Advertisement

Waqf ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಿ: ಸಚಿವ ಜಮೀರ್ ಅಹಮದ್ ಗಡುವು

01:05 PM Dec 28, 2023 | Team Udayavani |

ಬೆಂಗಳೂರು: ರಾಜ್ಯದಲ್ಲಿ ವಖ್ಫ್ ಆಸ್ತಿ ಒತ್ತುವರಿಗೆ ಸಂಬಂಧಿಸಿದಂತೆ ಪ್ರತಿ ಜಿಲ್ಲೆ ಹಾಗೂ ತಾಲೂಕು ಗಳ ಸಮಗ್ರ ವರದಿ ಒಂದು ತಿಂಗಳಲ್ಲಿ ಸಲ್ಲಿಸಲು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಗಡುವು ನೀಡಿದ್ದಾರೆ.

Advertisement

ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿ ಜಿಲ್ಲಾ ವಖ್ಫ್ ಅಧಿಕಾರಿಗಳ ಸಭೆ ನಡೆಸಿದ ಅವರು, ಜಿಲ್ಲಾವಾರು ವಖ್ಫ್ ಆಸ್ತಿಗಳ ಸರ್ಕಾರಿ ಒತ್ತುವರಿ, ಖಾಸಗಿ ಒತ್ತುವರಿ, ನ್ಯಾಯಾಲಯದಲ್ಲಿರುವ ಪ್ರಕರಣ ಸೇರಿ ಸಮಗ್ರ ಮಾಹಿತಿ ಜಿಲ್ಲಾ ಅಧಿಕಾರಿಗಳು ಸಲ್ಲಿಸಬೇಕು ಎಂದು ಸೂಚನೆ ನೀಡಿದರು.

ವಖ್ಫ್ ಆಸ್ತಿಗಳ ಒತ್ತುವರಿ ಬಗ್ಗೆ ಖಾಸಗಿ ಸಂಸ್ಥೆಯಿಂದಲೂ ಪ್ರತ್ಯೇಕ ಸಮೀಕ್ಷೆ ನಡೆಸಲಾಗುತ್ತಿದೆ. ಅಧಿಕಾರಿಗಳು ನೀಡುವ ವರದಿ, ಖಾಸಗಿ ಸಂಸ್ಥೆಯ ಮಾಹಿತಿ ತಾಳೆ ಆಗಬೇಕು. ಒಂದೊಮ್ಮೆ ತಾಳೆ ಆಗದಿದ್ದರೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಗಳಲ್ಲಿ ಕೆಲವು ಅಧಿಕಾರಿಗಳು ನ್ಯಾಯಾಲಯದಲ್ಲಿರುವ ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸದೆ ನ್ಯಾಯಾಲಯಕ್ಕೆ ಹಾಜಾರಾಗದೆ ಪರೋಕ್ಷವಾಗಿ ಒತ್ತುವರಿದಾರರ ಜತೆ ಶಾಮೀಲಾಗಿರುವ ಮಾಹಿತಿ ಇದೆ, ವರ್ತನೆ ಸರಿ ಪಡಿಸಿಕೊಳ್ಳದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಹಣ ಮಾಡಲು ವಖ್ಫ್ ಇಲಾಖೆಗೆ ಬರಬೇಡಿ. ಇದು ದೇವರ ಕೆಲಸ ಆರೋಪ ಕೇಳಿ ಬಂದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Advertisement

ವಖ್ಫ್ ಅಸ್ತಿಗಳ ರಕ್ಷಣೆಗೆ ಕಾಂಪೌಂಡ್ ಗೋಡೆ ನಿರ್ಮಿಸಲು ಅಗತ್ಯ ಇರುವ ಕಡೆ ಪ್ರಸ್ತಾವನೆ ಸಲ್ಲಿಸಿ. ವಖ್ಫ್ ಆಸ್ತಿ ಎಂದು ಗುರುತಿಸುವಂತಾಗಲು ಏಕ ರೂಪದ ಕಾಪೌಂಡ್ ಹಾಕಬೇಕು ಎಂದರು.

ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next