Advertisement

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

08:03 PM Oct 18, 2024 | Team Udayavani |

ಬೆಂಗಳೂರು: ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದ್ದು, ಮೀಸಲಾತಿ ವಿಷಯದಲ್ಲಿ ಮುಕ್ತ ಮನಸ್ಸು ಹೊಂದಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕೆಂಬುದು ನಮ್ಮ ಸರ್ಕಾರದ ನಿಲುವು. ಈಗಾಗಲೇ  ಶಾಶ್ವತವಾದ ಹಿಂದುಳಿದ ವರ್ಗಗಳ ಆಯೋಗವಿದೆ. ಅದರ ಅಂತಿಮ ಶಿಫಾರಸ್ಸು ಇನ್ನೂ ನಮ್ಮ ಕೈ ಸೇರಿಲ್ಲ. ಚುನಾವಣೆ ನೀತಿ ಸಂಹಿತೆ ಕಾರಣದಿಂದ ಮೀಸಲಾತಿ ಕುರಿತಾಗಿ ಅಡ್ವೊಕೇಟ್‌ ಜನರಲ್‌, ಕಾನೂನು ಇಲಾಖೆ, ತಜ್ಞರೊಂದಿಗೆ, ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಈಗಲೇ ಯಾತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಪಂಚಮಸಾಲಿ ಸಮುದಾಯದ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ನಿಲುವು ಸ್ಪಷ್ಟಪಡಿಸಿದರು.

Advertisement

ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದರೂ ಪೂರ್ವನಿಗದಿಯಂತೆ  ಪಂಚಮಸಾಲಿ ಲಿಂಗಾಯತ 2ಎ ಮೀಸಲಾತಿ ಸಂಬಂಧ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಸಮುದಾಯದ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಸಭೆಯಲ್ಲಿ ಮಾತನಾಡಿ ಪ್ರವರ್ಗ 2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ  ಹೇಳಿದರು.

ಸಭೆಯ ಮುಖ್ಯಾಂಶಗಳು
1. ಮೀಸಲಾತಿ ಕುರಿತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು, ಅದರ ಶಿಫಾರಸು ಅನ್ವಯ ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಪಂಚಮಸಾಲಿ ಸಮುದಾಯದ ಮುಖಂಡರು ಭೇಟಿಯಾದಾಗ ನಾನು ಸಲಹೆ ನೀಡಿದ್ದೆ. ಯಾವುದೇ ತೀರ್ಮಾನ ನ್ಯಾಯಯುತವಾಗಿ ಎಲ್ಲರಿಗೂ ಒಪ್ಪಿತವಾಗುವಂತೆ, ನ್ಯಾಯಾಲಯಕ್ಕೂ ಒಪ್ಪಿಗೆಯಾಗುವಂತಿರಬೇಕು ಎಂದರು.

2. ಹಿಂದಿನ ಸರ್ಕಾರ ನಿಮ್ಮ ಮನವಿ ಮೇರೆಗೆ 2ಸಿ ಮತ್ತು 2ಡಿ ಹೊಸ ಪ್ರವರ್ಗ ಮಾಡಿತು. 3ಎ ನಲ್ಲಿರುವ ಒಕ್ಕಲಿಗರನ್ನು 2ಸಿ ಗೆ ಸೇರಿಸುವುದು. 3ಬಿಯಲ್ಲಿರುವ ಲಿಂಗಾಯತರನ್ನು 2ಡಿಗೆ ಸೇರಿಸುವ ಪ್ರಸ್ತಾಪ ಮುಂದಿರಿಸಿತು. ಮುಸ್ಲಿಮರ ಮೀಸಲಾತಿಯನ್ನು ತೆಗೆದು ಹಾಕಿತ್ತು. ಮುಸ್ಲಿಮರು ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದಾಗ, ಯಥಾಸ್ಥಿತಿ ಮುಂದುವರೆಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು. ಆದ್ದರಿಂದ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ ಎಂದರು.

3.ಪಂಚಮಸಾಲಿ ಸಮುದಾಯ ಪ್ರಸ್ತುತ ಪ್ರವರ್ಗ 3 ಬಿ ಯಲ್ಲಿದೆ. ಈ ಪ್ರವರ್ಗದಡಿ ಲಿಂಗಾಯತ ಹಾಗೂ ಅದರ ಉಪಜಾತಿಗಳೇ ಮೀಸಲಾತಿ ಸೌಲಭ್ಯ ಪಡೆಯುತ್ತಿವೆ. ಹಾಗಾಗಿ 2ಎ ಪ್ರವರ್ಗದಡಿ ಪಂಚಮಸಾಲಿಗರನ್ನು ಸೇರಿಸಬೇಕೆಂದು ನಿಯೋಗ ಒತ್ತಾಯಿಸಿತು. ಸೂಕ್ತ ಮೀಸಲಾತಿ ಇಲ್ಲದ ಕಾರಣ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕೃಷಿ ಕಾರ್ಮಿಕರು ಹೆಚ್ಚಾಗಿರುವ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಸೇರಿಸಿ ಸಾಮಾಜಿಕ ನ್ಯಾಯ ಒದಗಿಸಲು ನಿಯೋಗ ಮನವಿ ಮಾಡಿತು.

Advertisement

4. ಪಂಚಮಸಾಲಿಗಳಿಗೆ ಮೀಸಲಾತಿ ನೀಡುವ ಸಂಬಂಧ ವರದಿ ಸಲ್ಲಿಸಲು ಜಯಪ್ರಕಾಶ್‌ ಹೆಗ್ಡೆ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಯನ ನಡೆಸಿ, ಮಧ್ಯಂತರ ವರದಿ ಸಲ್ಲಿಸಿದ್ದರೂ, ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮಧ್ಯಂತರ ವರದಿ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲು ಮನವಿ ಮಾಡಿತು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌, ಶಿವರಾಜ ತಂಗಡಗಿ, ಶಾಸಕರಾದ ವಿನಯ್ ಕುಲಕರ್ಣಿ, ವಿಜಯ್ ಕಾಶಪ್ಪನವರ್  ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು, ಸಮುದಾಯದ 40 ಕ್ಕೂ ಹೆಚ್ಚು ಮುಖಂಡರು, ವಕೀಲರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next