Advertisement

ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಗೆ ಚಾಲನೆ

02:44 PM Mar 13, 2022 | Team Udayavani |

ಚಾಮರಾಜನಗರ: ರಾಜ್ಯ ಸರ್ಕಾರದ ವಿನೂತನ ಯೋಜನೆ ಕಂದಾಯ ದಾಖಲೆ ಜನರ ಮನೆ ಬಾಗಿಲಿಗೆಕಾರ್ಯಕ್ರಮಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌. ಕಾತ್ಯಾಯಿನಿದೇವಿ ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ಶನಿವಾರ ಚಾಲನೆ ನೀಡಿದರು.

Advertisement

ಚಾ.ನಗರ ತಾಲೂಕಿನ ಕೂಡ್ಲೂರು ಗ್ರಾಪಂ ಕಚೇರಿಯಲ್ಲಿ ಕಂದಾಯ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅರ್ಹ ಫ‌ಲಾನುಭವಿಗಳಿಗೆ ಆರ್‌ ಟಿಸಿ, ಐಎಲ್‌ಆರ್‌, ಅಟ್ಲಾಸ್‌ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ಉಚಿತವಾಗಿ ವಿತರಿಸಲಾಯಿತು. ನಂತರ ಎಡೀಸಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌. ಕಾತ್ಯಾಯಿನಿದೇವಿ ಮಾತನಾಡಿ, ಕಂದಾಯ ದಾಖಲೆ ಜನರ ಮನೆ ಬಾಗಿಲಿಗೆ ಕಾರ್ಯಕ್ರಮ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಜನಸಾಮಾನ್ಯರು ತಮಗೆ ಅವಶ್ಯವಾಗಿರುವ ದಾಖಲೆಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವುದೇ ಯೋಜನೆಯ ಉದ್ದೇಶವಾಗಿದೆ ಎಂದರು.

ರೈತರಿಗೆ ಅಗತ್ಯ ದಾಖಲೆಗಳನ್ನು ಉಚಿತವಾಗಿ ನೀಡುವ ನಿಟ್ಟಿನಲ್ಲಿ ಕಾನೂನಿನಲ್ಲಿ ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಕಂದಾಯ ದಾಖಲೆ ಮನೆ ಬಾಗಿಲಿಗೆ ಕಾರ್ಯಕ್ರಮದಡಿ ಆರ್‌ಟಿಸಿ, ಜಾತಿ ಹಾಗೂ ಆದಾಯ ಪ್ರಮಾಣಪತ್ರ, ಐಎಲ್‌ ಆರ್‌, ಅಟ್ಲಾಸ್‌ಗಳನ್ನು ಉಚಿತವಾಗಿ ಕೊಡಲಾಗುತ್ತಿದ್ದು ದಾಖಲೆಗಳಲ್ಲಿ ಲೋಪದೋಷಗಳು ಕಂಡುಬಂದಲ್ಲಿ ಮಾ.21ರಿಂದ 26ರವರೆಗೆ ನಾಡ ಕಚೇರಿಯಲ್ಲಿ ಅಟಲ್‌ ಜೀ ಜನಸ್ನೇಹಿ ಕೇಂದ್ರದಲ್ಲಿ ಉಚಿತವಾಗಿ ಸರಿಪಡಿಸಿ ಕೊಡಲಾಗುತ್ತದೆ ಎಂದರು.

ಕೇಂದ್ರ ಮಟ್ಟದಲ್ಲಿಯೇ ದಾಖಲೆಗಳನ್ನು ನೀಡಲಾಗುತ್ತಿ ರುವುದರಿಂದ ಕೆಲವೊಂದು ಲೋಪದೋಷಗಳು ಕಂಡು ಬರುವುದು ಸಹಜ. ಆದ್ದರಿಂದ ಲೋಪದೋಷ ಗಳನ್ನು ಸರಿಪಡಿಸಿಕೊಳ್ಳಲು ಅವಕಾಶವಿದೆ. ಈ ಕಾರ್ಯಕ್ರಮದಡಿ ಉಚಿತವಾಗಿ ದಾಖಲೆಗಳನ್ನು ಪಡೆಯುವ ಮೂಲಕ ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಸರ್ಕಾರವು ಕಂದಾಯ ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವುದರಿಂದ ಸಾರ್ವಜನಿಕರಿಗೆ ಸಮಯ, ಶ್ರಮ ಉಳಿತಾಯವಾಗಲಿದೆ. ಜನತೆ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

Advertisement

ಗ್ರಾಪಂ ಜನಪ್ರತಿನಿಧಿಗಳು ಯೋಜನೆಯ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿ ಕಾರ್ಯಕ್ರಮ ಯಶಸ್ವಿಗೆ ಸಹಕರಿಸಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ ಮನವಿ ಮಾಡಿದರು. ತಹಶೀಲ್ದಾರ್‌ ಚಿದಾನಂದ ಗುರುಸ್ವಾಮಿ ಮಾತನಾಡಿ, ಕಂದಾಯ ದಾಖಲೆ ಮನೆ ಬಾಗಿಲಿಗೆ ಕಾರ್ಯಕ್ರಮವು ರಾಜ್ಯ ಸರ್ಕಾರದ ವಿನೂತನ ಕಾರ್ಯಕ್ರಮವಾಗಿದೆ. ರಾಜ್ಯಾದ್ಯಂತ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ. ತಾಲೂಕಿನಲ್ಲಿ 1.35 ಲಕ್ಷ ರೈತರಿದ್ದು ಈ ಕಾರ್ಯಕ್ರಮ ಅನುಕೂಲವಾಗಲಿದೆ ಎಂದರು.

ಕೂಡ್ಲೂರು ಗ್ರಾಪಂ ಅಧ್ಯಕ್ಷೆ ಯೋಗೇಶ್ವರಿ, ಸದಸ್ಯರಾದ ನಾರಾಯಣಸ್ವಾಮಿ, ಮಹದೇವಸ್ವಾಮಿ, ವಿನೋದಾ, ಬಸಮ್ಮಣ್ಣಿ, ಚಂದ್ರು, ಮಂಜುಳಾ ಕಂದಾಯ ನಿರೀಕ್ಷಕ ಧೂಳಪ್ಪ, ಗ್ರಾಮ ಲೆಕ್ಕಾಧಿಕಾರಿ ರಮೇಶ್‌, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಂಜಿತಾ ಇತರರು ಇದ್ದರು.

ಗ್ರಾಮಸ್ಥರ ದೂರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸ್ಪಂದನೆ : ಕೂಡ್ಲೂರು ಗ್ರಾಮಕ್ಕೆ ಆಗಮಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ ಅವರಿಗೆ ಗ್ರಾಮಸ್ಥರು ಗ್ರಾಮದಲ್ಲಿರುವ ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದು ಪರಿಹರಿಸಿಕೊಡುವಂತೆ ಮನವಿ ಮಾಡಿಕೊಂಡರು.

ಗ್ರಾಮಸ್ಥರ ದೂರುಗಳನ್ನು ಆಲಿಸಿದ ಕಾತ್ಯಾಯಿನಿದೇವಿ, ಮುಂದಿನ ದಿನಗಳಲ್ಲಿ ಗ್ರಾಮದಲ್ಲಿ ಅದಾಲತ್‌ ಕಾರ್ಯಕ್ರಮ ಆಯೋಜಿಸಬೇಕು. ಜೊತೆಗೆ ಜಮೀನುಗಳಿಗೆ ರಸ್ತೆ ನಿರ್ಮಾಣ ಸಂಬಂಧ ಪರಿಶೀಲಿಸಬೇಕು. ಜೊತೆಗೆ ಸರ್ಕಾರಿ ಜಾಗವಿದ್ದರೆ ಅದನ್ನು ಗುರ್ತಿಸಿ ಸ್ಮಶಾನಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next