Advertisement

ಹೊರ ರಾಜ್ಯದಿಂದ ಬಂದವರಿಗೆ 7 ದಿನ ಸಾಂಸ್ಥಿಕ ಕ್ವಾರೆಂಟೈನ್‌: ಡಿಸಿ

04:09 PM May 29, 2020 | Naveen |

ಶಿವಮೊಗ್ಗ: ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಾರ ಹೊರ ರಾಜ್ಯಗಳಿಂದ ಬಂದಿರುವವರು 7 ದಿನಗಳ ಸಾಂಸ್ಥಿಕ ಕ್ವಾರೆಂಟೈನ್‌ ಪೂರ್ಣಗೊಳಿಸಿದರೆ ಅವರನ್ನು ಬಿಡುಗಡೆಗೊಳಿಸಿ ಹೋಂ ಕ್ವಾರೆಂಟೈನ್‌ಗೆ ಕಳುಹಿಸಬೇಕೆಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ತಿಳಿಸಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಆರೋಗ್ಯ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಿದರು.

Advertisement

ಇದುವರೆಗೆ ಹೊರ ರಾಜ್ಯಗಳಿಂದ ಬಂದವರಿಗೆ 14 ದಿನಗಳ ಸಾಂಸ್ಥಿಕ ಕ್ವಾರೆಂಟೈನ್‌ ವಿಧಿಸಲಾಗುತ್ತಿದ್ದು, ಹೊಸ ಮಾರ್ಗಸೂಚಿ ಪ್ರಕಾರ ಇದನ್ನು 7 ದಿನಗಳಿಗೆ ಇಳಿಸಲಾಗಿದೆ. ಪ್ರಸ್ತುತ ವಿವಿಧ ಹಾಸ್ಟೆಲ್‌ಗ‌ಳಲ್ಲಿ 553ಮಂದಿ ಕ್ವಾರೆಂಟೈನ್‌ನಲ್ಲಿದ್ದಾರೆ. ಪ್ರತಿ ಹಾಸ್ಟೆಲ್‌ಗ‌ಳಿಗೆ ಭೇಟಿ ನೀಡಿ 7ದಿನಗಳ ಅವಧಿ ಪೂರ್ಣಗೊಳಿಸಿರುವವರ ಆರೋಗ್ಯ ತಪಾಸಣೆ ನಡೆಸಿ, ಕೈಗೆ ಸೀಲು ಹಾಕಿ ಮನೆಗೆ ಕ್ವಾರೆಂಟೈನ್‌ ಗೆ ಕಳುಹಿಸಬೇಕು. ಇದಕ್ಕಾಗಿ ಪ್ರತಿ ತಾಲೂಕಿಗೆ ನೋಡೆಲ್‌ ಅಧಿಕಾರಿಯನ್ನು ನೇಮಕ ಮಾಡಬೇಕು ಎಂದರು.

ಮುಂದಿನ ದಿನಗಳಲ್ಲಿ ಹೋಂ ಕ್ವಾರೆಂಟೈನ್‌ಗೆ ಒಳಗಾಗುವವರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಅಂತವರ ಮೇಲೆ ನಿರಂತರ ನಿಗಾ ಇರಿಸಬೇಕು. ಅಂತಹವರ ಪಟ್ಟಿಯನ್ನು ಸಂಬಂಧಪಟ್ಟ ಪಿಡಿಒ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಕಳುಹಿಸಬೇಕು ಎಂದರು. ಸೂಕ್ಷ್ಮ ರಾಜ್ಯಗಳೆಂದು ಗುರುತಿಸಲಾಗಿರುವ ರಾಜ್ಯಗಳಿಂದ ಆಗಮಿಸುವವರನ್ನು ಮಾತ್ರ ಇನ್ನುಮುಂದೆ 7 ದಿನಗಳ ಸಾಂಸ್ಥಿಕ ಕ್ವಾರೆಂಟೈನ್‌ಗೆ ಒಳಪಡಿಸಲಾಗುವುದು. ಇನ್ನುಳಿದ ರಾಜ್ಯಗಳಿಂದ ಬರುವವರನ್ನು ನೇರವಾಗಿ ಮನೆಗೆ ಕ್ವಾರೆಂಟೈನ್‌ಗೆ ಕಳುಹಿಸಿ ಕಟ್ಟುನಿಟ್ಟಿನ ನಿಗಾ ವಹಿಸಬೇಕು. ಹೊಸ ಮಾರ್ಗಸೂಚಿ ಪ್ರಕಾರ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಸಹ ಹೋಂ ಕ್ವಾರೆಂಟೈನ್‌ಗೆ ಒಳಪಡಿಸಬೇಕಾಗಿದೆ. ಕ್ವಾರೆಂಟೈನ್‌ ವಿಧಿಸುವ ಮೊದಲು ಕಡ್ಡಾಯವಾಗಿ ಕ್ವಾರೆಂಟೈನ್‌ ವಾಚ್‌ ಆ್ಯಪ್‌ ಡೌನ್‌ಲೋಡ್‌ ಮಾಡಲು ತಿಳಿಸಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next