Advertisement

ಬಾಲಕಿ ಮೇಲೆ ಅತ್ಯಾಚಾರ: ಬಸ್‌ ಚಾಲಕನಿಗೆ 20 ವರ್ಷ ಜೈಲು

07:40 PM Mar 21, 2023 | Team Udayavani |

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಮಂಗಳೂರಿನ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

Advertisement

ಕಾವೂರು ಮರಕಡ ಸಮೀಪದ ನಿವಾಸಿ, ಬಸ್‌ ಚಾಲಕ ದಯಾನಂದ ದಾನಣ್ಣನವರ್‌ (30) ಶಿಕ್ಷೆಗೊಳಗಾದ ಆರೋಪಿ. ಈತ 13 ವರ್ಷದ ಬಾಲಕಿ (ವಿದ್ಯಾರ್ಥಿನಿ)ಯೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಪರಿಚಯ ಮಾಡಿಕೊಂಡಿದ್ದ. 2022ರ ಜ. 27ರಂದು ಹೊರಗಡೆ ತಿರುಗಾಡುವುದಕ್ಕೆ ಬರುವಂತೆ ಸಂದೇಶ ಕಳುಹಿಸಿದ್ದ. ಬಾಲಕಿ ಇದಕ್ಕೆ ನಿರಾಕರಿಸಿದ್ದಳು. ಆದರೂ ಆಕೆ ಒತ್ತಾಯ ಮಾಡಿ ಪುಸಲಾಯಿಸಿ ಜ. 28ರಂದು ಆಟೋರಿಕ್ಷಾದಲ್ಲಿ ಮಂಗಳೂರಿನ ಹಂಪನಕಟ್ಟೆಗೆ ಕರೆದೊಯ್ದು ಲಾಡ್ಜ್‌ನಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ. ಬಳಿಕ ಮನೆ ಬಳಿ ಕರೆತಂದು ಬಿಟ್ಟು ಹೋಗಿದ್ದ.

ಮನೆಯಲ್ಲಿ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಬಾಲಕಿ ಮನೆಯಲ್ಲಿ ನಡೆದ ವಿಷಯ ತಿಳಿಸಿದ್ದಳು. ಮನೆಯವರು ಮಂಗಳೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದರು. ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್ಟಿಎಸ್‌ಸಿ-2 ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಅವರು ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ ಪೋಕ್ಸೋ ಕಲಂ 4ರಡಿ 20 ವರ್ಷ ಜೈಲು, 50,000 ರೂ. ದಂಡ ವಿಧಿಸಿ, ದಂಡ ಪಾವತಿಸಲು ತಪ್ಪಿದರೆ ಮತ್ತೆ 4 ತಿಂಗಳು ಜೈಲು ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ.

ನೊಂದ ಬಾಲಕಿಗೆ 3 ಲ.ರೂ. ಪರಿಹಾರ ನೀಡಬೇಕು. ಅದರಲ್ಲಿ 1 ಲ.ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಿ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಬೇಕು. ಉಳಿದ 2 ಲ.ರೂ.ಗಳನ್ನು ಆಕೆಯ ಹೆಸರಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಠೇವಣಿ ಇಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಮಹಿಳಾ ಠಾಣೆಯ ಪೊಲೀಸ್‌ ನಿರೀಕ್ಷಕರಾಗಿದ್ದ ಎಸ್‌.ಎಚ್‌. ಭಜಂತ್ರಿ ಮತ್ತು ರೇವತಿ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಶೇಷ ಸರಕಾರಿ ಅಭಿಯೋಜಕ ವೆಂಕಟರಮಣ ಸ್ವಾಮಿ ಸಿ. ಸರಕಾರದ ಪರ ವಾದಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next