Advertisement

ಪ್ರತಿ ಶಾಲೆಗೆ ಅಗತ್ಯ ಸೌಲಭ್ಯ ಒದಗಿಸಿ

12:10 PM Jan 25, 2020 | Suhan S |

ಬೆಳಗಾವಿ: ಜಿಲ್ಲೆಯಲ್ಲಿರುವ ಪ್ರತಿ ಶಾಲೆಯಲ್ಲಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಹಾಗೂ ಮಕ್ಕಳ ಸಹಾಯವಾಣಿ ಫಲಕ ಅಳವಡಿಕೆಯನ್ನು ಕಡ್ಡಾಯವಾಗಿ 14 ದಿನಗಳೊಳಗೆ ಒದಗಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ. ಅಂತೋಣಿ ಸೆಬಾಸ್ಟಿಯನ್‌ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

Advertisement

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಅಯೋಗ, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಶಾಲೆ ಬಿಟ್ಟ ಮಕ್ಕಳು ಹಾಗೂ ಆರ್‌.ಟಿ.ಇ ಕುರಿತ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಶಿಕ್ಷಣ ಇಲಾಖೆ ಅಧಿಕಾರಿಗಳು ಆಯೋಗಕ್ಕೆ ಸಮರ್ಪಕ ಮಾಹಿತಿ ಒದಗಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ, ಬರುವ ಎರಡು ವಾರದಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದರು.

ಶಾಲೆಗಳಲ್ಲಿ ಉಚಿತವಾಗಿ ವಿತರಿಸುವ ಶೂ, ಸಮವಸ್ತ್ರಗಳ ಬಗ್ಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆವರದಿ ನೀಡಬೇಕು. ಇದರ ಜೊತೆಗೆ ಪ್ರತಿ ಶಾಲೆಯಲ್ಲಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ತಕ್ಷಣ ಒದಗಿಸಿ ಅದರ ಬಗ್ಗೆ ವರದಿ ನೀಡಬೇಕು ಎಂದು ನಿರ್ದೇಶನ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಚಿಕ್ಕೋಡಿ ಡಿಡಿಪಿಐಗಜಾನನ ಮನ್ನಿಕೇರಿ, 2002ರಲ್ಲಿ ಬೆಳಗಾವಿಯನ್ನು ವಿಭಾಗಿಸಿ ಎರಡು ಶೈಕ್ಷಣಿಕ ಜಿಲ್ಲೆಯಾಗಿ ಮಾಡಲಾಗಿದೆ. ಬೆಳಗಾವಿಯಲ್ಲಿ ಏಳು ವಲಯ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 8 ವಲಯಗಳನ್ನು ರಚನೆ ಮಾಡಲಾಗಿದೆ. ಈ ವಲಯಗಳಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಆದಾಗ ಜಿಲ್ಲಾಧಿಕಾರಿಗಳು ಮಾರ್ಗದರ್ಶನ ನೀಡುತ್ತಾರೆ. ಅದರಂತೆ ಕ್ರಮ ವಹಿಸಲಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಶಾಲೆಯಿಂದ ದೂರ ಉಳಿದ ಮಕ್ಕಳ ಬಗ್ಗೆ ಆಯೋಗಕ್ಕೆ ಮಾಹಿತಿ ನೀಡಿದ ಶಿಕ್ಷಣ ಇಲಾಖೆಯ ಅಧಿಕಾರಿಗಳು 45 ಮಕ್ಕಳು ಶಾಲೆಯಿಂದ ದೂರ ಉಳಿದಿದ್ದಾರೆ. ಈ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಪ್ರಯತ್ನ ಮಾಡುತ್ತಿದ್ದು, ಶಾಲೆ ಬಿಟ್ಟ ಮಕ್ಕಳ ಬಗ್ಗೆ ಪರಿಶೀಲನೆ ನಡೆಸಿದಾಗ ಆರ್ಥಿಕ ಸಮಸ್ಯೆ, ವಲಸೆ ಸೇರಿದಂತೆ ವಿವಿಧ ಬಗೆಯ ಸಮಸ್ಯೆಗಳು ಕಂಡು ಬರುತ್ತಿವೆ ಎಂದು ಮಾಹಿತಿ ನೀಡಿದರು.

Advertisement

ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಡಿ. ಶಂಕ್ರಪ್ಪ ಮಾತನಾಡಿ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಲಸೆ ಸಮಸ್ಯೆ ಇದೆ. ವಲಸೆ ಬಂದವರ ಮಕ್ಕಳಿಗಾಗಿ ಟೆಂಟ್‌ ಶಾಲೆಗಳ ಅಳವಡಿಕೆ ಮಾಡಬೇಕು. ಒಂದು ಮಗುವಿಗೆ ಶಾಲೆ ಸುರಕ್ಷಿತ ಸ್ಥಳ. ಅದರ ಮಹತ್ವ ಏನು ಎಂಬುದನ್ನು ಪ್ರತಿಯೊಬ್ಬ ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು. ಸಾಕಷ್ಟು ಇಲಾಖೆಗಳು ಇರುವುದರಿಂದ ಮಕ್ಕಳ ಬಗ್ಗೆಕಾಳಜಿ ವಹಿಸುವುದು ಕಷ್ಟ ವೇನಲ್ಲ ಎಂದು ಹೇಳಿದರು.

ಆಯೋಗದ ಮತ್ತೋರ್ವ ಸದಸ್ಯ ಎಚ್‌ .ಸಿ.ರಾಘವೇಂದ್ರ ಮಾತನಾಡಿ, ಆರ್‌ಟಿಇ ಅನ್ವಯ ಮಕ್ಕಳಿಗೆ ಯಾವ ರೀತಿಯ ಮೂಲ ಸೌಲಭ್ಯಗಳು ನೀಡಬೇಕು ಎಂಬ ಬಗ್ಗೆ ಯಾವುದೇ ಅಧಿಕಾರಿ ಪ್ರಸ್ತಾಪ ಮಾಡಿಲ್ಲ. ಯಾವದೇ ಒಂದು ಮಗು ಶಿಕ್ಷಣದಿಂದ ವಂಚಿತವಾದರೆ ಆಯೋಗವು ಅದನ್ನು ಸಹಿಸಲ್ಲ. ಮಕ್ಕಳಿಗೆ ಶಿಕ್ಷಣ ನೀಡಿ ಈ ಮಕ್ಕಳ ಬಾಲ್ಯವನ್ನು ಅವರಿಗೆ ನೀಡಬೇಕು. ಒಂದು ಮಗು ಶಿಕ್ಷಣದಿಂದ ವಂಚಿತವಾಗಿ ಶೋಷಣೆಗೆ ಒಳಗಾದರೆ ಸಂಬಂಧಿಸಿದ ಎಲ್ಲ ಅಧಿಕಾರಗಳ ಮೇಲೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಅವಕಾಶಗಳಿವೆ ಎಂದು ಹೇಳಿದರು.

ಈಗಾಗಲೇ ಇರುವ ಆರ್‌ಟಿಇ ಕಾಯ್ದೆ ಅಡಿ ಖಾಸಗಿ ಶಾಲೆಗಳಲ್ಲಿ ದಾಖಲಾಗಿರುವ ಮಕ್ಕಳ ಪೋಷಕರಿಂದ ಶಾಲೆಯವರು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ದೂರುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ದೂರು ಬರುವ ಶಾಲೆಗಳಿಗೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಮಕ್ಕಳ ಹಕ್ಕುಗಳ ಅಯೋಗದ ಸದಸ್ಯರಾದ ಭಾರತಿ ಅವರು ಮಾತನಾಡಿ, ಹಲವಾರು ಶಾಲೆಗಳಲ್ಲಿ ಕಂಪೌಂಡ್‌ ಇಲ್ಲದ ಕಾರಣ ಈ ಶಾಲೆಗಳಲ್ಲಿ ಸ್ವತ್ಛತಾ ಕೆಲಸಗಳು ನಿರ್ವಹಣೆ ಆಗುತ್ತಿಲ್ಲ. ಅದರ ಬಗ್ಗೆ ಗಮನಹರಿಸಿ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಸತಿ ಶಾಲೆಗಳ ಸೌಲಭ್ಯ: ಬಾಲ ನ್ಯಾಯ ಕಾಯ್ದೆ 2015ರ ಅನುಷ್ಠಾನದ ಕುರಿತು ನಡೆದ ಭಾಗಿದಾರರೊಂದಿಗೆ ಸಮಾಲೋಚನೆ ಸಭೆಯಲ್ಲಿ ಮಾತನಾಡಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಡಾ. ಅಂತೋಣಿ ಸೆಬಾಸ್ಟಿಯನ್‌ ಜಿಲ್ಲೆಯಲ್ಲಿರುವ ಎಲ್ಲ ವಸತಿ ಶಾಲೆಗಳಲ್ಲಿ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ಸತ್ಯಶೋಧನೆ ನಡೆಸಿ ಆಯೋಗಕ್ಕೆ ವರದಿ ಸಲ್ಲಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಸತಿ ಶಾಲೆಗಳ ಮೂರು ವರ್ಷಗಳ

ಕಾರ್ಯವೈಖರಿಯ ವರದಿ ನೀಡಬೇಕು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ವಸತಿ ಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಲು ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಸಂಸ್ಥೆಗಳ ಸದಸ್ಯರನ್ನೊಳಗೊಂಡ ಮೂರು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಕಾಲಕಾಲಕ್ಕೆ ವಸತಿನಿಲಯಗಳಿಗೆ ಭೇಟಿ ಕೊಟ್ಟು ಪರಿಶೀಲಿಸಬೇಕು ಎಂದರು.

ವಸತಿ ಶಾಲೆಗಳಲ್ಲಿರುವ ಮಕ್ಕಳು ಸೌಲಭ್ಯ ವಂಚಿತರಾಗುತ್ತಿದ್ದಾರೆ. ಮಕ್ಕಳಿಗೆ ಸರಿಯಾಗಿ ಆಹಾರ ನೀಡಲಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಆಯೋಗದ ಸದಸ್ಯರು, ಜಿಲ್ಲೆಯ ವಸತಿ ಶಾಲೆಗಳಲ್ಲಿಮೂರು ತಂಡಗಳೊಂದಿಗೆ ಅನಿರೀಕ್ಷಿತ ಭೇಟಿ ನೀಡಲು ಸೂಚನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next