Advertisement

ಚಾಮರಾಜನಗರ ಜಿಲ್ಲೆಗೆ ಪುನೀತ್ ರಾಜ್‌ಕುಮಾರ್ ಬ್ರಾಂಡ್ ಅಂಬಾಸಡರ್

10:57 AM Mar 08, 2020 | Sriram |

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಲಭ್ಯವಿರುವ ಸಂಪನ್ಮೂಲಗಳು ಹಾಗೂ ಅವಕಾಶಗಳನ್ನು ಬಳಸಿಕೊಂಡು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕೈಗೊಳ್ಳಲಿರುವ ಯೋಜನೆ, ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಬಿಂಬಿಸಲು ಖ್ಯಾತ ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ಜಿಲ್ಲೆಯ ಅಭಿವೃದ್ಧಿ ರಾಯಭಾರಿಯಾಗಲಿದ್ದಾರೆ.

Advertisement

ಸಾಂಸ್ಕೃತಿಕವಾಗಿ ಶ್ರೀಮಂತ ಪರಂಪರೆ ಹೊಂದಿರುವ ಚಾಮರಾಜನಗರ ಜಿಲ್ಲೆ ಜೀವ ಸಂಸ್ಕೃತಿಗೆ ಹೆಸರುವಾಸಿಯಾಗಿದ್ದು, ಇಲ್ಲಿನ ಸಂಪನ್ಮೂಲ ಮತ್ತು ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಚಿಂತನೆಯನ್ನು ಜಿಲ್ಲಾಡಳಿತ ಮಾಡಿದೆ. ಚಾಮರಾಜನಗರ ಜಿಲ್ಲೆ ನಮ್ಮದು ಎಂಬ ಭಾವನೆ ಪ್ರತಿಯೊಬ್ಬರಲ್ಲೂ ಮೂಡುವಂತೆ ಸಮಗ್ರ ಅಭಿವೃದ್ಧಿಯೊಂದಿಗೆ ಜಿಲ್ಲೆಯನ್ನು ಚೆಂದಗಾಣಿಸುವ ಉದ್ದೇಶವನ್ನು ಸಮರ್ಥವಾಗಿ ಬಿಂಬಿಸಲು ಜಿಲ್ಲೆಯ ರಾಯಭಾರಿಯಾಗಿ ಮೂಲತ: ಚಾಮರಾಜನಗರ ಜಿಲ್ಲೆಯವರೇ ಆದ ನಟ ಪುನೀತ್ ರಾಜ್‌ಕುಮಾರ್ ಇನ್ನುಮುಂದೆ ಕಾರ್ಯನಿರ್ವಹಿಸಲಿದ್ದಾರೆ.

ಶನಿವಾರ ಸಂಜೆ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಪುನೀತ್ ರಾಜ್‌ಕುಮಾರ್ ಅವರ ನಿವಾಸದಲ್ಲಿ ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್‌ಕುಮಾರ್ ಹಾಗೂ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಅವರು, ಪುನೀತ್ ರಾಜ್ ಕುಮಾರ್ ಅವರನ್ನು ಭೇಟಿ ಮಾಡಿ ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ ರಾಯಭಾರಿಯಾಗಲು ಆಹ್ವಾನ ನೀಡಿದರು.

ಜಿಲ್ಲೆಯ ಅಭಿವೃದ್ಧಿ ರಾಯಭಾರಿಯಾಗಲು ಚಾಮರಾಜನಗರ ಜಿಲ್ಲಾಡಳಿತ ನೀಡಿದ ಆಹ್ವಾನ ಹಾಗೂ ಪ್ರಸ್ತಾವನೆಗೆ ಪುನೀತ್ ರಾಜ್ ಕುಮಾರ್ ಅವರು ಸಂತಸದಿಂದ ಸಮ್ಮತಿಸಿದರು.

ಸಿದ್ಧಪುರುಷರ ನಾಡು ಹಾಗೂ ಜಾನಪದ ಕಲೆಗಳ ತವರೂರೆಂದೆ ಖ್ಯಾತಿ ಪಡೆದಿರುವ ಚಾಮರಾಜನಗರ ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆ, ಸಂಪೂರ್ಣ ಸಾಕ್ಷರತೆ, ವನ್ಯಜೀವಿ ಸಂರಕ್ಷಣೆ, ನಗರ ಪಟ್ಟಣಗಳ ಸೌಂದರ್ಯಕರಣ, ಆದ್ಯತೆಗಳಾಗಿವೆ. ಚೆಲುವ ಚಾಮರಾಜನಗರ ಅಭಿಯಾನದ ಮೂಲಕ ಈಗಾಗಲೇ ಸ್ವಚ್ಚತಾ ಜಾಗೃತಿ ಕಾರ್ಯಕ್ರಮಗಳು ಪ್ರಾರಂಭವಾಗಿವೆ. ಸುಮಾರು 2.6 ಲಕ್ಷ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿಸುವ, ಹೊಸ ಕೈಗಾರಿಕೆಗಳನ್ನು ಸ್ಥಾಪಿಸಿ ಉದ್ಯೋಗ ಸೃಜಿಸುವ, ಪರಿಸರ ಪ್ರವಾಸೋದ್ಯಮದ ಅಭಿವೃದ್ದಿಗೆ ನೀಲಿನಕ್ಷೆ ತಯಾರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯನ್ನು ಸಮರ್ಥವಾಗಿ ಹಾಗೂ ಪರಿಣಾಮಕಾರಿಯಾಗಿ ಬಿಂಬಿಸಲು ಜಿಲ್ಲೆಯ ರಾಯಭಾರಿಯನ್ನಾಗಿ ಬಳಸಿಕೊಳ್ಳಲು ಜಿಲ್ಲಾಡಳಿತ ಇಚ್ಚಿಸುತ್ತದೆ ಎಂಬ ಪ್ರಸ್ತಾವನೆಗೆ ಸ್ಪಂದಿಸಿರುವ ಪುನೀತ್ ರಾಜ್‌ಕುಮಾರ್ ಅವರು ಜಿಲ್ಲೆಯ ಅಭಿವೃದ್ಧಿ ರಾಯಭಾರಿಯಾಗಲು ಸಂತೋಷದಿಂದ ಒಪ್ಪಿಕೊಂಡಿದ್ದಾರೆ.

Advertisement

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್‌ಕುಮಾರ್ ಪುನೀತ್ ರಾಜ್‌ಕುಮಾರ್ ಅವರು ಅಭಿವೃದ್ಧಿ ರಾಯಭಾರಿಯಾಗಿ ಸೇವೆ ಸಲ್ಲಿಸುವುದರಿಂದ ಪ್ರವಾಸೋದ್ಯಮ, ಕೈಗಾರಿಕೆ ಹಾಗೂ ಇತರೆ ಕ್ಷೇತ್ರಗಳು ಪ್ರಗತಿಯಾಗಿ ಜಿಲ್ಲೆಯ ಅಭಿವೃದ್ಧಿ ವೇಗ ಇನ್ನೂ ಹೆಚ್ಚಾಗಲಿದೆ. ಜಿಲ್ಲಾಡಳಿತದ ಪ್ರಸ್ತಾವಕ್ಕೆ ತುಂಬಾ ಪ್ರೀತಿಯಿಂದ ಪುನೀತ್ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಚಾಮರಾಜನಗರ ಅನೇಕ ದೃಷ್ಟಿಯಿಂದ ಸಂಪದ್ಭರಿತವಾಗಿದೆ. ಆದರೆ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಬಂದಿದೆ. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ನೈಸರ್ಗಿಕ ಸಂಪತ್ತು ಸಂರಕ್ಷಣೆಯೊಂದಿಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆಂದೋಲನವಾಗಬೇಕು. ಈ ನಿಟ್ಗಟಿನಲ್ಲಿ ಜಿಲ್ಲಾಧಿಕಾರಿಯವರು ಕಾರ್ಯಚಟುವಟಿಕೆಗಳನ್ನು ರೂಪಿಸಿದ್ದಾರೆ. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಚಟುವಟಿಕೆ ಹಾಗೂ ಆಂದೋಲನಕ್ಕೆ ಜಿಲ್ಲೆಯೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿರುವ ಪುನೀತ್ ರಾಜ್‌ಕುಮಾರ್ ಅವರು ರಾಯಭಾರಿಯಾಗಿ ಒಪ್ಪಿದ್ದಾರೆ ಎಂದು ಸುರೇಶ್‌ಕುಮಾರ್ ಹೇಳಿದರು.

ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಮಾತನಾಡಿ, ಜಿಲ್ಲೆಯ ಅಭಿವೃದ್ಧಿ ಪರಿಸರ, ಸಂಪನ್ಮೂಲ ರಕ್ಷಣೆ, ಸ್ವಚ್ಚತೆ, ಸಾಕ್ಷರತೆಯೊಂದಿಗೆ ಜಿಲ್ಲೆಯನ್ನು ಸರ್ವಾಂಗೀಣ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯನ್ನು ಸಮರ್ಥವಾಗಿ ಹಾಗೂ ಪರಿಣಾಮಕಾರಿಯಾಗಿ ಬಿಂಬಿಸಲು ಜಿಲ್ಲೆಯ ರಾಯಭಾರಿಯಾಗಲು ಜಿಲ್ಲಾಡಳಿತ ನೀಡಿದ ಆಹ್ವಾನಕ್ಕೆ ಪುನೀತ್ ರಾಜ್‌ಕುಮಾರ್ ಅವರು ಸಮ್ಮತಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ನುಡಿದರು.

ಜಿಲ್ಲೆಯ ಋಣ ತೀರಿಸುವ ಅವಕಾಶಕ್ಕೆ ಸಂತಸ
ಚಾಮರಾಜನಗರ ಅಭಿವೃದ್ಧಿಯ ರಾಯಭಾರಿಯಾಗಲು ನೀಡಿದ ಆಹ್ವಾನಕ್ಕೆ ತುಂಬಾ ಪ್ರೀತಿಯಿಂದಲೇ ಸಮ್ಮತಿ ಸೂಚಿಸಿ ಮಾತನಾಡಿದ ಪುನೀತ್ ರಾಜ್‌ಕುಮಾರ್, ನಮ್ಮ ತಂದೆ ಡಾ. ರಾಜ್‌ಕುಮಾರ್ ಅವರು ಹುಟ್ಟಿ ಬೆಳೆದ ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ ರಾಯಭಾರಿಯಾಗಿ ಕೆಲಸ ಮಾಡುವುದು ನಿಜಕ್ಕೂ ನನ್ನ ಸೌಭಾಗ್ಯವೆಂದೇ ಭಾವಿಸಿದ್ದೇನೆ. ನನ್ನ ಜಿಲ್ಲೆಯ ಋಣ ತೀರಿಸುವ ಅವಕಾಶ ಒದಗಿ ಬಂದಿರುವುದು ಸಂತಸ ತಂದಿದೆ ಎಂದು ನುಡಿದರು.

Advertisement

Udayavani is now on Telegram. Click here to join our channel and stay updated with the latest news.

Next