Advertisement

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಮರಣೀಯ

02:21 PM May 29, 2022 | Team Udayavani |

ಚಿಕ್ಕಮಗಳೂರು: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ- ಬಲಿದಾನ ಸ್ಮರಿಸುತ್ತಾ, ರಾಷ್ಟ್ರದ ಹಿತಕ್ಕಾಗಿ ಪ್ರತಿಯೊಬ್ಬರೂ ಶ್ರಮಿಸಬೇಕೆಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್‌ ತಿಳಿಸಿದರು.

Advertisement

ಶನಿವಾರ ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ‘ಸ್ವಾತಂತ್ರ್ಯ ಅಮೃತ ಮಹೋತ್ಸವ’ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯರ ಒಗ್ಗಟ್ಟು ಮುರಿಯುವ ಬ್ರಿಟಿಷರ ತಂತ್ರವನ್ನು ಮೆಟ್ಟಿ ನಿಂತು ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯತ್ಯಾಸಗಳ ನಡುವೆ ಭಾರತೀಯರು ಏಕತೆಯಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು. ಅವರ ಹೋರಾಟವನ್ನು ಪ್ರತಿಯೊಬ್ಬರೂ ಸ್ಮರಿಸುತ್ತಾ, ಅವರ ಆದರ್ಶ ಮತ್ತು ಸಂದೇಶಗಳನ್ನು ಶಿಕ್ಷಕರು ಮತ್ತು ಪೋಷಕರು ವಿದ್ಯಾರ್ಥಿಗಳಿಗೆ ತಿಳಿಸಿ, ಅವರಲ್ಲಿ ರಾಷ್ಟ್ರಪ್ರೇಮವನ್ನು ಬೆಳೆಸಬೇಕೆಂದು ತಿಳಿಸಿದರು.

ಮಹಾತ್ಮ ಗಾಂಧಿಧೀಜಿ ಅವರ ಸ್ವಾತಂತ್ರ್ಯ ಹೋರಾಟದ ಪ್ರೇರಣೆಯಿಂದ ಚಿಕ್ಕಮಗಳೂರು ಜಿಲ್ಲೆಯ ಹಲವಾರು ಮಂದಿ ಅಸಹಕಾರ ಚಳುವಳಿ, ದೇಶ ಬಿಟ್ಟು ತೊಲಗಿ ಚಳುವಳಿಗಳಲ್ಲಿ ಹೋರಾಟ ಮಾಡಿದ್ದಾರೆ. ರಂಗಪ್ಪ ನಾಯಕ್‌ ಮತ್ತು ಹನುಮಂತಪ್ಪ ನಾಯಕ್‌ ಅವರಂತಹ ಹೋರಾಟಗಾರರು ಬ್ರಿಟಿಷರ ಮೋಸದ ಜಾಲಕ್ಕೆ ಸಿಲುಕಿ ಬಲಿಯಾಗಿದ್ದಾರೆ. ಇಂದು ಅವರ ತ್ಯಾಗ- ಬಲಿದಾನವನ್ನು ಸ್ಮರಿಸಿಕೊಳ್ಳಬೇಕು ಎಂದರು.

ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರದ ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ಮೈಗೂಡಿಸಿಕೊಂಡು, ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕು. ಭಾರತವನ್ನು ವಿಶ್ವಗುರುವನ್ನಾಗಿಸಲು ಪ್ರತಿಯೊಬ್ಬ ಭಾರತೀಯನೂ ಕೈಗೂಡಿಸಬೇಕೆಂದು ಕರೆ ನೀಡಿದರು.

Advertisement

ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾತನಾಡಿ, ಭಾರತದ ಮೇಲೆ ದಾಳಿ ನಡೆಸಿದ ಹಲವಾರು ಸಂಸ್ಕೃತಿಗಳು ಇನ್ನೂ ಭಾರತೀಯ ಬದುಕಿನಲ್ಲಿ ಅಚ್ಚಾಗಿ ಉಳಿದಿವೆ. ದೇಶ ಉಳಿಯಲು ಸ್ವಾತಂತ್ರ್ಯ ಹೋರಾಟಗಾರರ ಆದರ್ಶ ಹಾಗೂ ತ್ಯಾಗ, ಬಲಿದಾನಗಳ ಸಂದೇಶಗಳನ್ನು ಪರಂಪರಾಗತವಾಗಿ ತೆಗೆದುಕೊಂಡು ಮುಂದುವರಿಯಬೇಕು ಎಂದು ತಿಳಿಸಿದರು.

ಮಹಾತ್ಮ ಗಾಂಧಿ ಭೇಟಿ ನೀಡಿದ ಕೀರ್ತಿ ಚಿಕ್ಕಮಗಳೂರು ಜಿಲ್ಲೆಗಿದ್ದು, ಅವರ ಭೇಟಿ ನೀಡಿದ ವೇಳೆ ಸ್ವಾತಂತ್ರ್ಯದ ಕಿಚ್ಚು ಹಚ್ಚುವ ಜೊತೆಗೆ ಜಿಲ್ಲೆಯಲ್ಲಿ ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆದರು. ಜಿಲ್ಲೆಯ ಹಲವಾರು ಮಹಿಳೆಯರು ಸ್ವಾತಂತ್ರ್ಯ ಹೋರಾಟಕ್ಕೆ ತಮ್ಮ ಆಭರಣಗಳನ್ನು ದಾನವನ್ನಾಗಿ ನೀಡಿರುವುದನ್ನು ಸ್ಮರಿಸಿಕೊಳ್ಳಬೇಕು ಎಂದರು.

ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು ಪ್ರಾಸ್ತಾವಿಕವಾಗಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹಾಗೂ ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ ಹಲವಾರು ಅವಿಸ್ಮರಣೀಯ ಚೇತನಗಳನ್ನು ಸ್ಮರಿಸುತ್ತಾ, ಭಾರತೀಯ ನಾಗರಿಕರು ನಮಗಾಗಿ ನಾವು ರೂಪಿಸಿಕೊಂಡ ಸಂವಿಧಾನದ ಆಶಯಕ್ಕೆ ಬದ್ಧರಾಗಿ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಿ ಭಾರತವನ್ನು ಸದೃಢ ರಾಷ್ಟ್ರವನ್ನಾಗಿ ನಿರ್ಮಾಣ ಮಾಡಬೇಕು ಎಂದರು.

ಸಮಾರಂಭದಲ್ಲಿ ದಂಡಿಯಾ ವಾಘ್, ಹಳಗಲಿ ಬೇಡರು, ವೆಂಕಟಪ್ಪ ನಾಯಕ್‌, ಮೈಲಾರ ಮಹದೇವ, ನರಸಿಂಗರಾಯ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರನ್ನು ಹಾಗೂ ಈಸೂರು ಪ್ರಕರಣ ಮತ್ತು ವಿದುರಾಶ್ವಥ್ಥ ಹೋರಾಟದಂತಹ ಅನೇಕ ಸ್ವಾತಂತ್ರ್ಯ ಹೋರಾಟಗಳ ಸನ್ನಿವೇಶವನ್ನು ಸಂಕ್ಷಿಪ್ತವಾಗಿ ವಿಶ್ಲೇಷಿಸಿ ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರದ ಕುರಿತ ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು. ಸಮಾರಂಭಕ್ಕೂ ಮುನ್ನ “ಅಮೃತ ಭಾರತಿಗೆ ಕನ್ನಡದಾರತಿ’ ರಥಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್‌ ಅವರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಸಿ. ಆನಂದ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ| ಸಿ.ರಮೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಂಗನಾಥಸ್ವಾಮಿ ಹಾಗೂ ಚಿಕ್ಕಮಗಳೂರು ತಹಶೀಲ್ದಾರ್‌ ವಿನಾಯಕ್‌ ಸಾಗರ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next