Advertisement

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

07:31 PM Sep 21, 2024 | Team Udayavani |

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್‌ಸಿ-2 ಪೋಕೊÕ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶರಾದ ಮಾನು ಕೆ.ಎಸ್‌. ಅವರು 20 ವರ್ಷಗಳ ಕಠಿನ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

Advertisement

ಬೆಳ್ತಂಗಡಿ ಸವಣಾಲು ಗ್ರಾಮದ ಸದಾಶಿವ (31) ಶಿಕ್ಷೆಗೊಳಗಾದವನು. ಬಾಲಕಿಯ ತಾಯಿಯ ಮೊಬೈಲ್‌ಗೆ ಕರೆ ಮಾಡಿ ಬಾಲಕಿಯೊಂದಿಗೆ ಮಾತನಾಡುತ್ತಿದ್ದ ಆರೋಪಿ ಬಳಿಕ ಫೇಸ್‌ಬುಕ್‌ನಲ್ಲಿ ಸಂಪರ್ಕವನ್ನಿಟ್ಟುಕೊಂಡಿದ್ದ. 2022ರ ಆ. 9ರಂದು ಬೆಳಗ್ಗೆ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಂದು ಅತ್ಯಾಚಾರವೆಸಗಿದ್ದ. ಅನಂತರ ಫೇಸ್‌ಬುಕ್‌ನಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ. ಮನನೊಂದ ಬಾಲಕಿ ಡೀಸೆಲ್‌ ಸೇವನೆ ಮಾಡಿದ್ದಳು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್‌ ವೃತ್ತ ನಿರೀಕ್ಷಕ ಶಿವಕುಮಾರ್‌ ಬಿ. ತನಿಖೆ ಪೂರ್ಣಗೊಳಿಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಅಭಿಯೋಜನೆಯ ಪರ ಒಟ್ಟು 14 ಸಾಕ್ಷಿದಾರರನ್ನು ವಿಚಾರಿಸಿ 33 ದಾಖಲೆಗಳನ್ನು ಗುರುತಿಸಲಾಗಿತ್ತು. ನ್ಯಾಯಾಧೀಶರು ಸೆ. 21ರಂದು ಆರೋಪಿಯ ವಿರುದ್ಧದ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿ ಪೋಕೊÕ ಕಾಯಿದೆಯಂತೆ 20 ವರ್ಷಗಳ ಕಾಲ ಕಠಿನ ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದ್ದಾರೆ.

ದಂಡದ ಹಣವಾದ 50,000 ರೂ.ಗಳನ್ನು ನೊಂದ ಬಾಲಕಿಗೆ ಪಾವತಿಸುವಂತೆ ಆದೇಶಿಸಿದ್ದಾರೆ. ದಂಡ ಪ್ರಕ್ರಿಯೆ ಸಂಹಿತೆಯ ಕಲಂ 357(ಎ) ಪ್ರಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆಯಡಿ ನೊಂದ ಬಾಲಕಿಗೆ ಹೆಚ್ಚುವರಿಯಾಗಿ 1.50 ಲ.ರೂ. ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನೀಡುವಂತೆ ನಿರ್ದೇಶನ ನೀಡಿದ್ದಾರೆ. ಪ್ರಕರಣದಲ್ಲಿ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಕೆ. ಬದರಿನಾಥ ನಾಯರಿ ಅವರು ಸಾಕ್ಷಿದಾರರನ್ನು ವಿಚಾರಿಸಿ ವಾದ ಮಂಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next