Advertisement

ಜಾಲಿರೈಡ್‌ ವೇಳೆ ರಸ್ತೆ ಅಪಘಾತ: ಅಪ್ರಾಪ್ತ ಚಾಲಕ ಸಾವು

08:47 PM May 16, 2022 | Team Udayavani |

ಬೆಂಗಳೂರು: ಜಾಲಿರೈಡ್‌ ವೇಳೆ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದುಕೊಂಡು ತೀವ್ರವಾಗಿ ಗಾಯಗೊಂಡಿದ್ದ ಅಪ್ರಾಪ್ತ ಬೈಕ್‌ ಚಾಲಕ ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ವಿದ್ಯಾರಣ್ಯಪುರ ಸ್ವಾಗತ್‌ ಲೇಔಟ್‌ ನಿವಾಸಿ ಸಂತೋಷ್‌ ಕುಮಾರ್‌ (15) ಮೃತ ಸವಾರ. ನಗರದ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಸಂತೋಷ್‌ ಪೋಷಕರು ಭಾನುವಾರ ಆಂಧ್ರಪ್ರದೇಶದ ದೇವಸ್ಥಾನಕ್ಕೆ ತೆರಳಿದ್ದರು.

ಸಹೋದರ ಬಿಇ ವ್ಯಾಸಂಗ ಮಾಡುತ್ತಿದ್ದು, ಹೊರಗೆ ಹೋಗಿದ್ದ. ಸಂಜೆ 4.30ರ ಸುಮಾರಿಗೆ ಸಹೋದರನ  ದ್ವಿಚಕ್ರ ವಾಹನ ತೆಗೆದುಕೊಂಡು ಜಾಲಿ ರೈಡ್‌ ಮಾಡಲು ಹೋಗಿದ್ದಾನೆ. ಜಿಕೆವಿಕೆ ಡಬಲ್‌ ರಸ್ತೆಯಲ್ಲಿ ವೇಗವಾಗಿ ದ್ವಿಚಕ್ರ ವಾಹನ ಚಾಲನೆ ಮಾಡಿದ್ದು, ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದ ಸಂತೋಷ್‌ ತಲೆಗೆ ಗಂಭೀರ ಪೆಟ್ಟು ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದಾನೆ.

ಈ ವೇಳೆ ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಆಟೋ ಚಾಲಕರೊಬ್ಬರು ಸಂತೋಷ್‌ ನೆರವಿಗೆ ಧಾವಿಸಿ ಕೂಡಲೇ ಸ್ಥಳೀಯರ ನೆರವಿನಿಂದ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಲ್ಮೆಟ್‌ ಧರಿಸದ ಪರಿಣಾಮ ಸಂತೋಷ್‌ ಕುಮಾರ್‌ ತೆಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿತ್ತು. ರಾತ್ರಿ 10.30ರ ಸುಮಾರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಂತೋಷ್‌ ಮೃತಪಟ್ಟಿದ್ದಾನೆ ಎಂದು ಸಂಚಾರ ಪೊಲೀಸರು ಹೇಳಿದರು. ಈ ಸಂಬಂಧ ಯಲಹಂಕ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next