ಭಾಲ್ಕಿ: 371 (ಜೆ) ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಅನುದಾನ ರಹಿತ ಶಾಲೆಗಳಿಗೆ ಆರ್ಥಿಕ ಸೌಲಭ್ಯ ಒದಗಿಸಬೇಕು ಎಂದು ಅನುದಾನ ರಹಿತ ಶಾಲಾ ಒಕ್ಕೂಟದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಈ ಕುರಿತು ಪಟ್ಟಣಕ್ಕೆ ಆಗಮಿಸಿದ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ ಖಾಸಗಿ ಅನುದಾನ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಪದಾಧಿಕಾರಿಗಳು, ದಾಸ್ಯದ ಸಂಕೇತವಾಗಿದ್ದ ಹೈದರಾಬಾದ್ ಕರ್ನಾಟಕ ಪ್ರದೇಶವನ್ನು ಅಭಿವೃದ್ಧಿ ಸಂಕೇತವಾಗಿಸಲು ಕಲ್ಯಾಣ ಕರ್ನಾಟಕ ಎಂದು ನಾಮಕರಣವಾಗಿದೆ. ಈ ಭಾಗದ ಜನತೆಗೆ ಖುಷಿ ತಂದಿದೆ. ಆದರೆ, ಈ ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಸ್ಥಿತಿ ದಯನೀಯವಾಗಿದೆ.
ಕಳೆದ 10-20 ವರ್ಷಗಳಿಂದ ಈ ಭಾಗದ ಖಾಸಗಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರು ಆರ್ಥಿಕ ಭದ್ರತೆ ಇಲ್ಲದೇ ತೊಂದರೆ ಅನುಭವಿಸುತ್ತಿದ್ದಾರೆ. ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಫಲಿತಾಂಶವನ್ನು ಉತ್ತಮಗೊಳಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ 371(ಜೆ) ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಶಾಲೆಗಳಿಗೆ ಅನುದಾನ ಕೊಡಬೇಕು, ಆರ್ಟಿಇ ಅಡಿಯಲ್ಲಿ ಈ ಭಾಗದ ಬಡ ಮಕ್ಕಳಿಗೆ ಖಾಸಗಿ ಶಾಲೆಗಳ ಪ್ರವೇಶವನ್ನು ಪುನಃ ಆರಂಭಿಸಬೇಕು, ಕೊರೊನಾ ಅವಧಿಯಲ್ಲಿ ಘೋಷಿಸಿದ ಪರಿಹಾರವನ್ನು ಖಾಸಗಿ ಶಾಲೆಗಳ ಎಲ್ಲಾ ಶಿಕ್ಷಕರಿಗೂ ದೊರೆಯಬೇಕು, ಎಲ್ಲ ಖಾಸಗಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ಹುದ್ದೆಗಳು ಅನುಮೋದನೆಗೊಳ್ಳಬೇಕು, 371 (ಜೆ) ಅಡಿಯಲ್ಲಿ ಖಾಸಗಿ ಶಾಲೆಗಳಿಗೆ ಮೂಲ ಸೌಲಭ್ಯ ಒದಗಿಸಬೇಕು, ಖಾಸಗಿ ಶಿಕ್ಷಣ ಸಂಸ್ಥೆಗಳು ಖರೀದಿಸಿದ ಜಮೀನನ್ನು ಭೂಪರಿವರ್ತನೆ (ಎನ್.ಎ) ಗೊಳಿಸಲು ನಿಯಮಗಳನ್ನು ಸರಳಿಕರಣಗೊಳಿಸಬೇಕು. ಗಡಿ ಭಾಗದಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಅನುದಾನ ರಹಿತ ಖಾಸಗಿ ಶಾಲೆಗಳ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು ಇದ್ದರು.