Advertisement

ಶಿರಾಡಿ: 2 ದಿನಗಳಲ್ಲಿ ಬಸ್‌ ಸಂಚಾರ ಶುರು

04:10 AM Sep 28, 2018 | Karthik A |

ಮಂಗಳೂರು: ಶಿರಾಡಿ ಘಾಟಿ ಈ ಮಾಸಾಂತ್ಯಕ್ಕೆ ಪ್ರಯಾಣಿಕರ ಘನ ವಾಹನಗಳ ಸಂಚಾರಕ್ಕೆ ಮುಕ್ತಗೊಳ್ಳುವ ನಿರೀಕ್ಷೆಯಿದೆ. ಘನ ವಾಹನಗಳಿಗೆ ಶಿರಾಡಿ ಘಾಟಿಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ವ್ಯಾಪಕ ಆಗ್ರಹ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ರಾ. ಹೆ. ಪ್ರಾಧಿಕಾರ, ರಾ.ಹೆ. ಇಲಾಖೆಯ ಅಧಿಕಾರಿಗಳ ಸಭೆ ನಡೆಸಲಾಗಿದೆ. ಒಂದೆರಡು ದಿನಗಳಲ್ಲಿ ಘಾಟಿಯಲ್ಲಿ ಬಸ್‌ ಸಹಿತ ಪ್ರಯಾಣಿಕರ ಘನ ವಾಹನಗಳ ಸಂಚಾರ ಆರಂಭ ಗೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಯು.ಟಿ. ಖಾದರ್‌ ತಿಳಿಸಿದ್ದಾರೆ. 

Advertisement

ವಾಹನ ಸಂಚಾರಕ್ಕೆ ಅನುವಾಗುವ ನಿಟ್ಟಿನಲ್ಲಿ ಹಾಸನ ಜಿಲ್ಲಾಧಿಕಾರಿ ಜತೆ ಚರ್ಚೆ ನಡೆಸಿ ಪೂರಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾಧಿಕಾರಿಯವರಿಗೆ ಸೂಚಿಸಲಾಗಿದೆ. ಘಾಟಿಯಲ್ಲಿ ಅಪಾಯಕಾರಿ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸುವ ನಿಟ್ಟಿನಲ್ಲೂ ಚರ್ಚೆ ನಡೆದಿದೆ. ಇದೇ ವೇಳೆ ಸ್ವಲ್ಪ ಸಮಯದವರೆಗೆ ಸರಕು ವಾಹನಗಳಿಗೆ ಚಾರ್ಮಾಡಿ ಘಾಟಿಯಲ್ಲಿ ಸಾಗುವಂತೆ ಸೂಚಿಸಲು ನಿರ್ಧರಿಸಲಾಗಿದೆ. ಸಂಪಾಜೆ ಘಾಟಿಯಲ್ಲಿ ಪಕ್ಕಾ ರಸ್ತೆ ನಿರ್ಮಾಣ ಕಾರ್ಯವನ್ನು ತ್ವರಿತವಾಗಿ ಮುಂದುವರಿಸಿ ತಿಂಗಳೊಳಗೆ ಎಲ್ಲ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ರಾ.ಹೆ. 66ರಲ್ಲಿ ಕೂಳೂರಿನಲ್ಲಿ ಹಳೆಯ ಸೇತುವೆ ಶಿಥಿಲವಾಗಿದ್ದು, ಹೊಸ ಸೇತುವೆ ನಿರ್ಮಾಣ ಕಾರ್ಯ ಶೀಘ್ರ ಕೈಗೆತ್ತಿಗೊಳ್ಳುವಂತೆ ಹೆ.ಪ್ರಾ. ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ. ಶಿರಾಡಿ ಬಗ್ಗೆ ಹಾಸನ ಅಧಿಕಾರಿಗಳಿಂದ ಮಾಹಿತಿ ಪಡೆಯಬೇಕಾಗಿದೆ. ಮಾಹಿತಿ ಪಡೆದು ಸೋಮವಾರ ನಿರ್ಧಾರ ಕೈಗೊಳ್ಳಲಾಗುವುದು ಎಂದು ದ.ಕ. ಡಿಸಿ ಸೆಂಥಿಲ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next