Advertisement

ಯುವತಿ ಸಾವಿನ ಪ್ರಕರಣ ಸಿಒಡಿಗೆ ವಹಿಸಲು ಒತ್ತಾಯ

03:16 PM Apr 21, 2019 | Naveen |

ರಾಯಚೂರು: ಇಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಆಗ್ರಹಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರೆ, ಪ್ರಕರಣವನ್ನು ಸಿಒಡಿ ತನಿಖೆಗೆ ವಹಿಸುವಂತೆ ಆಗ್ರಹಿಸಿ ಶಕ್ತಿನಗರದಲ್ಲಿ ಯುವಕರು
ಪ್ರತಿಭಟನೆ ನಡೆಸಿದರು.

Advertisement

ವಿವಿಧ ಸಂಘಟನೆಗಳು, ವಿದ್ಯಾರ್ಥಿಗಳು ಶಕ್ತಿನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿದರು. ಇನ್ನು ಅತ್ಯಾಚಾರ ವಿರೋಧಿ  ಜನ ಚಳವಳಿ ಸದಸ್ಯೆ ಮಲ್ಲಿಗೆ, ಮದ್ಯ ನಿಷೇಧ ಆಂದೋಲನ ಕರ್ನಾಟಕದ ಸಂಚಾಲಕಿ ವಿದ್ಯಾ ಪಾಟೀಲ, ಕರ್ನಾಟಕ ಜನಶಕ್ತಿ ಸಂಘಟನೆ ಸೇರಿ ವಿವಿಧ ಸಂಘಟನೆಗಳ ಮುಖಂಡರು ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಒತ್ತಾಯಿಸಿದರು.

ತನಿಖೆಗೆ ತಂಡ ರಚನೆ: ನಗರದ ಎಸ್ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಕಿಶೋರ ಬಾಬು, ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ ಅವರ ಪಾಲಕರು ನೀಡಿದ ಮಾಹಿತಿ ಮೇರೆಗೆ ಅನುಮಾನಸ್ಪದ ಸಾವು ಎಂದು ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಅವರು ಅತ್ಯಾಚಾರ ಮತ್ತು ಕೊಲೆ ಎಂದು ಹೇಳಿದ್ದರಿಂದ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದರ ವಿಶೇಷ ತನಿಖೆ ನಡೆಸುವಂತೆ ಡಿವೈಎಸ್ಪಿ ಹರಿಬಾಬು ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ. ಲಭ್ಯ ಮಾಹಿತಿ ಆಧರಿಸಿ ತನಿಖೆ ಕೈಗೊಳ್ಳಲಾಗುತ್ತಿದೆ. ಇನ್ನೂ ಶವಪರೀಕ್ಷೆ ವರದಿ ಬಂದಿಲ್ಲ. ಅದು ಬಂದ ಮೇಲೆ ನಿಖರ ಕಾರಣ ತಿಳಿದು ಬರಲಿದೆ ಎಂದು ತಿಳಿಸಿದರು.

ಬಳ್ಳಾರಿ ಡಿಐಜಿ ಎಂ.ನಂಜುಂಡಸ್ವಾಮಿ ಮಾತನಾಡಿ, ಈ ಪ್ರಕರಣ ಈಗಾಗಲೇ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದೆ. ನಾವು ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಕೆಲವರು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ತಪ್ಪು ಸಂದೇಶ ಹರಡುತ್ತಿದ್ದಾರೆ. ಆದರೆ, ತಪ್ಪು ಯಾರೇ ಮಾಡಿರಲಿ ಅವರಿಗೆ ತಕ್ಕ ಶಿಕ್ಷೆಯಂತೂ ಆಗಲಿದೆ. ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next