Advertisement

ಬರ ನಿರ್ವಹಣೆಗೆ 37.16 ಕೋಟಿ ರೂ. ಪ್ರಸ್ತಾವನೆ: ಜಿಲ್ಲಾಧಿಕಾರಿ

07:21 AM Feb 02, 2019 | Team Udayavani |

ಸಿರುಗುಪ್ಪ: ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಜಿಲ್ಲಾಡಳಿತದಿಂದ ಕೇಂದ್ರ ಸರ್ಕಾರಕ್ಕೆ 37.16 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದರು.

Advertisement

ತಾಲೂಕಿನ ದೇಶನೂರು ಗ್ರಾಮದ ಎನ್‌ಎಸ್‌ಎಲ್‌ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮಳೆ ಇಲ್ಲದೆ 56 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಇದರಲ್ಲಿ 40 ಸಾವಿರ ಹೆಕ್ಟೇರ್‌ ಕಡಲೆ, 16 ಸಾವಿರ ಹೆಕ್ಟೇರ್‌ ಜೋಳ, ಸೂರ್ಯಕಾಂತಿ ಬೆಳೆ ಹಾನಿಯಾಗಿದೆ ಎಂದು ಮಾಹಿತಿ ನೀಡಿದರು.

ಬರ ನಿರ್ವಹಣೆಗಾಗಿ ಪ್ರತಿ ತಾಲೂಕಿನ ತಹಶೀಲ್ದಾರ್‌ಗೆ 25 ಲಕ್ಷ ರೂ. ಅನುದಾನ ನೀಡಲಾಗಿದೆ. ಸದ್ಯ ಮೇವಿನ ಮತ್ತು ನೀರಿನ ಯಾವುದೇ ಕೊರತೆ ಉಂಟಾಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ.

ಬೇಸಿಗೆಯಲ್ಲಿ ಬರ ಪರಿಸ್ಥಿತಿ ಎದುರಿಸಲು ಜಿಲ್ಲೆಯ 5 ಕಡೆ ಗೋಶಾಲೆ ತೆರೆಯಲು ಜಿಲ್ಲಾಡಳಿತದಿಂದ ಸ್ಥಳ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿಸಿದರು. ರೈತರಿಂದ ಮೇವು ಸಂಗ್ರಹ ಕಾರ್ಯ ಭರದಿಂದ ಸಾಗಿದೆ. ಕುಡಿಯುವ ನೀರಿಗಾಗಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 8 ಕೋಟಿ ರೂ. ಕ್ರಿಯಾಯೋಜನೆ ಸಿದ್ಧ ಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಸಮರ್ಥವಾಗಿ ನಿರ್ವಹಿಸಲಾಗುವುದು. ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next