Advertisement

ಸಿದ್ಧು-ಡಿಕೆಶಿಯಿಂದಲೇ ರಾಜ್ಯದಲ್ಲಿ ಕಾಂಗ್ರೆಸ್‌ ನಾಶ: ಶೆಟ್ಟರ

11:40 AM May 24, 2022 | Team Udayavani |

ಗೋಕಾಕ: ಕಾಂಗ್ರೆಸ್‌ ಪಕ್ಷ ಮುಳುಗುತ್ತಿರುವ ಹಡಗು. ಈಗಾಗಲೇ ದೇಶದಲ್ಲಿ ತನ್ನ ಸಂಪೂರ್ಣ ಅಸ್ತಿತ್ವವನ್ನು ಕಳೆದುಕೊಂಡಿರುವ ಈ ಪಕ್ಷವನ್ನು ಅದರ ನಾಯಕರೇ ಕೂಡಿಕೊಂಡು ಹಾಳು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸಿದ್ಧು-ಡಿಕೆಶಿ ಸೇರಿಕೊಂಡು ಕಾಂಗ್ರೆಸ್‌ ನಾಶ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

Advertisement

ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ ಸಭಾ ಭವನದಲ್ಲಿ ಸೋಮವಾರ ಜರುಗಿದ ವಾಯುವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷಕ್ಕೆ ಯಾವುದೇ ಗೊತ್ತು-ಗುರಿಗಳಿಲ್ಲ. ಕೇವಲ ಸುಳ್ಳು ಪ್ರಚಾರ ಡಂಭಾಚಾರ ನಡೆಸುವುದೇ ಅದರ ಗುರಿಯಾಗಿದೆ ಎಂದು ಟೀಕಿಸಿದರು.

ಇದುವರೆಗೂ ವಿಧಾನ ಪರಿಷತ್‌ ಅಭ್ಯರ್ಥಿಗಳ ಆಯ್ಕೆ ಮಾಡಲಿಕ್ಕೆ ಆ ಪಕ್ಷಕ್ಕೆ ಸಾಧ್ಯವಾಗಿಲ್ಲ. ಸಿದ್ಧು-ಡಿಕೆಶಿ ಸೇರಿಕೊಂಡು ಪಕ್ಷವನ್ನು ನಿರ್ನಾಮ ಮಾಡುತ್ತಾರೆ. ಈಗಾಗಲೇ ಪಂಜಾಬ್‌ನ ಸಿದ್ಧು ಜೈಲು ಸೇರಿದ್ದಾರೆ. ಇಲ್ಲಿ ಸಿದ್ಧು ಕಾಂಗ್ರೆಸ್‌ನ್ನು ಸಂಪೂರ್ಣ ನೆಲಕ್ಕುರುಳಿಸುತ್ತಾರೆಂದು ಅವರು ಹೇಳಿದರು.

ಮುಂಬರುವ 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಸುಮಾರು 150 ಸ್ಥಾನಗಳನ್ನು ಬಿಜೆಪಿ ಪಡೆಯಲಿದೆ ಎಂದರು. ಜೂನ್‌ 13 ರಂದು ನಡೆಯುವ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳು ಜಯಶಾಲಿಯಾಗಲಿದ್ದಾರೆ. ವಿಧಾನ ಪರಿಷತ್‌ನಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿಲ್ಲ. ಈ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿಗೆ ಸ್ಪಷ್ಟ ಬಹುಮತ ದೊರೆಯಲಿದೆ. ಶಿಕ್ಷಕರ ಕ್ಷೇತ್ರದಿಂದ ಅರುಣ ಶಹಾಪೂರ ಹಾಗೂ ಪದವೀಧರ ಮತಕ್ಷೇತ್ರದಿಂದ ಹಣಮಂತ ನಿರಾಣಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮೂಲಕ ಆಯ್ಕೆ ಮಾಡುವಂತೆ ಮನವಿ ಮಾಡಿದರು.

ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕೋರಿಕೆಯ ಮೇರೆಗೆ ಗೋಕಾಕದಿಂದ ಪ್ರಚಾರ ಸಭೆಯನ್ನು ಆರಂಭಿಸಿರುವುದಾಗಿ ಅವರು ಹೇಳಿದರು.

Advertisement

ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಪ್ರತಿಯೊಬ್ಬ ಕಾರ್ಯಕರ್ತರು ತಲಾ 10 ಮತಗಳನ್ನು ಅಭ್ಯರ್ಥಿಗಳಿಗೆ ಹಾಕಿಸಬೇಕು ಎಂದರು.

ಅರಣ್ಯ ಹಾಗೂ ಆಹಾರ ಸಚಿವ ಉಮೇಶ ಕತ್ತಿ ಮಾತನಾಡಿ, ಪ್ರಕಾಶ ಹುಕ್ಕೇರಿ ಶಿಕ್ಷಕರೂ ಅಲ್ಲ. ಪದವೀಧರರೂ ಅಲ್ಲ. ಕೇವಲ ಅಧಿಕಾರದ ದಾಹಕ್ಕಾಗಿ ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ನಾನು, ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಒಗ್ಗಟ್ಟಾಗಿದ್ದೇವೆ. ನಮ್ಮಲ್ಲಿ ಯಾವುದೇ ವೈಮನಸ್ಸುಗಳಿಲ್ಲ. ಅಭ್ಯರ್ಥಿಗಳ ಆಯ್ಕೆಗೆ ಎಲ್ಲ ಬಿಜೆಪಿ ನಾಯಕರುಗಳು ಒಂದಾಗಿ ದುಡಿಯುತ್ತೇವೆ ಎಂದು ಅವರು ಹೇಳಿದರು.

ಕೆಎಂಎಫ್‌ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ವಿಧಾನ ಪರಿಷತ್‌ ಅಭ್ಯರ್ಥಿಗಳಾದ ಅರುಣ ಶಹಾಪೂರ ಮತ್ತು ಹಣಮಂತ ನಿರಾಣಿ ಅವರಿಗೆ ಅತ್ಯ ಧಿಕ ಮತಗಳಿಂದ ಗೆಲ್ಲಿಸುತ್ತೇವೆ. ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರ ಪಡೆಯನ್ನು ರಚಿಸಲಾಗುವುದು. ಎಲ್ಲರೂ ಒಗ್ಗಟ್ಟಿನಿಂದ ಗೆಲುವಿಗೆ ಶ್ರಮಿಸುತ್ತೇವೆ ಎಂದು ನುಡಿದರು.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಪ ಸದಸ್ಯ ರವಿಕುಮಾರ ಮಾತನಾಡಿದರು. ವಾಯವ್ಯ ಶಿಕ್ಷಕರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ ಶಹಾಪೂರ, ವಾಯವ್ಯ ಪದವೀಧರ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿ ಮತಯಾಚಿಸಿದರು.

ವೇದಿಕೆಯಲ್ಲಿ ಸಂಸದರಾದ ಮಂಗಲ ಅಂಗಡಿ, ಅಣ್ಣಾಸಾಹೇಬ ಜೊಲ್ಲೆ, ಈರಣ್ಣ ಕಡಾಡಿ, ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ವಿಧಾನ ಪರಿಷತ್‌ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ, ಗೋಕಾಕ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಗೋಕಾಕ ನಗರಸಭೆ ಅಧ್ಯಕ್ಷ ಜಯಾನಂದ ಹುಣಶ್ಯಾಳಿ, ನಗರ ಘಟಕ ಬಿಜೆಪಿ ಅಧ್ಯಕ್ಷ ಭೀಮಶಿ ಭರಮನ್ನವರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಸ್ವಾಗತಿಸಿದರು. ಪರಸಪ್ಪ ಬಬಲಿ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next