Advertisement

ರಮೇಶ್‌ ಜಾರಕಿಹೊಳಿ ಸಿ.ಡಿ. ಪ್ರಕರಣ: ಸೆ.5ಕ್ಕೆ ಅಂತಿಮ ವಿಚಾರಣೆ

10:03 PM Jul 25, 2022 | Team Udayavani |

ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣದ ಅಂತಿಮ ವಿಚಾರಣೆಯನ್ನು ಹೈಕೋರ್ಟ್‌ ಸೆ. 5ಕ್ಕೆ ನಿಗದಿಪಡಿಸಿದೆ.

Advertisement

ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ನೀಡಲಾದ ಆದೇಶ ಮತ್ತು ಬೆಂಗಳೂರಿನ ಸದಾಶಿವ ನಗರ ಪೊಲೀಸ್‌ ಠಾಣೆಯಲ್ಲಿ ಜಾರಕಿಹೊಳಿ ದಾಖಲಿಸಿರುವ ಬ್ಲ್ಯಾಕ್‌ಮೇಲ್ ದೂರಿಗೆ ಸಂಬಂಧಿಸಿದ ಎಫ್ಐಆರ್‌ ರದ್ದುಪಡಿಸುವಂತೆ ಕೋರಿ ಸಂತ್ರಸ್ತೆ ಹಾಗೂ ಇತರ ಆರೋಪಿಗಳಾದ ಎಸ್‌. ಶ್ರವಣ್‌ ಕುಮಾರ್‌ ಮತ್ತು ಬಿ.ಎಂ. ನರೇಶ್‌ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ನ್ಯಾ| ಎಸ್‌. ಸುನಿಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಅಮಿಕಸ್‌ ಕ್ಯೂರಿ ನೇಮಕ
ಬೆಂಗಳೂರಿನ ಸದಾಶಿವ ನಗರ ಠಾಣೆಯಲ್ಲಿ ರಮೇಶ ಜಾರಕಿಹೊಳಿ ದಾಖಲಿಸಿರುವ ಬ್ಲ್ಯಾಕ್‌ ಮೇಲ್‌ ಪ್ರಕರಣ ಸಂಬಂಧಿಸಿದ ತನಿಖಾ ವರದಿಯನ್ನು ಹೈಕೋರ್ಟಿನ ಅನುಮತಿ ಪಡೆಯದೆ ವಿಚಾರಣಾಧೀನ ನ್ಯಾಯಾಲಯಕ್ಕೆ ವಿಶೇಷ ತನಿಖಾ ದಳವು (ಎಸ್‌ಐಟಿ) ಸಲ್ಲಿಸುವಂತಿಲ್ಲ ಎಂದು ನಿರ್ದೇಶಿಸಿದ ನ್ಯಾಯಪೀಠ, ಈ ಪ್ರಕರಣದಲ್ಲಿ ಉದ್ಭವಿಸುವ ಕಾನೂನು ವಿಚಾರಗಳ ಬಗ್ಗೆ ನ್ಯಾಯಾಲಯಕ್ಕೆ ಸಲಹೆ ಮತ್ತು ನೆರವು ನೀಡಲು ಹಿರಿಯ ವಕೀಲ ಸಂದೇಶ್‌ ಚೌಟ ಅವರನ್ನು ಅಮಿಕಸ್‌ ಕ್ಯೂರಿ ಆಗಿ ನೇಮಿಸಿತು.

ಅರ್ಜಿದಾರರು ಮತ್ತು ಪ್ರತಿವಾದಿಗಳ ಪರ ವಕೀಲರು ತಮ್ಮ ವಾದಾಂಶಗಳನ್ನು ಸಂಕ್ಷಿಪ್ತವಾಗಿ ಲಿಖೀತ ರೂಪದಲ್ಲಿ ಸಲ್ಲಿಸಲು ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.

ಎಸ್‌ಐಟಿಗೆ ನೋಟಿಸ್‌
ಇದೇ ವೇಳೆ ಬ್ಲ್ಯಾಕ್‌ಮೇಲ್ ದೂರಿಗೆ ಸಂಬಂಧಿಸಿ ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್‌ ರದ್ದುಪಡಿಸುವಂತೆ ಕೋರಿ ಶ್ರವಣ್‌ ಕುಮಾರ್‌ ಮತ್ತು ನರೇಶ್‌ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ತನಿಖಾ ವರದಿಯನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸದಂತೆ ಎಸ್‌ಐಟಿಗೆ ನಿರ್ಬಂಧಿಸಿದೆ. ಜತೆಗೆ, ಅರ್ಜಿ ಕುರಿತು ಎಸ್‌ಐಟಿ, ಬೆಂಗಳೂರು ಪೊಲೀಸ್‌ ಆಯುಕ್ತರು ಮತ್ತು ರಮೇಶ್‌ ಜಾರಕಿಹೊಳಿಗೆ ನೋಟಿಸ್‌ ಜಾರಿ ಮಾಡಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next