Advertisement

ಮತ ಎಣಿಕೆಗೆ ಅಗತ್ಯ ಕ್ರಮ

05:01 PM May 15, 2018 | |

ಶಿವಮೊಗ್ಗ: ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮೇ 15ರಂದು ಬೆಳಗ್ಗೆ 8 ಗಂಟೆಯಿಂದ ನಗರದ ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ನಡೆಯಲಿದ್ದು, ಮತ ಎಣಿಕೆ ಕಾರ್ಯ ಸುಗಮವಾಗಿ ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ| ಎಂ. ಲೋಕೇಶ್‌ ಹೇಳಿದರು.

Advertisement

ನಗರದ ಕುವೆಂಪು ರಂಗಮಂದಿರದಲ್ಲಿ ಸೋಮವಾರ ಮತ ಎಣಿಕೆ ಕಾರ್ಯಕ್ಕೆ ನಿಯೋಜಿತ ಸಿಬ್ಬಂದಿಗಳಿಗಾಗಿ
ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜಿಲ್ಲೆಯಲ್ಲಿ ನಡೆದ ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಜಿಲ್ಲಾಡಳಿತ ಸೂಚಿಸಿದ ಕಾರ್ಯವನ್ನು ಅಚ್ಚುಕಟ್ಟಾಗಿ ಹಾಗೂ ಯಾವುದೇ ದೂರುಗಳು ಬಾರದಂತೆ ಸಕಾಲದಲ್ಲಿ ಕಾರ್ಯ ನಿರ್ವಹಿಸಿದ ಅಧಿಕಾರಿಗಳು ಹಾಗೂ
ಸಿಬ್ಬಂದಿ ಕಾರ್ಯವನ್ನು ಶ್ಲಾಘಿಸಿದರು.

ಹಿಂದೆ ನಿರ್ವಹಿಸಿದ ಎಲ್ಲಾ ಕೆಲಸ ಕಾರ್ಯಗಳಿಗಿಂತ ಮತ ಎಣಿಕೆ ಮಹತ್ವದ ಘಟ್ಟವಾಗಿದ್ದು, ನಿಯೋಜಿತ ಸಿಬ್ಬಂದಿಗಳು
ಯಾವುದೇ ಆತಂಕಕ್ಕೆ ಒಳಗಾಗದೇ ತಾಳ್ಮೆಯಿಂದ ತಮಗೆ ವಹಿಸಿದ ಜವಾಬ್ದಾರಿಯನ್ನು ನಿರ್ವಹಿಸಬೇಕು. ಚುನಾವಣಾ ಆಯೋಗ ನಿರ್ದೇಶಿಸಿದಂತೆ ನಿಯಮಾನುಸಾರ ಕಾರ್ಯ ನಿರ್ವಹಿಸಬೇಕೆಂದವರು ಹೇಳಿದರು.

ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆಗೆ ಎರಡು ಕೊಠಡಿಗಳನ್ನು ನಿಗದಿಪಡಿಸಲಾಗಿದೆ. ಅಲ್ಲದೇ ಪ್ರತಿ ಕ್ಷೇತ್ರಕ್ಕೆ
14 ಟೇಬಲ್‌, 28 ಮತ ಎಣಿಕೆಯ ಅಧಿಕಾರಿಗಳು ಹಾಗೂ 14 ಜನ ಮತ ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದ್ದು, ಅಗತ್ಯ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.

Advertisement

ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಸುಗಮವಾಗಿ ನಡೆಯಲು ಪ್ರತ್ಯೇಕವಾಗಿ ಕೊಠಡಿಗಳು,
ಪ್ರತಿಹಂತದ ಎಣಿಕೆಗೆ ಪೂರಕವಾಗಿ ಟೇಬಲ್‌, ಸಿಬ್ಬಂದಿ, ರಕ್ಷಣಾ ಸಿಬ್ಬಂದಿ, ವೀಕ್ಷಕರು, ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದರು.

ಮತ ಎಣಿಕೆಗೆ ನಿಯೋಜಿತರಾದ ಸಿಬ್ಬಂದಿಗಳು ಮೇ 15ರ ಬೆಳಗ್ಗೆ 6ಗಂಟೆಗೆ ನಿಗದಿ ಪಡಿಸಿದ ಸ್ಥಳದಲ್ಲಿ ಸಕಾಲದಲ್ಲಿ
ಹಾಜರಿರಬೇಕು. ಬೆಳಗ್ಗೆ 8 ಗಂಟೆಯಿಂದಲೇ ಎಣಿಕೆ ಆರಂಭಗೊಳ್ಳುತ್ತಿದ್ದು, ಅಂಚೆ ಮತಗಳೊಂದಿಗೆ ಮತ
ಎಣಿಕೆ ಕಾರ್ಯ ಆರಂಭಗೊಳ್ಳಲಿದೆ. ಈ ಮತ ಎಣಿಕೆಯು ಸುಮಾರು 8.20 ಕ್ಕೆ ಮುಕ್ತಾಯಗೊಳ್ಳುತ್ತಿದ್ದಂತೆಯೇ
ವಿದ್ಯುನ್ಮಾನ ಮತಯಂತ್ರದಲ್ಲಿ ದಾಖಲಿಸಲಾದ ಮತ ಎಣಿಕೆ ಕಾರ್ಯ ಆರಂಭಗೊಳ್ಳಲಿದೆ ಎಂದು ತಿಳಿಸಿದರು.

ಮಾಧ್ಯಮ ಕೇಂದ್ರದಲ್ಲಿ ಕಾಲಕಾಲಕ್ಕೆ ಮಾಹಿತಿ ನೀಡಲು ಎಲ್‌ಇಡಿ ಪರದೆ ಹಾಗೂ 2 ಟಿವಿಯನ್ನು ಇರಿಸಲಾಗುವುದು.
ಮತ ಎಣಿಕೆ ಕಾರ್ಯಕ್ಕಾಗಿ ಈಗಾಗಲೇ ಚುನಾವಣಾ ಆಯೋಗದಿಂದ ವಿತರಿಸಲಾದ ಪಾಸುಗಳನ್ನು ತಂದ
ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಪ್ರವೇಶಾವಕಾಶ ನೀಡಲಾಗುವುದು ಎಂದು ಹೇಳಿದರು.

ಚುನಾವಣಾ ಆಯೋಗದ ಸೂಚನೆಯಂತೆ ನಗರದ ಸಹ್ಯಾದ್ರಿ ಕಲಾ ಕಾಲೇಜು ಕಟ್ಟಡವನ್ನು ಚುನಾವಣಾ ಮತ
ಎಣಿಕೆ ಕಾರ್ಯಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ಈಗಾಗಲೇ ವಿದ್ಯುನ್ಮಾನ ಮತಯಂತ್ರಗಳನ್ನು ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ದಾಸ್ತಾನು ಮಾಡಿ, ಸದರಿ ಕಟ್ಟಡವನ್ನು ಪೊಲೀಸ್‌ ಅಭಿರಕ್ಷೆಯಲ್ಲಿ ಇರಿಸಿ ಕಾಲೇಜಿನ ಆವರಣದಲ್ಲಿ ಭದ್ರತೆಯ ಹಿತದೃಷ್ಟಿಯಿಂದ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಸೂಕ್ತ ರಕ್ಷಣೆ ಒದಗಿಸಲಾಗಿದೆ ಎಂದರು.

ಮೇ 15ರಂದು ಸಹ್ಯಾದ್ರಿ ಕಾಲೇಜು ಕ್ಯಾಂಪಸ್‌ ಆವರಣದಲ್ಲಿನ ಸಹ್ಯಾದ್ರಿ ಕಲಾ ಕಾಲೇಜು, ಸಹ್ಯಾದ್ರಿ ವಾಣಿಜ್ಯ
ಕಾಲೇಜು ಮತ್ತು ಸಹ್ಯಾದ್ರಿ ವಿಜ್ಞಾನ ಕಾಲೇಜು ಕ್ಯಾಂಪಸ್‌ ಆವರಣದಲ್ಲಿನ ಎಲ್ಲಾ ಕಚೇರಿಗಳಿಗೆ ಸಾರ್ವಜನಿಕ ರಜೆಯನ್ನು ಚುನಾವಣೆ ಮತ್ತು ಭದ್ರತೆ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ. ಮತ ಎಣಿಕೆ ಕಾರ್ಯಕ್ಕೆ ಆಗಮಿಸುವ ವಿವಿಧ ರಾಜಕೀಯ ಪಕ್ಷಗಳ ಏಜೆಂಟರು ಅಥವಾ ಪ್ರತಿನಿಧಿಗಳು ತಮ್ಮ ಪ್ರವೇಶ ಪತ್ರದೊಂದಿಗೆ ಸಕಾಲದಲ್ಲಿ ಹಾಜರಿರಬೇಕು. ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್‌ ತೆಗೆದುಕೊಂಡು ಹೋಗುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು. 

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಕೆ.ರಾಕೇಶ್‌ಕುಮಾರ್‌, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ, ಎಲ್ಲಾ
ತಾಲೂಕುಗಳ ಚುನಾವಣಾಧಿಕಾರಿಗಳು ಹಾಗೂ ಮತ ಎಣಿಕೆ ವೀಕ್ಷಕರಾಗಿ ಆಗಮಿಸಿರುವ ವೆಂಕಟೇಶ್ವರಲು, ಮನೋಜ್‌ ಕುಮಾರ್‌ ಝಾ ಇದ್ದರು. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಡಾ| ಯೋಗೀಶ್‌ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮತ ಎಣಿಕೆ ಕಾರ್ಯಕ್ಕೆ ನಿಯೋಜಿತ ಸಿಬ್ಬಂದಿಗಳಿಗೆ ತರಬೇತಿ ನೀಡಿದರು.

ಎಲ್ಲಾ ಪ್ರಕ್ರಿಯೆಗಳ ಮಾಹಿತಿಯನ್ನು ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಪ್ರಚುರ ಪಡಿಸಲು ಮತ ಎಣಿಕೆ ಕೇಂದ್ರಕ್ಕೆ ಹೊಂದಿಕೊಂಡಂತೆ ಮಾಧ್ಯಮ ಮಾಹಿತಿ ಕೇಂದ್ರ ತೆರೆಯಲಾಗುವುದು. ಮಾಧ್ಯಮ ಪ್ರತಿನಿಧಿಗಳು ತಾವು ಕುಳಿತಲ್ಲಿಂದಲೇ ಮತ ಎಣಿಕೆ ಪ್ರಕ್ರಿಯೆಗಳ ಸಂಪೂರ್ಣ ಮಾಹಿತಿ ಸಂಗ್ರಹಿಸಿ ಮಾಧ್ಯಮಕ್ಕೆ ರವಾನಿಸಬಹುದಾಗಿದೆ.
ಡಾ| ಲೋಕೇಶ್‌, ಜಿಲ್ಲಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next