Advertisement

ಕೆರೆಗಳಿಗೆ ನೀರು ತುಂಬಿಸಲು ಕ್ರಮ ಕೈಗೊಳ್ಳಿ: ತಹಶೀಲ್ದಾರ್‌

12:06 PM Jul 28, 2019 | Naveen |

ಸಿರುಗುಪ್ಪ: ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಎಲ್ಎಲ್ಸಿ ಕಾಲುವೆ ಮುಖಾಂತರ ಕೆರೆಗಳಿಗೆ ನೀರು ತುಂಬಿಸುವ ಉದ್ದೇಶದಿಂದ ಕಾಲುವೆಗೆ ನೀರು ಬಿಡಲಾಗುತ್ತದೆ. ಆದ್ದರಿಂದ ಅಧಿಕಾರಿಗಳು ಕೆರೆಗಳಿಗೆ ನೀರು ತುಂಬಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಹಶೀಲ್ದಾರ್‌ ದಯಾನಂದ್‌ ಪಾಟೀಲ್ ತಿಳಿಸಿದರು.

Advertisement

ನಗರದ ತಾಪಂ ಸಭಾಂಗಣದಲ್ಲಿ ಕುಡಿಯುವ ನೀರಿನ ಕುರಿತು ಏರ್ಪಡಿಸಿದ್ದ ಅಧಿಕಾರಿಗಳ ಮತ್ತು ರೈತರ ಸಭೆಯಲ್ಲಿ ಮಾತನಾಡಿದ ಅವರು ತಾಲೂಕಿನಲ್ಲಿರುವ 30 ಕೆರೆಗಳಿಗೆ ನೀರು ತುಂಬಿಸಲು ಒಂದು ವಾರದ ಕಾಲ ಎಲ್ಎಲ್ಸಿ ಕಾಲುವೆಯಲ್ಲಿ ನೀರು ಬರುತ್ತದೆ. ನೀರು ಬಂದ ಸಂದರ್ಭದಲ್ಲಿ ನೀರು ತುಂಬಿಸಿಕೊಳ್ಳಲು ಬೇಕಾದ ಪೈಪ್‌ ಮತ್ತು ಮೋಟಾರ್‌ಗಳನ್ನು ಸಿದ್ಧಮಾಡಿಟ್ಟುಕೊಳ್ಳಬೇಕು. ಅಧಿಕಾರಿಗಳು ಕುಂಟು ನೆಪಗಳನ್ನು ಹೇಳುವಂತಿಲ್ಲ ಎಂದರು. ನೀರು ತುಂಬಿಸುವ ಕಾರ್ಯದಲ್ಲಿ ಯಾವುದೇ ಅಧಿಕಾರಿ ನಿರ್ಲಕ್ಷ್ಯ ವಹಿಸುವಂತಿಲ್ಲ. ಕಾಲುವೆಗೆ ನೀರು ಬಿಟ್ಟ ಸಂದರ್ಭದಲ್ಲಿ ಕಾಲುವೆ ಮೇಲೆ ಸೂಕ್ತ ಪೊಲೀಸ್‌ ಬಂದೋಬಸ್ತ್ ಒದಗಿಸಲು ಕ್ರಮ ಕೈಗೊಳ್ಳಬೇಕು. ತಾಲೂಕಿನ ಎಲ್ಲ ಗ್ರಾಪಂ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಕೆರೆಗಳಿಗೆ ನೀರು ತುಂಬಿಸುವ ಕೆಲಸವನ್ನು ಮಾಡಬೇಕು. ಈ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಟ್ಯಾಂಕರ್‌ ಮೂಲಕ ಕುಡಿಯುವ ನೀರೊದಗಿಸುವ ಅನಿವಾರ್ಯತೆ ಇದ್ದರೆ ಕುಡಿಯುವ ನೀರು ಪೂರೈಕೆ ಮಾಡುವ ಟ್ಯಾಂಕರ್‌ಗೆ ಕಡ್ಡಾಯವಾಗಿ ಜಿಪಿಎಸ್‌ ಅಳವಡಿಸಬೇಕು. ಬೋರ್‌ವೆಲ್ ಬಾಡಿಗೆ ಪಡೆದು ನೀರು ಪೂರೈಕೆ ಮಾಡಲು ಅವಕಾಶವಿದೆ. ಟ್ಯಾಂಕರ್‌ ನೀರು ಪೂರೈಕೆ ಮಾಡುವವರಿಗೆ ಪ್ರತಿವಾರ ಹಣ ಪಾವತಿ ಮಾಡಬೇಕು. ಬೋರ್‌ವೆಲ್ ಬಾಡಿಗೆ ಪಡೆದಿದ್ದರೆ ಒಂದು ತಿಂಗಳಿಗೆ ಬಿಲ್ ಪಾವತಿ ಮಾಡಲು ಅವಕಾಶವಿದ್ದು, ಅಗತ್ಯ ದಾಖಲೆಗಳನ್ನು ನೀಡಿದರೆ ಹಣವನ್ನು ಬಿಡುಗಡೆ ಮಾಡಲಾಗುವುದು. ಕುಡಿಯುವ ನೀರಿಗಾಗಿ ಕಾಲುವೆಯಲ್ಲಿ ನೀರು ಹರಿಯುವ ಸಂದರ್ಭದಲ್ಲಿ ರೈತರು ಕಾಲುವೆ ನೀರನ್ನು ಯಾವುದೇ ಕಾರಣಕ್ಕೂ ಬಳಸಬಾರದು ಎಂದು ಸೂಚಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಪಕ್ಕೀರಸ್ವಾಮಿ, ರಾಜ್ಯ ರೈತ ಸಂಘ ಮತ್ತು ಹಸಿರುಸೇನೆಯ ತಾ. ಅಧ್ಯಕ್ಷ ವಾ. ಹುಲುಗಯ್ಯ ಮಾತನಾಡಿದರು. ತಾಪಂ ಇಒ ಚಂದ್ರಶೇಖರ್‌, ಸಹಾಯಕ ಕೃಷಿ ನಿರ್ದೇಶಕ ನಜೀರ್‌ ಅಹಮ್ಮದ್‌, ನಗರಸಭೆ ಪೌರಾಯುಕ್ತ ಪ್ರೇಮ್‌ಚಾಲ್ಸ್ರ್ ಮತ್ತು ಗ್ರಾಪಂ ಕಂದಾಯ ಇಲಾಖೆಯ ಅಧಿಕಾರಿಗಳು, ರೈತ ಮುಖಂಡರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next