕ್ಕೆತರುತ್ತಿದೆ. ಸರ್ಕಾರದ ಇಂತಹ ಧೋರಣೆಗೆ ಮುಂದಿನ ದಿನಗಳಲ್ಲಿ ರಾಜ್ಯದ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next