Advertisement

Rani Chennamma: ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

01:39 AM Oct 03, 2024 | Team Udayavani |

ಬೆಂಗಳೂರು: ಕಿತ್ತೂರು ರಾಣಿ ಚೆನ್ನಮ್ಮ ಅವರು ಸ್ವಾಭಿಮಾನ – ನಾಡಭಕ್ತಿ ಮಾದರಿಯಾಗಿದ್ದು ಅವರು ಬ್ರಿಟಿಷರ ವಿರುದ್ಧ ಸಾಧಿಸಿದ ಗೆಲುವಿಗೆ 200 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಅ. 23ರಿಂದ 3 ದಿನಗಳ ಕಾಲ ಕಿತ್ತೂರಿನಲ್ಲಿ “ಕಿತ್ತೂರು ವಿಜಯ ಉತ್ಸವ’ ಆಚರಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ವಿಧಾನಸೌಧದ ಮುಂಭಾಗ ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ವಿಜಯೋತ್ಸವದ 200ನೇ ವರ್ಷದ ಯಾತ್ರೆಗೆ ಚಾಲನೆ ನೀಡಿ ಮಾತನಾಡಿ, 1824ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರೊಂದಿಗೆ ಹೋರಾಡಿ ವಿಜಯಶಾಲಿಯಾದರು. ಈ ಯದ್ಧ ನಡೆದು 200 ವರ್ಷಗಳಾಗಿವೆ. ಹೀಗಾಗಿ ವಿಜಯೋತ್ಸವ ಆಚರಣೆ ಮಾಡುತ್ತಿದ್ದೇವೆ. ಕಿತ್ತೂರು ವಿಜಯ ಜ್ಯೋತಿ ಯಾತ್ರೆ ಇಂದಿನಿಂದ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಕಿತ್ತೂರು ತಲುಪಲಿದೆ. ಕಿತ್ತೂರು ಉತ್ಸವಕ್ಕೆ ರಾಜ್ಯ ಸರಕಾರದಿಂದ ಎಲ್ಲ ನೆರವು ನೀಡುತ್ತಿದ್ದೇವೆ ಎಂದು ಹೇಳಿದರು.

ಕಿತ್ತೂರು ರಾಣಿ ಚನ್ನಮ್ಮನವರು ನಮಗೆಲ್ಲ ಸ್ವಾಭಿಮಾನದ ಸಂಕೇತ. ಬ್ರಿಟಿಷರು ಜಾರಿಗೆ ತಂದಿದ್ದ ತೆರಿಗೆ ನೀತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಯನ್ನು ಕಿತ್ತೂರು ರಾಣಿ ಚೆನ್ನಮ್ಮ ಅವರು ವಿರೋಧ ಮಾಡಿದ್ದರು. ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರಿಗೆ ತೆರಿಗೆ ಕೊಡಲ್ಲ ಅಂತ ನೇರವಾಗಿ ಹೇಳಿದರು. ಮೊದಲನೇ ಯುದ್ಧದಲ್ಲಿ ಚನ್ನಮ್ಮ ಅವರಿಗೆ ಜಯವಾಗುತ್ತದೆ. ಎರಡನೇ ಯುದ್ಧಕ್ಕೆ ಬ್ರಿಟಿಷರು ಹೆಚ್ಚು ಸೈನ್ಯ ತೆಗೆದುಕೊಂಡು ಬಂದಿದ್ದರಿಂದ ಕಿತ್ತೂರಿಗೆ ಸೋಲಾಗುತ್ತದೆ. ಬ್ರಿಟಿಷರು ಕಿತ್ತೂರನ್ನು ಆಕ್ರಮಿಸಿಕೊಳ್ಳುತ್ತಾರೆ. ಚೆನ್ನಮ್ಮ ಅವರನ್ನು ಸೆರೆ ಹಿಡಿಯುತ್ತಾರೆ ಎಂದು ತಿಳಿಸಿದರು.

ಸಿಎಂ ಬಟ್ಟೆಗೆ ಕಿಡಿ

ಕಿತ್ತೂರು ಉತ್ಸವ ಜ್ಯೋತಿಗೆ ಚಾಲನೆ ನೀಡಿದ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಜಾಗ ಬಿಡುವ ಉದ್ದೇಶದಿಂದ ಪಕ್ಕಕ್ಕೆ ಸರಿದಾಗ ದೀಪದ ಹತ್ತಿರ ಬಂದರು. ಆಗ ಅವರ ಶಲ್ಯಕ್ಕೆ ಬೆಂಕಿ ತಗಲಿದೆ. ಆಕಸ್ಮಿಕವಾಗಿ ತಾಗಿದ ಕಿಡಿಯನ್ನು ಭದ್ರತಾ ಸಿಬಂದಿ ತತ್‌ಕ್ಷಣವೇ ಆರಿಸಿದರು.

ಈ ವೇಳೆ ಸಚಿವರಾದ ಸತೀಶ್‌ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್‌, ಎಚ್‌. ಕೆ. ಪಾಟೀಲ್‌, ಪ್ರಿಯಾಂಕ್‌ ಖರ್ಗೆ, ಕಿತ್ತೂರು ಕ್ಷೇತ್ರದ ಶಾಸಕ ಬಾಬಾ ಸಾಹೇಬ್‌ ಪಾಟೀಲ್‌, ಶಾಸಕರಾದ ರಿಜ್ವಾನ್‌ ಅರ್ಷದ್‌, ರಾಜು ಕಾಗೆ, ಎನ್‌. ಎ. ಹ್ಯಾರಿಸ್‌, ವಿಧಾನ ಪರಿಷತ್‌ ನ ಮುಖ್ಯ ಸಚೇತಕರಾದ ಸಲೀಂ ಅಹಮದ್‌, ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಉನ್ನತ ಅಧಿಕಾರಿಗಳು ಸೇರಿದಂತೆ ಬೆಳಗಾವಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next