Advertisement

ಕೊರೊನಾ ತಡೆಗೆ ಮುಂಜಾಗ್ರತಾ ಕ್ರಮ: ಆಯುಕ್ತ ಚಿದಾನಂದ ವಟಾರೆ

05:39 PM Mar 21, 2020 | Naveen |

ಶಿವಮೊಗ್ಗ: ಕೊರೊನಾ ವೈರಸ್‌ ಹರಡುವುದನ್ನು ತಡೆಗಟ್ಟಲು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಲವಾರು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆಯುಕ್ತ ಚಿದಾನಂದ ವಟಾರೆ ತಿಳಿಸಿದರು.

Advertisement

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ಮುಂಜಾಗರೂಕತಾ ಕ್ರಮಗಳ ಮಾಹಿತಿ ನೀಡಿದರು. ನಗರದಲ್ಲಿ ಎಲ್ಲಾ ಶಾಪಿಂಗ್‌ ಮಾಲ್‌, ಪಬ್‌, ಕ್ಲಬ್‌, ಜಿಮ್‌, ಈಜುಕೊಳಗಳು, ಚಲನಚಿತ್ರ ಮಂದಿರಗಳು, ಚಿಕನ್‌ ಮತ್ತು ಮಟನ್‌ ಶಾಪ್‌ಗ್ಳನ್ನು ಮುಚ್ಚಿಸಲು ಕ್ರಮ ವಹಿಸಲಾಗಿದೆ. ಮದುವೆ, ಜಾತ್ರೆ, ಸಂತೆ, ವಸ್ತು ಪ್ರದರ್ಶನ, ಸಂಗೀತ ಹಬ್ಬಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಕ್ರೀಡಾಕೂಟಗಳನ್ನು ತಾತ್ಕಾಲಿಕವಾಗಿ ನಿಷೇಧಿಸಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು.

ಮಹಾನಗರ ಪಾಲಿಕೆ ವ್ಯಾಪ್ತಿಯ ಸಸ್ಯಾಹಾರಿ ಮತ್ತು ಮಾಂಸಾಹಾರಿ ಫುಡ್‌ಕೋರ್ಟ್‌ನಲ್ಲಿ ವ್ಯಾಪಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸೂಚಿಸಲಾಗಿದೆ. ಇದೇ ರೀತಿ ಬೀದಿ ಬದಿ ವ್ಯಾಪಾರ ಮಾಡುವ ತಿಂಡಿ ತಿನಿಸುಗಳ ಅಂಗಡಿ, ಫಾಸ್ಟ್‌ ಫುಡ್‌ ಮತ್ತು ಇತರೆ ತಳ್ಳು ಗಾಡಿ ವ್ಯಾಪಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಕೈಗೊಳ್ಳಲಾಗಿದ್ದು, ವಾರ್ಡ್‌ವಾರು ಔಷಧಸಿಂಪಡಿಸಿ ಫಾಗಿಂಗ್‌ ಮಾಡಲಾಗುತ್ತಿದೆ. ಎಲ್ಲಾ ವಾರ್ಡ್‌ಗಳಲ್ಲಿ ಕಸದ ವಾಹನದ ಮೂಲಕ ಅರಿವು ಮೂಡಿಸಲಾಗುತ್ತಿದೆ. ಹೊಟೇಲ್‌ಗ‌ಳಲ್ಲಿ ಶುಚಿತ್ವ ಕಾಪಾಡಿಕೊಳ್ಳುವ ಬಗ್ಗೆ ಈಗಾಗಲೇ ಹೊಟೇಲ್‌ ಮಾಲಿಕರೊಂದಿಗೆ ಸಭೆಯನ್ನು ನಡೆಸಿ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಒಳಗೊಂಡ ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 104 ಜತೆಗೆ 080-66692000, 080-46848600 ಸಂಪರ್ಕಿಸಬಹುದಾಗಿದೆ. ಮಹಾನಗರ ಪಾಲಿಕೆಯಲ್ಲಿ ಸಹ ದಿನದ 24 ಗಂಟೆ ಕಾರ್ಯ ನಿರ್ವಹಿಸುವ ಹೆಲ್ಪ್ ಲೈನ್‌ ಆರಂಭಿಸಲು ಸಿದ್ಧತೆ ಮಾಡಲಾಗಿದೆ ಎಂದು ಹೇಳಿದರು. ಮೇಯರ್‌ ಸುವರ್ಣಾ ಶಂಕರ್‌, ಉಪ ಮೇಯರ್‌ ಸುರೇಖಾ ಮುರಳೀಧರ ಮತ್ತಿತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next