ವಿಧಾನಪರಿಷತ್ತು: ಮಲೆಮಹದೇಶ್ವರ ಬೆಟ್ಟಕ್ಕೆ ಹೋಗುವ ಮಾರ್ಗದಲ್ಲಿ ಬರುವ ಸಿಂಗಾನಲ್ಲೂರು ಗ್ರಾಮಕ್ಕೆ ರಸ್ತೆ ಹಾಗೂ ಅಲ್ಲಿಗೆ ಬಂದು ಭಕ್ತಾದಿಗಳು ತಂಗಲು ಮೂಲಸೌಕರ್ಯಗಳನ್ನು ಕಲ್ಪಿಸುವ ಯೋಜನೆಯನ್ನು ತಕ್ಷಣ ಕಾರ್ಯಗತಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಆರ್.ಧರ್ಮಸೇನ ವಿಷಯ ಪ್ರಸ್ತಾಪಿಸಿ, ಸಿಂಗಾನಲ್ಲೂರು ವರನಟ ಡಾ.ರಾಜಕುಮಾರ ಅವರ ಊರು. ಮಲೆಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳು ಸಿಂಗಾನಲ್ಲೂರು ಗ್ರಾಮದಲ್ಲಿ ಒಂದು ರಾತ್ರಿ ವಾಸ್ಯವ್ಯ ಮಾಡಿ ಮುಂದಕ್ಕೆ ಹೋಗುವ ಪ್ರತೀತಿ ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ. ಲಕ್ಷಾಂತರ ಭಕ್ತರು ಬೆಟ್ಟಕ್ಕೆ ಬರುತ್ತಾರೆ. ಆದರೆ, ಅವರಿಗೆ ಸಿಂಗಾನಲ್ಲೂರಿಗೆ ಬರಲು ಸರಿಯಾದ ರಸ್ತೆ ಇಲ್ಲ ಮತ್ತು ಅಲ್ಲಿ ತಂಗಲು ಮೂಲಭೂತ ಸೌಕರ್ಯಗಳಿಲ್ಲ. ಈ ಬಗ್ಗೆ 2017ರಲ್ಲಿ ಪ್ರಸ್ತಾವನೆ ಸಲ್ಲಿಸಿದ್ದೆ. 30 ಲಕ್ಷ ರೂ.ಗೆ ಯೋಜನೆಗೆ ಒಪ್ಪಿಗೆ ಸಿಕ್ಕಿತ್ತು.ಆದರೆ, ಈವರೆಗೆ ಅದು ಕಾರ್ಯಗತಗೊಂಡಿಲ್ಲ ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ವಿಚಾರ ಈಗಷ್ಟೇ ನನ್ನ ಗಮನಕ್ಕೆ ಬಂದಿದೆ. ತಕ್ಷಣ ಯೋಜನೆಯನ್ನು ಕಾರ್ಯಗತೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಇದನ್ನೂ ಓದಿ : ಕೃಷಿ ಸುಧಾರಣೆಯು ದೇಶಿಯ ನೀತಿಯಾಗಿದೆ : ಬ್ರಿಟಿಷ್ ಸರ್ಕಾರ
ಇದಕ್ಕೂ ಮೊದಲು ಧರ್ಮಸೇನ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ ಎರಡು ವರ್ಷಗಳಲ್ಲಿ ಮೈಸೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣನ ರಸ್ತೆಗಳನ್ನು ಅಭಿವೃದ್ಧಿಪಡಿಸಲು ವಿವಿಧ ಯೋಜನೆಗಳಡಿ ನಿಗದಿಪಡಿಸಿದ ಒಟ್ಟು 26,605.63 ಲಕ್ಷ ರೂ. ಪೈಕಿ 3,539.39 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. 13,066.24 ಲಕ್ಷ ರೂ. ಬಿಡುಗಡೆ ಮಾಡಬೇಕಿದೆ. ಅದೇ ರೀತಿ ಚಾಮರಾಜನಗರ ಜಿಲ್ಲೆ ವ್ಯಾಪ್ತಿಯ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ವಿವಿಧ ಯೋಜನೆಗಳಡಿ 19,082.39 ಲಕ್ಷ ರೂ.ಗಳಲ್ಲಿ 7,056.27 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. 12,026.12 ಲಕ್ಷ ರೂ. ಬಿಡುಗಡೆ ಮಾಡಲು ಕ್ರಮಕೈಗೊಳ್ಳಬೇಕಿದ ಎಂದು ಹೇಳಿದರು.