ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ಬಿಜೆಪಿ ಪಕ್ಷದಿಂದ ಮುನಿರತ್ನ, ಕಾಂಗ್ರೆಸ್ ಪಕ್ಷದಿಂದ ಕುಸುಮಾ ಎಚ್ ಹಾಗೂ ಜೆಡಿಎಸ್ ಪಕ್ಷದಿಂದ ಕೃಷ್ಣ ಮೂರ್ತಿ ವಿ ಅವರು ರಾಜರಾಜೇಶ್ವರಿ ನಗರದ ಬಿಬಿಎಂಪಿ ಕಚೇರಿಯಲ್ಲಿ ತಮ್ಮ ನಾಮಪತ್ರಗಳನ್ನು ಸಲ್ಲಿಸಿದರು.
ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಮತ್ತು ಕಂದಾಯ ಸಚಿವರಾದ ಆರ್.ಅಶೋಕ್ ಸಾಥ್ ನೀಡಿದರು.
ಕುಸುಮಾ ಅವರಿಗೆ ಬುಧವಾರ ತಾರಾಬಲ ಇಲ್ಲವೆಂಬ ಕಾರಣಕ್ಕೆ ಜ್ಯೋತಿಷಿ ಸಲಹೆ ಮೇರೆಗೆ ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕುಸುಮಾ ಹುಟ್ಟಿದ ದಿನ ಮಂಗಳವಾಗಿದ್ದರಿಂದ ಜ್ಯೋತಿಷಿ ಡಾ.ಬಿ.ಪಿ. ಆರಾಧ್ಯ ಸಲಹೆಯಂತೆ ಮಂಗಳವಾರ ಮಧ್ಯಾಹ್ನ 12 ರಿಂದ 12.15ರ ನಡುವೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬುಧವಾರ ಬೆಳಗ್ಗೆ 11.45 ಗಂಟೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಜೊತೆಯಲ್ಲಿ ತೆರಳಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು.
ಇದನ್ನೂ ಓದಿ:ಬಂಟ್ವಾಳ: ಧಾರಾಕಾರ ಮಳೆಯಿಂದ ಗುಡ್ಡ ಕುಸಿಯುವ ಭೀತಿ
ಅಂತೆಯೇ ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ಕೃಷ್ಣಮೂರ್ತಿ ಅವರೊಂದಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮತ್ತು ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್. ಪ್ರಕಾಶ್ ಜೊತೆಗಿದ್ದರು.
ಉಪಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಇದೇ 16 ಕೊನೆಯ ದಿನವಾಗಿದ್ದು ಶಿರಾ ಕ್ಷೇತ್ರ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಿಗೆ ನವೆಂಬರ್ 3ಕ್ಕೆ ಮತದಾನ ನಡೆಯಲಿದ್ದು, ನವೆಂಬರ್ 10ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.