Advertisement

ಶಕ್ತಿ ಯೋಜನೆ ಅವಾಂತರ: ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆ

08:33 PM Jul 31, 2023 | Team Udayavani |

ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಸೌಲಭ್ಯ ಒದಗಿಸುವ “ಶಕ್ತಿ ಯೋಜನೆ’ಯಿಂದ ಆರ್ಥಿಕ ಸಂಕಷ್ಟದ ಜೊತೆಗೆ ದಿನನಿತ್ಯ ಅವಾಂತರಗಳು ಸೃಷ್ಟಿಯಾಗುತ್ತಿವೆ ಎಂದು ಆಕ್ಷೇಪಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

Advertisement

ಈ ವಿಚಾರವಾಗಿ ಬೆಂಗಳೂರಿನ ವಿವಿಧ ಕಾನೂನು ಕಾಲೇಜುಗಳ ಕಾನೂನು ವಿದ್ಯಾರ್ಥಿಗಳಾದ ಅಶ್ವಿ‌ನ್‌ ಶಂಕರ್‌ ಭಟ್‌, ನೇಹಾ ವೆಂಕಟೇಶ್‌ ಹಾಗೂ ಯಾಶಿಕಾ ಸರವಣ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಸಾರಿಗೆ ಇಲಾಖೆ, ಕೆಎಸ್‌ಆರ್‌ಟಿ, ಬಿಎಂಟಿಸಿ, ಎನ್‌ಡಬ್ಲೂéಕೆಎಸ್‌ಆರ್‌ಟಿ, ಕೆಕೆಆರ್‌ಟಿಸಿ ಈ ನಾಲ್ಕು ಸಾರಿಗೆ ನಿಗಮಗಳನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಬಸ್‌ಗಳಲ್ಲಿ ಜನದಟ್ಟಣೆ ಹೆಚ್ಚಾಗಿದೆ. ಬಸ್‌ಗಳಲ್ಲಿ ಸೀಟು ಪಡೆದುಕೊಳ್ಳಲು ಗಲಾಟೆ, ಹೊಡೆದಾಟ ಸಂಭವಿಸಿದ ಘಟನೆಗಳು ನಡೆದಿವೆ. ಹಿರಿಯ ನಾಗರಿಕರು, ಮಕ್ಕಳು ಬಸ್‌ಗಳಲ್ಲಿ ಹತ್ತಲು ಆಗುತ್ತಿಲ್ಲ. ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಶಾಲಾ-ಕಾಲೇಜು ತಲುಪಲು ಆಗುತ್ತಿಲ್ಲ.
ಇದರಿಂದಾಗಿ ಬಸ್‌ ಹಾಗೂ ಬಸ್‌ ನಿಲ್ದಾಣಗಳಲ್ಲಿ ಅನುಚಿತ ವರ್ತನೆ, ಅಹಿತಕರ ಘಟನೆಗಳು ನಡೆಯುತ್ತಿವೆ. ಬಸ್‌ ನಿಲ್ದಾಣ ಮತ್ತು ಸರ್ಕಾರಿ ಬಸ್‌ಗಳು ಯುದ್ಧ ಭೂಮಿ, ಮೀನು ಮಾರುಕಟ್ಟೆ ಆಗಿವೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಯೋಜನೆ ಜಾರಿಗೆ ಬಂದಾಗಿನಿಂದ ಮೂರು ಕೋಟಿ ಮಹಿಳೆಯರು ಉಚಿತವಾಗಿ ಬಸ್‌ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಇದರಿಂದ ವಾರಕ್ಕೆ 100 ಕೋಟಿ ರೂ. ತೆರಿಗೆದಾರರ ಹಣ ಸರ್ಕಾರಕ್ಕೆ ನಷ್ಟವಾಗುತ್ತಿದೆ. ಈ ಯೋಜನೆಗೆ ವಾರ್ಷಿಕ 3,200ರಿಂದ 3,400 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

Advertisement

ಶಾಲಾ ಮಕ್ಕಳು ಹಿರಿಯ ನಾಗರಿಕರಿಗೆ ಬಸ್‌ ಹತ್ತಿ-ಇಳಿಯಲು ಸೂಕ್ತ ವ್ಯವಸ್ಥೆ ಮಾಡಬೇಕು. ದೂರದ ಊರಿಗಳಿಗೆ ತೆರಳುವ ಬಸ್‌ಗಳಲ್ಲಿ ಮುಂಗಡ ಟಿಕೆಟ್‌ ಕಾಯ್ದಿರಿಸಿದ ಪ್ರಯಾಣಿಕರಿಗೆ ಬಸ್‌ಗಳಲ್ಲಿ ಹತ್ತಲು ಮೊದಲು ಅವಕಾಶ ಮಾಡಿಕೊಡಬೇಕು. ದೂರದ ಊರುಗಳಿಗೆ ನಿಂತು ಪ್ರಯಾಣಿಸುವುದನ್ನು ನಿಷೇಧಿಸಬೇಕು. ಟಿಕೆಟ್‌ ಪಡೆದವರಿಗೆ ಶೇ.50ರಷ್ಟು ಸೀಟುಗಳನ್ನು ಮೀಸಲಿಡಬೇಕು. ಕಿಟಿಕಿ ಹಾಗೂ ಚಾಲಕರ ದ್ವಾರದ ಮೂಲಕ ಪ್ರಯಾಣಿಕರು ಹತ್ತುವುದನ್ನು ನಿರ್ಬಂಧಿಸಬೇಕು. ಶಾಲಾ ಮಕ್ಕಳಿಗೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next