Advertisement

ಬೆಳೆ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ

02:55 PM Dec 03, 2021 | Team Udayavani |

ಜೇವರ್ಗಿ: ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಹಾಳಾದ ಬೆಳೆಗಳಿಗೆ ಬೆಳೆ ವಿಮೆ ಹಾಗೂ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ತಾಲೂಕು ಘಟಕದ ವತಿಯಿಂದ ಪಟ್ಟಣದ ತಹಶೀಲ್ದಾರ್‌ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.

Advertisement

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರವೇ ತಾಲೂಕು ಘಟಕದ ಅದ್ಯಕ್ಷ ಯಲ್ಲಾಲಿಂಗ ಬಂಕಲಗಿ ಮಾತನಾಡಿ, ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಈ ಭಾಗದ ಪ್ರಮುಖ ಬೆಳೆಗಳಾದ ತೊಗರಿ, ಹತ್ತಿ, ಸೂರ್ಯಕಾಂತಿ, ಉದ್ದು ಬೆಳೆ ಸಂಪೂರ್ಣ ಹಾಳಾಗಿದೆ. ತಾಲೂಕಿನ ಹತ್ತಾರು ಹಳ್ಳಿಗಳಲ್ಲಿ ಸುರಿದ ಭಾರಿ ಮಳೆ, ಚಂಡಮಾರುತದಿಂದ ಬೆಳೆಗಳು ಸಂಪೂರ್ಣ ಹಾಳಾಗಿವೆ. ಪ್ರತಿ ವರ್ಷ ರೈತರು ಒಂದಿಲ್ಲೊಂದು ಸಮಸ್ಯೆಗಳಿಂದ ಪರದಾಡುವಂತಾಗಿದೆ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಬೆಳೆ ಹಾಳಾದ ರೈತರ ಜಮೀನುಗಳಿಗೆ ಖುದ್ದು ಭೇಟಿ ನೀಡಿ ಸಮೀಕ್ಷೆ ನಡೆಸಿ ನ್ಯಾಯಯುತ ಪರಿಹಾರ ನೀಡಬೇಕು. ರೈತರಿಗೆ ಬೆಳೆಹಾನಿ ಪರಿಹಾರ ನೀಡುವಲ್ಲಿ ವಿಳಂಬ ನೀತಿ ಅನುಸರಿಸಿದರೇ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ತಾಲೂಕು ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಮೂಲಕ ತಹಶೀಲ್ದಾರ್‌ ಕಚೇರಿಗೆ ಆಗಮಿಸಿ ತಹಶೀಲ್ದಾರ್‌ ವಿನಯಕುಮಾರ ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ಮಹೇಶ ಕಾಶಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕಾಶಿನಾಥ ಸಾಹು ಮಂದೇವಾಲ, ತಾಲೂಕು ಪ್ರಧಾನ ಕಾರ್ಯದರ್ಶಿ ದೇವೀಂದ್ರ ಮಯೂರ, ಮುಖಂಡರಾದ ಶಾಂತಗೌಡ ಬಿರಾದಾರ, ಮಲ್ಲಿಕಾರ್ಜುನ ಬಿರಾದಾರ ಸೇರಿದಂತೆ ಕರವೇ ಕಾರ್ಯಕರ್ತರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next