Advertisement

ಗುಳೆ ಪದ್ಧತಿ ತಡೆಗೆ ಆಗ್ರಹ

11:06 AM Jan 11, 2019 | |

ಬಳ್ಳಾರಿ: ಮಹಾನಗರಗಳಿಗೆ ಗುಳೆ ಹೋಗುವುದನ್ನು ನಿಯಂತ್ರಿಸುವುದು ಸೇರಿದಂತೆ ಇನ್ನಿತರೆ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಕರ್ನಾಟಕ ಬಂಜಾರ ಸೇವಾ ಸಂಘದ ಪದಾಧಿಕಾರಿಗಳು ಗುರುವಾರ ಪತ್ರ ಚಳವಳಿ ನಡೆಸಿದರು.

Advertisement

ರಾಜ್ಯದಲ್ಲಿ ಗುಳೆ ಹೋಗುವವರ ಸಂಖ್ಯೆ ತಡೆಗಟ್ಟಲು ರಾಜ್ಯ ಸರ್ಕಾರದಿಂದ ಸೂಕ್ತ ಕ್ರಮ ಕೈಗೊಳ್ಳಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಜನರಿಗೆ ವರ್ಷಪೂರ್ತಿ ಕೆಲಸ ನೀಡಬೇಕು. ಬಹುತೇಕ ಬಡವರಾಗಿರುವ ಬಂಜಾರ ಸಮುದಾಯದಲ್ಲಿ ಉದ್ಯೋಗ ಅರಸಿ ಊರುಬಿಟ್ಟು ಮಹಾನಗರಗಳಿಗೆ ದುಡಿಯಲು ಗುಳೆ ಹೋಗುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇದರಿಂದಾಗಿ ಗುಳೆ ಹೋದವರ ಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಗುಳೆ ಪದ್ಧತಿಯನ್ನು ನಿಯಂತ್ರಿಸಲು ಸಂಬಂಧಪಟ್ಟ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಘದ ಸದಸ್ಯರು ಒತ್ತಾಯಿಸಿದರು.

ಜಿಲ್ಲೆಯ ಎಲ್ಲ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಬೇಕು. ತಾಂಡಾಗಳಿಗೆ ನೀರು, ಆರೋಗ್ಯ ಕೇಂದ್ರ, ಉತ್ತಮ ರಸ್ತೆ ಸೇರಿ ಮೂಲ ಸೌಕರ್ಯ ಕಲ್ಪಿಸಬೇಕು. ಬರುವ ಬಜೆಟ್‌ನಲ್ಲಿ ತಾಂಡಾಗಳ ಅಭಿವೃದ್ಧಿಗಾಗಿ ಕನಿಷ್ಠ ಒಂದು ಸಾವಿರ ಕೋಟಿ ಅನುದಾನ ಮೀಸಲಿಡಬೇಕು ಎಂದು ಸಿಎಂಗೆ ಬರೆದ ಪತ್ರಗಳನ್ನು ಪ್ರಧಾನ ಅಂಚೆ ಕಚೇರಿಯಲ್ಲಿನ ಅಂಚೆ ಪೆಟ್ಟಿಗೆಯಲ್ಲಿ ಹಾಕುವ ಮೂಲಕ ಪತ್ರ ಚಳವಳಿ ನಡೆಸಿದರು. ಈ ಸಂದರ್ಭದಲ್ಲಿ ಸಂಘದ ಮುಖಂಡರಾದ ಎಸ್‌.ಚಂದ್ರನಾಯ್ಕ, ರಾಮಾನಾಯ್ಕ, ಧರ್ಮ, ರಮೇಶ್‌ ಸೇರಿ ಸಮುದಾಯದ ಮುಖಂಡರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next