Advertisement

ತಂಬಾಕು ದುಷ್ಪರಿಣಾಮ ಜಾಗೃತಿ ಮೂಡಿಸಿ

12:14 PM Nov 02, 2019 | Team Udayavani |

ಕೊಪ್ಪಳ: ತಂಬಾಕಿನಿಂದಾಗುವ ದುಷ್ಪರಿಣಾಮಗಳ ಕುರಿತು ಅಧಿಕಾರಿಗಳು ಜಿಲ್ಲಾ ಹಾಗೂ ತಾಲೂಕುಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಎಡಿಸಿ ಎಂ.ಪಿ. ಮಾರುತಿ ಹೇಳಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಅಧ್ಯಕ್ಷತೆ ಮಾತನಾಡಿದರು. ಶಾಲಾ, ಕಾಲೇಜುಗಳ ಆವರಣ, ಆಸ್ಪತ್ರೆ, ರೈಲು ನಿಲ್ದಾಣ, ಬಸ್‌ ನಿಲ್ದಾಣ, ಜಿಲ್ಲಾಡಳಿತ ಭವನ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಮಾಡುವುದು ಅಪರಾಧ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ತಂಬಾಕು ಉತ್ಪನ್ನಗಳಿಂದ ದೂರ ಇರುವುದರಿಂದ ತಮ್ಮ ಆರೋಗ್ಯವನ್ನು ಸ್ವಸ್ಥವಾಗಿ ಇಟ್ಟುಕೊಳ್ಳಬಹುದು. ತಂಬಾಕು ತ್ಯಜಿಸುವುದರಿಂದ ತಂಬಾಕು ಸೇವನೆಯಿಂದಾಗುವ ರೋಗಗಳನ್ನು ಸುಲಭವಾಗಿ ತಡೆಗಟ್ಟಬಹುದು ಎಂದರು.

ತಂಬಾಕು ಸೇವನೆಯಿಂದ ಪ್ರತಿದಿನ 2500 ಭಾರತೀಯರು ಸಾವಿಗೀಡಾಗುತ್ತಿದ್ದು, ವಿಶ್ವದಲ್ಲಿ ಹತ್ತರಲ್ಲಿ ಒಂದು ಸಾವು ತಂಬಾಕು ಸೇವನೆಯಿಂದಲೇ ಉಂಟಾಗುತ್ತಿದೆ. ತಂಬಾಕು ಸೇವನೆ ಮಾಡುವುದರಿಂದ ಪುರುಷರಲ್ಲಿ ಲೈಂಗಿಕ ಅಶಕ್ತತೆ ಕಂಡುಬರುತ್ತದೆ. ಮಹಿಳೆಯರಲ್ಲಿ ಗರ್ಭಪಾತ, ಕಡಿಮೆ ತೂಕದ ಮಕ್ಕಳ ಜನನ, ಮಗುವಿನಲ್ಲಿ ಮಾನಸಿಕ ವೈಫಲ್ಯಗಳು, ಕಿವಿಯ ಸೋಂಕು, ಕೆಮ್ಮು ಮತ್ತು ಉಬ್ಬಸ ಸಮಸ್ಯೆಗಳಿಂದ ಬಳಲುವ ಸಾಧ್ಯತೆಗಳಿರುತ್ತವೆ ಎಂದರು.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ನಿಷೇಧಿ ಸಲಾಗಿದ್ದು, ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನೂರು ಮೀಟರ್‌ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಶಿಕ್ಷಣ ಸಂಸ್ಥೆಯನ್ನು ಸಂಪೂರ್ಣ ತಂಬಾಕು ಮುಕ್ತವನ್ನಾಗಿಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ನಿರ್ವಹಿಸಬೇಕು. ಸಿಗರೇಟ್‌ ಮತ್ತು ಇತರೆ ತಂಬಾಕು ಉತ್ಪನ್ನಗಳ ಮೇಲೆ ನಿರ್ದಿಷ್ಟ ಆರೋಗ್ಯ ಎಚ್ಚರಿಕೆ ಸಂದೇಶಗಳಿಲ್ಲದೆ ಮಾರಾಟ ಮಾಡುವುದು ಕೂಡ ಶಿಕ್ಷಾರ್ಹ ಅಪರಾಧ ಎಂದರು.  ಡಾ| ಜಂಬಯ್ಯ, ಅಬಕಾರಿ ಇಲಾಖೆ ಹಾಗೂ ಆರೋಗ್ಯ ಶಿಕ್ಷಣ ಇಲಾಖೆ ಸಿಬ್ಬಂದಿ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next