Advertisement

‘ಜನತಾ ಪ್ರಣಾಳಿಕೆ’ಇದು ಜನರೇ ಅನುಷ್ಠಾನಕ್ಕೆ ತರಬೇಕೇ ಹೊರತು ಸರ್ಕಾರ ಅಲ್ಲ: ಸಿದ್ದು ಲೇವಡಿ

07:24 PM May 01, 2023 | Team Udayavani |

ಬೆಂಗಳೂರು: ಭಾರತೀಯ ಜನತಾ ಪಕ್ಷ ಬಿಡುಗಡೆ ಮಾಡಿರುವ ಪ್ರಣಾಳಿಕೆಗೆ ‘’ಜನತಾ ಪ್ರಣಾಳಿಕೆ’’ ಎಂದು ಕರೆದಿರುವುದು ಅರ್ಥಪೂರ್ಣವಾಗಿದೆ. ಈ ಪ್ರಣಾಳಿಕೆಯನ್ನು ಜನತೆಯೇ ಅನುಷ್ಠಾನಕ್ಕೆ ತರಬೇಕೇ ಹೊರತು ಸರ್ಕಾರ ಅಲ್ಲ ಎನ್ನುವದೇ ಇದರ ಅರ್ಥವಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಅನ್ನ, ಅಭಯ, ಅಕ್ಷರ, ಅಭಿವೃದ್ದಿ ಮತ್ತು ಆದಾಯಗಳ ಭರವಸೆಗಳನ್ನು ನೀಡಿದೆ. ಕಳೆದ ಮೂರು ವರೆ ವರ್ಷಗಳ ಅವಧಿಯ ರಾಜ್ಯದ ಬಿಜೆಪಿ ಸರ್ಕಾರ ಈ ಐದು ಭರವಸೆಗಳನ್ನು ಜನರಿಂದ ಕಸಿದುಕೊಂಡಿದೆ.

ಪಡಿತರ ಚೀಟಿ ಮೂಲಕ ನೀಡಲಾಗುತ್ತಿದ್ದ 7 ಕಿಲೋ ಅಕ್ಕಿಯನ್ನು ಐದು ಕಿಲೋಗಳಿಗೆ ಇಳಿಸಿ ಅನ್ನವನ್ನು ಕಸಿದುಕೊಂಡಿದೆ.
ರಾಜ್ಯದಲ್ಲಿ 10.12 ಲಕ್ಷ ಮಕ್ಕಳು ಶಾಲೆಯನ್ನು ತೊರೆಯುವಂತೆ ಮಾಡುವ ಮೂಲಕ ಅಕ್ಷರವನ್ನು ಕಸಿದುಕೊಂಡಿದೆ.
ಕೊರೊನಾ ರೋಗ ನಿರ್ವಹಣೆಯಲ್ಲಿನ ನಿರ್ಲಕ್ಷ ಮತ್ತು ಭ್ರಷ್ಟಾಚಾರದಿಂದಾಗಿ ಜನತೆಯ ಆರೋಗ್ಯವನ್ನು ಕಸಿದುಕೊಂಡಿದೆ.
ಸರ್ಕಾರದ ಪ್ರತಿಯೊಂದು ಇಲಾಖೆಯಲ್ಲಿಯೂ 40% ಕಮಿಷನ್ ಹಾವಳಿಯ ಮೂಲಕ ಅಭಿವೃದ್ದಿಯನ್ನು ಕಸಿದುಕೊಂಡಿದೆ.
ರಾಜ್ಯದ ಗೃಹಸಚಿವರ ಅದಕ್ಷತೆ ಮತ್ತು ಭ್ರಷ್ಟತೆಯಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚಾಗಿರುವುದು ಮಾತ್ರವಲ್ಲ ರೌಡಿ-ಗೂಂಡಾಗಳೆಲ್ಲ ಮುಕ್ತವಾಗಿ ಓಡಾಡಲು ಸ್ವಾತಂತ್ರ್ಯ ಪಡೆದಿರುವ ಕಾರಣ ಜನತೆಯ ಭದ್ರತೆಯ ಅಭಯವನ್ನೂ ಕಸಿದುಕೊಂಡಿದೆ.

ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ರೂ.410 ರಿಂದ ರೂ.1105ಕ್ಕೆ ಏರಿಸಿರುವ ಮತ್ತು ಅಡುಗೆ ಅನಿಲದ ಮೇಲಿನ ಸಬ್ಸಿಡಿಯನ್ನು ರದ್ದುಪಡಿಸಿರುವ ಬಿಜೆಪಿ ಈಗ ಅಡುಗೆ ಅನಿಲದ ಮೂರು ಸಿಲಿಂಡರ್ ಗಳನ್ನು ಉಚಿತವಾಗಿ ನೀಡುವುದಾಗಿ ಭರವಸೆ ನೀಡುವ ಮೂಲಕ ರಾಜ್ಯದ ಜನರ ಕಿವಿಗೆ ಹೂ ಇಟ್ಟಿದೆ.

ಕಾಂಗ್ರೆಸ್ ಪಕ್ಷ ತನ್ನ ಅಧಿಕಾರವಧಿಯಲ್ಲಿ ರಾಜ್ಯದಾದ್ಯಂತ ಪ್ರಾರಂಭಿಸಿದ್ದ 600 ಇಂದಿರಾ ಕ್ಯಾಂಟೀನ್ ಗಳನ್ನು ರಾಜಕೀಯ ದ್ವೇಷಾಸೂಯೆಯಿಂದ ಮುಚ್ಚಿರುವ ಬಿಜೆಪಿ ಈಗ ಅಟಲ್ ಆಹಾರ ಕೇಂದ್ರಗಳನ್ನು ಪ್ರಾರಂಭಿಸುತ್ತೇವೆ ಎಂದು ಹೇಳಿರುವುದೇ ಹಾಸ್ಯಾಸ್ಪದ.

Advertisement

ಪಡಿತರ ಚೀಟಿಗಳಮೂಲಕ ನೀಡಲಾಗುತ್ತಿದ್ದ ಏಳು ಕಿಲೋ ಉಚಿತ ಅಕ್ಕಿಯನ್ನು ಐದು ಕಿಲೋಗಳಿಗೆ ಇಳಿಸಿದ್ದ ಬಿಜೆಪಿ ಐದು ಕಿಲೋ ಸಿರಿಧಾನ್ಯ ಕೊಡುತ್ತೇವೆ ಎಂದು ಹೇಳಿರುವುದು ಇನ್ನೊಂದು ವಿಪರ್ಯಾಸ.

ಹತ್ತು ಲಕ್ಷ ನಿವೇಶನಗಳನ್ನು ವಿತರಿಸುವ ಭರವಸೆ ನೀಡಿರುವ ಇದೇ ಬಿಜೆಪಿ ಕಳೆದ ಮೂರುವರೆ ವರ್ಷಗಳ ಅವಧಿಯಲ್ಲಿ ಒಂದೇ ಒಂದು ಹೊಸಮನೆಯನ್ನು ನಿರ್ಮಾಣ ಮಾಡಿಲ್ಲ.

ಕಾಂಗ್ರೆಸ್ ಪಕ್ಷ ತನ್ನ ಅಧಿಕಾರವಧಿಯ ಐದು ವರ್ಷಗಳಲ್ಲಿ ಹದಿನೈದು ಲಕ್ಷ ಮನೆಗಳನ್ನು ನಿರ್ಮಾಣ ಮಾಡಿತ್ತು. ಬಿಜೆಪಿ ಸರ್ಕಾರ ನಿರ್ಮಾಣ ಹಂತದಲ್ಲಿದ್ದ ನಮ್ಮ ಕಾಲದ ಮನೆಗಳನ್ನುಪೂರ್ಣಗೊಳಿಸಿ ಅದನ್ನೇ ಸಾಧನೆ ಎಂದು ಹೇಳಿಕೊಳ್ಳುತ್ತಿದೆ.

ಸಣ್ಣ ಕೈಗಾರಿಕೆಗಳು ಮತ್ತು ಐಟಿಐಗಳ ನಡುವೆ ಒಪ್ಪಂದ ಮಾಡಿಕೊಂಡು ಯುವ ಪ್ರತಿಭೆಗಳಿಗೆ ಶಿಕ್ಷಣ ಮತ್ತು ಉದ್ಯೋಗದ ಅವಕಾಶ ಕಲ್ಪಿಸುವ ‘ಸಮನ್ವಯ’ ಯೋಜನೆಯ ಭರವಸೆಯನ್ನು ಬಿಜೆಪಿ ನೀಡಿದೆ.

2019-2022ರ ನಡುವಿನ ಅವಧಿಯಲ್ಲಿ ನಿರುದ್ಯೋಗದ ಪ್ರಮಾಣ ಶೇಕಡಾ 22.9ರಷ್ಟು ಹೆಚ್ಚಾಗಿದೆ. 2021ರ ಅವಧಿಯಲ್ಲಿ ರಾಜ್ಯದಲ್ಲಿ ನಿರುದ್ಯೋಗದ ಕಾರಣದಿಂದಾಗಿ 1,129 ಯುವಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ 1258 ಕಂಪೆನಿಗಳು ರಾಜ್ಯದಲ್ಲಿ ಮುಚ್ಚಿ 60,000 ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಸಾರ್ವಜನಿಕ ಕ್ಷೇತ್ರದ 13 ಉದ್ಯಮಗಳು ಮುಚ್ಚಿವೆ.
ಈ ಅನಾಹುತಗಳಿಗೆಲ್ಲ ಕಾರಣವಾದ ಬಿಜೆಪಿ ಈಗ ಸಮನ್ವಯ ಎಂಬ ಹೊಸ ಯೋಜನೆಯ ಭರವಸೆಯನ್ನು ನೀಡಿದರೆ ನಂಬುವವರು ಯಾರು?

ಐಎಎಸ್/ಕೆಎಎಸ್/ ಬ್ಯಾಂಕಿಂಗ್/ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳ ಪರೀಕ್ಷಾ ತಯಾರಿಯ ಕೋಚಿಂಗ್ ಪಡೆಯಲು ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದೆ.
ಕಳೆದ ಮೂರುವರೆ ವರ್ಷಗಳಲ್ಲಿ ಪಿಎಸ್‌ಐ, ಕೆಪಿಟಿಸಿಎಲ್ ನೇಮಕಾತಿ ಸೇರಿದಂತೆ ಉದ್ಯೋಗ ನೇಮಕಾತಿಯ ಎಲ್ಲ ನಿರ್ಧಾರಗಳು ಅಂತಿಮವಾಗಿ ಲಂಚ/ಕಮಿಷನ್ ಪಡೆದಿರುವ ಹಗರಣಗಳಾಗಿವೆ.

ಮುನ್ಸಿಪಲ್ ಕಾರ್ಪೋರೇಷನ್ ವ್ಯಾಪ್ತಿಯಲ್ಲಿ 400 ‘’ನಮ್ಮ ಕ್ಲಿನಿಕ್’’ ಗಳನ್ನು ತೆರೆಯಲಾಗುವುದು ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಈ ಯೋಜನೆಯನ್ನು 2022-23ರ ಬಜೆಟ್ ನಲ್ಲಿ ಬಿಜೆಪಿ ಸರ್ಕಾರ ಘೋಷಿಸಲಾಗಿದ್ದರೂ ಇಲ್ಲಿಯ ವರೆಗೆ ನೂರು “ನಮ್ಮ ಕ್ಲಿನಿಕ್” ಗಳನ್ನು ತೆರೆದಿಲ್ಲ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: Karnataka Poll: ಶಿರಸಿಯಲ್ಲಿ ಅಂಚೆ ಮತದಾನ ಮಾಡಿದ 102 ವರ್ಷದ ಹಿರಿಯಜ್ಜಿ

Advertisement

Udayavani is now on Telegram. Click here to join our channel and stay updated with the latest news.

Next