ಮೈಸೂರು: ನಗರದಲ್ಲಿ ಇತ್ತೀಚೆಗೆ ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಚಿಂತಕ ಪ.ಮಲ್ಲೇಶ್ ಅವರು ಬ್ರಾಹ್ಮಣ ಸಮಾಜವನ್ನು ನಿಂದಿಸಿ ತಾವು ಬಳಸಿದ ಪದದ ಬಗ್ಗೆ ವಿಷಾದ ವ್ಯಕ್ತಪಡಿಸಿರುವುದರಿಂದ ಈ ಪ್ರಕರಣವನ್ನು ಮುಂದುವರಿಸಿಕೊಂಡು ಹೋಗುವುದು ಅನಗತ್ಯ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಅವರು ತಮ್ಮನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದಾರೆ. ಬ್ರಾಹ್ಮಣ ಮಹಾಸಭಾದವರು ಈ ಪ್ರಕರಣವನ್ನು ಇಲ್ಲಿಗೆ ಕೈ ಬಿಡುವುದು ಸೂಕ್ತ ಎಂದು ಹೇಳಿದ್ದಾರೆ.
ಅಂದು ಸಮಾರಂಭದಲ್ಲಿ ಮಲ್ಲೇಶ್ ಅವರ ಭಾಷಣವನ್ನು ನಾನು ಕೇಳಿಸಿಕೊಂಡಿರಲಿಲ್ಲ. ಸಮಾರಂಭದಲ್ಲಿ ತಾವು ಭಾಷಣವನ್ನೂ ಮಾಡಲಿಲ್ಲ. ನಾನು ಎಲ್ಲ ಸಮಾಜದವರ ಬಗ್ಗೆ ಸಮಾನವಾದ ಗೌರವ ಇಟ್ಟುಕೊಂಡಿದ್ದೇನೆ. ಯಾವ ಸಮಾಜದವರನ್ನೂ ನಿಂದಿಸುವ ಕೆಲಸ ನಾನು ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.