Advertisement

ಚಿಕ್ಕೋಡಿಯಿಂದಲೇ ಲೋಕಸಭೆಗೆ ರಣಕಹಳೆ: ಬಿ.ವೈ.ವಿಜಯೇಂದ್ರ

01:40 PM Mar 06, 2024 | Team Udayavani |

ಉದಯವಾಣಿ ಸಮಾಚಾರ
ಚಿಕ್ಕೋಡಿ: ಚಿಕ್ಕೋಡಿಯಿಂದಲೇ ಚುನಾವಣೆ ರಣಕಹಳೆ ಮೊಳಗಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಚುಕ್ಕಾಣಿ ಹಿಡಿಯಲಿದೆ. ಮೋದಿ ಸಾಧನೆ ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

Advertisement

ನಗರದ ಕಿವಡ ಮೈದಾನದಲ್ಲಿ ನಡೆದ ಚಿಕ್ಕೋಡಿ ಲೋಕಸಭೆ ಮತಕ್ಷೇತ್ರದ ಬೂತ್‌ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರದ ಭ್ರಷ್ಟಾಚಾರದಿಂದ ಜನ ಬೇಸತ್ತು ಹೋಗಿದ್ದರು. ಕಳೆದ ಎರಡು ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿದು ಉತ್ತಮ ಆಡಳಿತ ನಡೆಸಿದೆ.ಮೋದಿ ಕಾರ್ಯ ಕ್ರಮಗಳಿಂದ ಪ್ರತಿಯೊಬ್ಬರಿಗೂ ಲಾಭವಾಗಿದೆ ಎಂದರು.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಬಿಜೆಪಿ ಮೇಲೆ ಕಾಂಗ್ರೆಸ್‌ ಸುಳ್ಳು ಅಪಾದನೆ ಮಾಡುತ್ತಿದೆ. ಈ ಹಿಂದಿನ ಯುಪಿಎ ಸರ್ಕಾರ ರಾಜ್ಯಕ್ಕೆ 65 ಸಾವಿರ ಕೋಟಿ ರೂ. ಕೊಟ್ಟರೆ ಪ್ರಧಾನಿ ಮೋದಿ 2.85 ಲಕ್ಷ ಕೋಟಿ ರೂ. ಅನುದಾನ ರಾಜ್ಯಕ್ಕೆ ಕೊಟ್ಟಿದ್ದಾರೆ. ಕಾಂಗ್ರೆಸ್‌ ಸರ್ಕಾರ ಬಡವರ, ರೈತರ ವಿರೋಧಿ  ಸರ್ಕಾರವಾಗಿದೆ. ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಅಭಿವೃದ್ಧಿ ಕುಂಠಿತಗೊಂಡಿದೆ. ಭೀಕರ ಬರಗಾಲ ಎದುರಾಗಿದೆ.

ಆದರೂ ರೈತರ ಸಂಕಷ್ಟಕ್ಕೆ ಸ್ಪಂದಿ ಸುತ್ತಿಲ್ಲ. 800ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡರೂ ರೈತರಿಗೆ ಧೈರ್ಯ
ತುಂಬುವ ಕೆಲಸ ಮಾಡುತ್ತಿಲ್ಲ. ಅಲ್ಪಸಂಖ್ಯಾತರ ಓಲೈಕೆಗೆ ಸರ್ಕಾರ ಮುಂದಾಗಿದೆ. ರೈತರಿಗೆ ಪರಿಹಾರ ಕೊಡುತ್ತಿಲ್ಲ. ದೇಶದ ಬಗ್ಗೆ ಪ್ರೀತಿ ಇದ್ದರೆ ರಾಜ್ಯಸಭೆ ಸದಸ್ಯ ನಾಸಿರ್‌ ಹುಸೇನ್‌ ಮೇಲೆ ಕ್ರಮ ಜರುಗಿಸಬೇಕು. ರಾಜ್ಯದ 28 ಸ್ಥಾನಗಳಲ್ಲೂ ಬಿಜೆಪಿ-ಜೆಡಿಎಸ್‌ ಒಗ್ಗಟ್ಟಾಗಿ ಗೆಲ್ಲುತ್ತೇವೆ. ಇದು ನಮ್ಮ ಶಪಥವಾಗಿದೆ ಎಂದು ವಿಜಯೇಂದ್ರ ಜೆ.ಪಿ ನಡ್ಡಾಗೆ ಭರವಸೆ ನೀಡಿದರು.

ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಚಿಕ್ಕೋಡಿಯಲ್ಲಿ ಬೂತ್‌ ಮಟ್ಟದ ಪದಾಧಿಕಾರಿಗಳ ಜತೆ ರಾಷ್ಟ್ರೀಯ ಅಧ್ಯಕ್ಷರು ಸಂವಾದ ನಡೆಸಿರುವುದು ಐತಿಹಾಸಿಕ. ಪಕ್ಷದ ಸಂಘಟನೆಯಲ್ಲಿ ಜೆ.ಪಿ.ನಡ್ಡಾ ಕೊಡುಗೆ ಅಪಾರವಾಗಿದೆ. ವಿಜಯೇಂದ್ರ ಅಧ್ಯಕ್ಷನಾದ ಮೇಲೆ ರಾಜ್ಯದ ಕಾರ್ಯಕರ್ತರಲ್ಲಿ ಹೆಚ್ಚಿನ ಉತ್ಸಾಹ ಮೂಡಿದೆ ಎಂದರು.

Advertisement

ಮಾಜಿ ಸಂಸದ ರಮೇಶ ಕತ್ತಿ ಮಾತನಾಡಿ, ಕಳೆದ ಹತ್ತು ವರ್ಷದಲ್ಲಿ ಅನೇಕ ಜನಪರ ಯೋಜನೆ ಜಾರಿ ಮಾಡಿದೆ. ಭಾರತದ ಉಜ್ವಲ ಭವಿಷ್ಯಕ್ಕಾಗಿ ಬಿಜೆಪಿ ಬೆಂಬಲಿಸಬೇಕು. ಕಳೆದ ಚುನಾವಣೆಯಲ್ಲಿ ಆದ ತಪ್ಪು ಸರಿ ಮಾಡಿಕೊಂಡು ಈಗ ನಡೆಯುವ
ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಎಲ್ಲ ಕಾರ್ಯಕರ್ತರು ಒಗ್ಗಟ್ಟಾಗಿ ಪ್ರಯತ್ನ ಮಾಡಬೇಕು ಎಂದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿ, ಮೋದಿ ಅವರು ದೇಶದ ಏಕತೆ, ಅಖಂಡತೆ ಕಾಪಾಡುವ ನಿಟ್ಟಿನಲ್ಲಿ ವಿಶೇಷ ಪ್ರಯತ್ನ ಮಾಡಿ ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಸಾಬೀತು ಮಾಡಿದ್ದಾರೆ. ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಬೆಳಗಾವಿ ಜಿಲ್ಲೆಗೆ ಹೆಚ್ಚು ಅನುದಾನ ನೀಡಿದ್ದಾರೆ. ಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಬೇಕು ಎಂದರು.

ರಾಜ್ಯ ಉಸ್ತುವಾರಿ ರಾಧಾಮೋಹನದಾಸ ಅಗರವಾಲ, ಶಾಸಕಿ ಶಶಿಕಲಾ ಜೊಲ್ಲೆ, ಶಾಸಕ ದುರ್ಯೋಧನ ಐಹೊಳೆ, ವಿಧಾನ ಪರಿಷತ್‌ ಸದಸ್ಯ ಹಣಮಂತ ನಿರಾಣಿ, ಶಾಸಕರಾದ ಅಭಯ ಪಾಟೀಲ, ನಿಖಿಲ ಕತ್ತಿ, ಮಾಜಿ ಶಾಸಕ ಮಹೇಶ ಕುಮಠಳ್ಳಿ. ಮುಖಂಡ ಅಮಿತ್‌ ಕೋರೆ, ವಿಭಾಗೀಯ ಪ್ರಭಾರಿ ಬಸವರಾಜ ಯಕ್ಕಂಚಿ, ಡಾ|ರಾಜೇಶ ನೇರ್ಲಿ, ಮಲ್ಲಿಕಾರ್ಜುನ ಕೋರೆ, ಪವನ ಕತ್ತಿ, ಮಹೇಶ ಭಾತೆ, ಸಂಜಯ ಕವಟಗಿಮಠ ಮುಂತಾದವರು ಇದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ ಸ್ವಾಗತಿಸಿದರು. ಅಮೃತ ಕುಲಕರ್ಣಿ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next