Advertisement

Shiroor Hill Colapse: ರಕ್ಷಣ ಕಾರ್ಯಾಚರಣೆ ವಿಳಂಬವಾಗಿಲ್ಲ: ಸಿಎಂ

12:27 AM Jul 22, 2024 | Team Udayavani |

ಕಾರವಾರ (ಶಿರೂರು): ಗುಡ್ಡ ಕುಸಿತದ ಅನಂತರ ರಕ್ಷಣ ಕಾರ್ಯಾಚರಣೆ ವಿಳಂಬವಾಗಿಲ್ಲ. ಸೇನೆ ಸಹ ರವಿವಾರದಿಂದ ನೆರವಿಗೆ ಬಂದಿದೆ. ಇದರಲ್ಲಿ ರಾಜಕಾರಣ ಮಾಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಈ ವೇಳೆ ಅವರು ಸುದ್ದಿಗಾರರ ಜತೆ ಮಾತನಾಡಿ, ಗೋವಾ ಮತ್ತು ಅಂಕೋಲಾ ನಡುವೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜು.16ರಂದು ಭೂ ಕುಸಿತವಾಗಿದೆ. ಭೂ ಕುಸಿತದಿಂದ 10 ಜನ ಕಾಣೆಯಾಗಿದ್ದಾರೆ. ಅದರಲ್ಲಿ ಏಳು ಜನರ ಮೃತದೇಹಗಳು ಪತ್ತೆಯಾಗಿದ್ದು, ಇನ್ನೂ ಮೂವರ ಪತ್ತೆಗಾಗಿ ಪರಿಹಾರ ಕಾರ್ಯಾಚರಣೆ ಜಾರಿಯಲ್ಲಿದೆ.

ಘಟನೆಯಲ್ಲಿ ಖಾಲಿ ಗ್ಯಾಸ್‌ ಟ್ಯಾಂಕರ್‌ ಹಾಗೂ ಭರ್ತಿಯಾಗಿರುವ ಗ್ಯಾಸ್‌ ಟ್ಯಾಂಕರ್‌ ಕೂಡ ಸಿಕ್ಕಿ ಹಾಕಿಕೊಂಡಿದ್ದು, ಅಲ್ಲಿಯೇ ವಾಸವಾಗಿರುವ ಒಂದೇ ಕುಟುಂಬದವರು ಟೀ ಅಂಗಡಿ ಇಟ್ಟುಕೊಂಡಿದ್ದರು. ಅವರಲ್ಲಿ ಐವರು ಭೂ ಕುಸಿತದಲ್ಲಿ ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆ ತ್ವರಿತವಾಗಿ ಮಾಡಬೇಕೆಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸ್ಪಷ್ಟವಾಗಿ ಸೂಚಿಸಿದ್ದೇನೆ ಎಂದರು.

ವಿಧಾನಸಭಾ ಅಧಿವೇಶನ ನಡೆಯುತ್ತಿರುವುದರಿಂದ ಭೇಟಿ ನೀಡುವುದು ತಡವಾಗಿದೆ. ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಎಲ್ಲ ಕ್ರಮ ತೆಗೆದುಕೊಳ್ಳಬೇಕೆಂದು ಸೂಚಿಸಿದ್ದೆ. ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಬೇಕೆಂದು ಘೋಷಿಸಲಾಗಿದೆ. ಈಗಾಗಲೇ ಅದನ್ನು ವಿತರಿಸಲಾಗಿದೆ. ನೌಕಾದಳ ಹಾಗೂ ರಕ್ಷಣ ತಂಡದವರಿಗೆ ಎಲ್ಲೆಡೆ ಹುಡುಕುವಂತೆ ಸೂಚಿಸಲಾಗಿದೆ. ಘಟನೆ ನಡೆದ ದಿನವೇ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಶಾಸಕರನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದರು.

ಕೇಂದ್ರ ಸಾರಿಗೆ ಸಚಿವರ ಜತೆ ಚರ್ಚೆ
ಭೂ ಕುಸಿತ ಪ್ರಕೃತಿ ವಿಕೋಪವಲ್ಲ. ಐಆರ್‌ಬಿ ಸಂಸ್ಥೆಯ ಅವೈಜ್ಞಾನಿಕ ಕಾಮಗಾರಿಯಿಂದ ಆಗಿದೆ. ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪವಿದೆ. ಯಾರೇ ತಪ್ಪು ಮಾಡಿದರೂ ಅವರ ಮೇಲೆ ಕ್ರಮ ವಹಿಸಲಾಗುವುದು. ರಸ್ತೆ ನಿರ್ಮಾಣ ಮಾಡಿರುವವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು. ಪರಿಹಾರ ಕಾಮಗಾರಿ ಮುಗಿದ ಮೇಲೆ ಪ್ರಕರಣದ ಬಗ್ಗೆ ಗಮನ ಹರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

Advertisement

ಕೇಂದ್ರ ಸರಕಾರ ರಸ್ತೆ ಪೂರ್ಣಗೊಳ್ಳದಿದ್ದರೂ ಟೋಲ್‌ ಸಂಗ್ರಹ ಮಾಡುತ್ತಿದ್ದಾರೆ. ಕೇಂದ್ರ ರಸ್ತೆ ಸಾರಿಗೆ ಸಚಿವರೊಂದಿಗೆ ನಾನು ಮಾತನಾಡುತ್ತೇನೆ. ಕಳಪೆ ಕೆಲಸವಾಗಿದ್ದರೆ ಅದನ್ನು ಸರಿಪಡಿಸುವ ಕೆಲಸ ಮಾಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯ ಮಾಡಲಾಗುವುದು ಎಂದರು.

ರಾಜ್ಯ ಸರ್ಕಾರ ವಿಳಂಬ ಮಾಡಿಲ್ಲ
ಕೇರಳದ ಲಾರಿ ಇಲ್ಲಿ ಸಿಕ್ಕಿಹಾಕಿಕೊಡಿರುವುದರಿಂದ ಕೇರಳ ಪೊಲೀಸರು ಹಾಗೂ ಮಾಧ್ಯಮದವರು ರಾಜ್ಯ ಸರಕಾರ ವಿಳಂಬ ಕಾರ್ಯಾಚರಣೆ ಮಾಡುತ್ತಿದೆ ಎಂಬ ಆರೋಪ ನಿರಾಧಾರ. ರಾಜ್ಯ ಸರಕಾರ ಯಾವುದನ್ನೂ ವಿಳಂಬ ಮಾಡಿಲ್ಲ. ಎಲ್ಲವನ್ನೂ ತ್ವರಿತವಾಗಿ ಮಾಡುತ್ತಿದ್ದೇವೆ. ಕೇರಳದ ಅರ್ಜುನ್‌ ಕಾಣೆಯಾಗಿದ್ದು, ತಮ್ಮ ರಾಜ್ಯದವರೆಂದು ಅವರೆಲ್ಲ ಬಂದಿರಬಹುದು. ಆದರೆ ನಾವು ವಿಳಂಬ ಮಾಡದೆ ನಿರ್ಲಕ್ಷ್ಯ ತೋರದೆ ಕೆಲಸ ಮಾಡುತ್ತಿದ್ದೇವೆ ಎಂದರು.

ಭೂ ಕುಸಿತ ತಡೆಗಟ್ಟಲು ಪ್ರಯತ್ನ
34 ಸ್ಥಳಗಳಲ್ಲಿ ಭೂ ಕುಸಿತವಾಗು ತ್ತದೆ ಎಂದು ಒಂದು ವರ್ಷದ ಹಿಂದೆಯೇ ವರದಿಯಾಗಿದೆ. ಬಹಳ ವರ್ಷಗಳಿಂದ ಇಲ್ಲಿ ಭೂ ಕುಸಿತವಾಗಿರಲಿಲ್ಲ. ಎಲ್ಲೆಲ್ಲಿ ಭೂ ಕುಸಿತವಾಗುತ್ತದೆಯೋ ಅದನ್ನು ತಡೆಗಟ್ಟಲು ಪ್ರಯತ್ನಿಸಲಾಗುವುದು ಎಂದರು.

ಸುರಿವ ಮಳೆಯಲ್ಲೇ ಸ್ಥಳ ವೀಕ್ಷಿಸಿದ ಸಿಎಂ
ಕಾರವಾರ (ಶಿರೂರು): ಸಿಎಂ ಸಿದ್ದರಾಮಯ್ಯ ಸುರಿಯುವ ಮಳೆಯಲ್ಲೇ ಸುಮಾರು 35 ನಿಮಿಷಗಳ ಕಾಲ ಮಣ್ಣು ತೆರವು ಕಾರ್ಯಾಚರಣೆ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಪಾಯಕಾರಿ ಸನ್ನಿವೇಶದಲ್ಲಿ ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ ಸಿಬಂದಿ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿ ಜಾಗರೂಕತೆಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ಗುಡ್ಡ ಕುಸಿತದಿಂದ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗ ಮತ್ತು ಬಲ ಭಾಗದಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ. ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡರ್‌ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೂಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆಗಳ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದು ಈ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಎಚ್ಚರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next