Advertisement

ಕಾಂಗ್ರೆಸ್ ಬೇಗುದಿಗೆ ಕಾರಣವಾದ ರೋಷನ್ ಬೇಗ್ ಅಮಾನತು

12:02 AM Jun 20, 2019 | Lakshmi GovindaRaj |

ಬೆಂಗಳೂರು: ಶಿವಾಜಿನಗರ ಶಾಸಕ ಆರ್‌.ರೋಷನ್‌ ಬೇಗ್‌ ಅವರನ್ನು ಅಮಾನತು ಮಾಡಿರುವುದು ಕಾಂಗ್ರೆಸ್‌ನಲ್ಲಿ ಮೂಲ ಮತ್ತು ವಲಸಿಗರ ನಡುವಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ.

Advertisement

ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡಿದ್ದ ರೋಷನ್‌ ಬೇಗ್‌ ಅವರನ್ನು ಹೈ ಕಮಾಂಡ್‌ ಸೂಚನೆ ಮೇರೆಗೆ ಅಮಾನತು ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸಮರ್ಥನೆ ಮಾಡಿಕೊಂಡಿದ್ದಾರೆ. ಆದರೆ, ತಮ್ಮ ಅಮಾನತ್ತಿನ ಹಿಂದೆ ಸಿದ್ದರಾಮಯ್ಯ ಅವರ ಕೈವಾಡವಿದೆ ಎಂದು ರೋಷನ್‌ ಬೇಗ್‌ ಆರೋಪ ಮಾಡಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಮೂಲ ಕಾಂಗ್ರೆಸ್‌ ನಾಯಕರು ಅಸಮಾಧಾನ ಹೊಂದಿದ್ದಾರೆ. ಆದರೆ, ಯಾರೂ ಬಹಿರಂಗವಾಗಿ ಹೇಳಿಕೊಳ್ಳದ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ. ಬೇಗ್‌ ಅವರು, ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ವಿರುದ್ಧ ಬಹಿರಂಗವಾಗಿ ಕೀಳುಮಟ್ಟದ ಪದ ಬಳಕೆ ಮಾಡಿದ್ದರು ಎನ್ನುವ ಕಾರಣಕ್ಕೆ ಅವರನ್ನು ಅಮಾನತು ಮಾಡಲಾಗಿದೆ.

ಆದರೆ, ಈ ಬಗ್ಗೆ ಹೈ ಕಮಾಂಡ್‌ ಮೂಲಕ ಎಚ್ಚರಿಕೆ ನೀಡಬಹುದಿತ್ತು ಎಂಬ ಮಾತುಗಳು ಕೇಳಿ ಬರುತ್ತಿವೆ. ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್‌.ಮುನಿಯಪ್ಪ, ರಾಮಲಿಂಗಾ ರೆಡ್ಡಿ, ಎಚ್‌.ಕೆ. ಪಾಟೀಲ್‌ ಅವರು ರೋಷನ್‌ ಬೇಗ್‌ರನ್ನು ಅಮಾನತು ಮಾಡಿರುವ ಕ್ರಮಕ್ಕೆ ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದೆ.

ಅದೇ ಕಾರಣಕ್ಕೆ ರೋಷನ್‌ ಬೇಗ್‌ ತಮ್ಮನ್ನು ಅಮಾನತು ಮಾಡಿರುವ ಕುರಿತು ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ. ತಾವು ಈಗಲೂ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಸತ್ಯ ಹೇಳಿರುವುದಕ್ಕೆ ನನ್ನನ್ನು ಅಮಾನತು ಮಾಡಲಾಗಿದೆ. ತಮ್ಮನ್ನು ಅಮಾನತು ಮಾಡಿರುವ ಕ್ರಮದ ಹಿಂದೆ ಸಿದ್ದರಾಮಯ್ಯ ಪಾತ್ರ ಇದೆ ಎಂದು ಹೇಳಿದ್ದಾರೆ.

Advertisement

ಸಿದ್ದರಾಮಯ್ಯನವರು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಅವರನ್ನು ಮುಂದಿಟ್ಟುಕೊಂಡು ಪಕ್ಷವನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದ್ದಾರೆ ಎಂಬ ಭಾವನೆ ಕಾಂಗ್ರೆಸ್ಸಿಗರಲ್ಲಿ ಮೂಡಿದೆ. ಅದೇ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರಿಗೆ ನೀಡಲಾಗಿರುವ ಸರ್ಕಾರದ ಸಮನ್ವಯ ಸಮಿತಿ ಹಾಗೂ ಶಾಸಕಾಂಗ ಪಕ್ಷದ ನಾಯಕ ಎರಡು ಹುದ್ದೆಗಳಲ್ಲಿ ಒಂದನ್ನು ಬೇರೆಯವರಿಗೆ ನೀಡಬೇಕೆಂಬ ಒತ್ತಡವನ್ನು ಪಕ್ಷದ ಹಿರಿಯ ನಾಯಕರು ಹೈಕಮಾಂಡ್‌ ಮುಂದೆ ಇಟ್ಟಿದ್ದರು.

ಆದರೆ, ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಿ, ತಮ್ಮ ವಿರುದ್ಧದ ಎಲ್ಲ ಆರೋಪಗಳಿಗೆ ಸ್ಪಷ್ಟನೆ ನೀಡಿ, ದಿನೇಶ್‌ ಗುಂಡೂರಾವ್‌ ಅವರನ್ನು ಅಧ್ಯಕ್ಷ ಸ್ಥಾನದಲ್ಲಿ ಉಳಿಸಿಕೊಂಡು ಉಳಿದ ಪದಾಧಿಕಾರಿಗಳನ್ನು ವಿಸರ್ಜಿಸುವ ಮೂಲಕ ಪಕ್ಷವನ್ನು ಮತ್ತಷ್ಟು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಇದು ಮೂಲ ಕಾಂಗ್ರೆಸ್ಸಿಗರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ರೋಷನ್‌ ಬೇಗ್‌ ಅವರು ಪಕ್ಷದ ನಾಯಕರ ವಿರುದ್ಧ ಬಹಿರಂಗವಾಗಿ ಆರೋಪ ಮಾಡಿದ್ದರು. ರಮೇಶ್‌ ಜಾರಕಿಹೊಳಿ ಪ್ರಕರಣಕ್ಕೂ, ಬೇಗ್‌ ಪ್ರಕರಣಕ್ಕೂ ವ್ಯತ್ಯಾಸ ಇದೆ. ನಾಯಕರ ನಡುವೆ ಸಾಕಷ್ಟು ವ್ಯತ್ಯಾಸ ಇರಬಹುದು. ಅದನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕು. ವೈಯಕ್ತಿಕವಾಗಿ ವಾಗ್ಧಾಳಿ ನಡೆಸುವುದು ಸರಿಯಲ್ಲ.
-ಈಶ್ವರ್‌ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ

Advertisement

Udayavani is now on Telegram. Click here to join our channel and stay updated with the latest news.

Next