Advertisement

500 ಕೋಟಿ ರೂ.ವೆಚ್ಚದಲ್ಲಿ ರಸ್ತೆಗಳ ದುರಸ್ತಿ: ಕಾರಜೋಳ

11:38 PM Aug 31, 2019 | Lakshmi GovindaRaj |

ಹುಬ್ಬಳ್ಳಿ: ನೆರೆಪೀಡಿತ ಪ್ರದೇಶಗಳಲ್ಲಿ ಸಂಪರ್ಕ ಕಡಿತಗೊಂಡ ರಸ್ತೆಗಳ ದುರಸ್ತಿ ಕಾರ್ಯಕ್ಕೆ ಆದ್ಯತೆ ನೀಡಲಾಗಿದೆ. ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸುಮಾರು 500 ಕೋಟಿ ರೂ.ವೆಚ್ಚದಲ್ಲಿ ಕಾಮಗಾರಿ ಆರಂಭಿಸುವಂತೆ ಸೂಚಿಸಲಾಗಿದೆ ಎಂದು ಡಿಸಿಎಂ, ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ತೊಂದರೆಗೊಳಗಾದ ನಿರಾಶ್ರಿತರಿಗೆ ರಕ್ಷಣೆ, ಹಾಳಾಗಿರುವ ರಸ್ತೆ-ಸೇತುವೆಗಳ ಪುನರ್‌ ನಿರ್ಮಾಣ, ನಿರಾಶ್ರಿತರ ಶಿಬಿರಗಳಲ್ಲಿ ಉಳಿದ ಜನರ ವ್ಯವಸ್ಥೆ ಪರಿಶೀಲಿಸಲಾಗುತ್ತಿದೆ. ಮನೆ ಕಳೆದುಕೊಂಡವರಿಗೆ ಪರಿಹಾರ ನೀಡುವ ಕಾರ್ಯ ಪರಿಶೀಲಿಸಲು ಪ್ರವಾಸ ಕೈಗೊ ಳ್ಳಲಾಗುತ್ತಿದ್ದು, ಈಗ ಎರಡು ದಿನಗಳ ಕಾಲ ಬಾಗಲಕೋಟೆ ಜಿಲ್ಲೆಯ ನಿರಾಶ್ರಿತರ ಪ್ರದೇಶ ಗಳಿಗೆ ಭೇಟಿ ಕೊಡುತ್ತಿದ್ದೇನೆ.

ನಂತರ ಮೈಸೂರು, ಕೊಡಗು, ಮಂಗಳೂರು ಜಿಲ್ಲೆಗಳಿಗೆ ಭೇಟಿ ಕೊಟ್ಟು ಪರಿಶೀಲಿಸಲಿದ್ದೇನೆ ಎಂದರು. ಸೆ.7ರಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಿ, ಪ್ರವಾಹ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಈಗಾಗಲೇ ಅವರು ನೆರೆ ಪರಿಹಾರಕ್ಕೆ ಅಧ್ಯಯನ ವರದಿ ತರಿಸಿಕೊಂಡಿದ್ದಾರೆ. ಅವರು ರಾಜ್ಯಕ್ಕೆ ಬಂದು ಹೋದ ಮೇಲೆ ನಿರೀಕ್ಷಿತ ಪ್ರಮಾಣದಲ್ಲಿ ನೆರವು ನೀಡುತ್ತಾರೆಂಬ ವಿಶ್ವಾಸವಿದೆ. ಈಗಾಗಲೇ ಕೇಂದ್ರದ ಅಧ್ಯಯನ ತಂಡ ಬಂದು ಹೋಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next