Advertisement

ಪಶ್ಚಿಮ ಬಂಗಾಳದಲ್ಲಿ ಬುಡಕಟ್ಟು ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ

10:42 PM Apr 22, 2023 | Team Udayavani |

ಕೋಲ್ಕತ: ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯ ಕಲಿಯಾಗಂಜ್‌ನಲ್ಲಿ ಬುಡಕಟ್ಟು ಬಾಲಕಿಯನ್ನು ಸಾಮೂಹಿಕ ಅತ್ಯಾಚಾರಕ್ಕೊಳಪಡಿಸಿ, ಕೊಲೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ತೀವ್ರ ಹಿಂಸಾಚಾರ ಭುಗಿಲೆದ್ದಿದೆ. ಮನೆಪಾಠಕ್ಕೆಂದು ಗುರುವಾರ ತೆರಳಿದ್ದ ಗಂಗುವಾ ಗ್ರಾಮದ ನಿವಾಸಿಯಾದ ಬಾಲಕಿ ನಾಪತ್ತೆಯಾಗಿದ್ದಳು. ಇಡೀ ರಾತ್ರಿ ಕುಟುಂಬದವರು ಮತ್ತು ಗ್ರಾಮಸ್ಥರು ಹುಡುಕಾಟ ನಡೆಸಿದರೂ ದೊರೆತಿರಲಿಲ್ಲ. ಶುಕ್ರವಾರ ಬೆಳಗ್ಗೆ ಕಲಿಯಾಗಂಜ್‌ನ ಕೆರೆಯ ದಡದಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು.
ಶನಿವಾರ ಉದ್ರಿಕ್ತ ಜನರು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಚ್‌ ಮತ್ತು ಅಶ್ರು ವಾಯು ಸಿಡಿಸಿದ್ದಾರೆ. “ಪರಿಸ್ಥಿತಿ ಬಿಗಡಾಯಿಸಿದ್ದು, ಈ ಸಮಯದಲ್ಲಿ ಮೃತದೇಹವನ್ನು ನಮ್ಮ ವಶಕ್ಕೆ ಪಡೆಯಬೇಕಿದೆ. ತನಿಖೆಯ ಹಿನ್ನೆಲೆಯಲ್ಲಿ ಇದು ಅತಿ ಮುಖ್ಯ ಸಾಕ್ಷಿಯಾಗಿದೆ. ತಡಮಾಡದೇ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಬೇಕಿದೆ” ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

ಇದೇ ವೇಳೆ ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ಮತ್ತು ಬಾಳೂರ್‌ಘಾಟ್‌ ಸಂಸದ ಸುಕಾಂತ ಮಜುಂದಾರ್‌ ಅವರು ಸಂತ್ರಸ್ತೆಯ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. “ಘಟನೆಯ ಬಗ್ಗೆ ತನಿಖೆ ನಡೆಸಲು ರಾಜ್ಯ ಪೊಲೀಸರು ಅಸಮರ್ಥರಾಗಿದ್ದಾರೆ. ಸಂತ್ರಸ್ತೆಯ ಮೃತದೇಹವನ್ನು ರಸ್ತೆಯಲ್ಲಿ ಪೊಲೀಸರು ಎಳೆದುಕೊಂಡು ಹೋಗಿದ್ದಾರೆ” ಎಂದು ಬಿಜೆಪಿ ಆರೋಪಿಸಿದೆ.

ಬಾಲಕಿಯ ಅತ್ಯಾಚಾರ, ಸಾವಿನ ಹಿನ್ನೆಲೆಯಲ್ಲಿ ಸೂಕ್ತ ನ್ಯಾಯಕ್ಕೆ ಒತ್ತಾಯಿಸಿ ಸ್ಥಳೀಯರು ಪ್ರತಿಭಟನೆ ಮುಂದುವರಿಸಿದ್ದಾರೆ. ಇನ್ನೊಂದೆಡೆ, ಘಟನೆಗೆ ಸಂಬಂಧಿಸಿದಂತೆ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿದ್ದು, ತನಿಖೆಗೆ ಮುಂದಾಗಿದೆ. ಆಯೋಗದ ಮುಖ್ಯಸ್ಥ ಪ್ರಿಯಾಂಕ್‌ ಕಾನೂಂಗ್‌ ಮತ್ತು ಅವರ ತಂಡ ಭಾನುವಾರ ಘಟನಾ ಸ್ಥಳಕ್ಕೆ ಆಗಮಿಸುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next