Advertisement

ಮಾಜಿ ಸಿಎಂ ಧರ್ಮಸಿಂಗ್‌ಗೆ ಪ್ರಶ್ನಾವಳಿ ಕಳುಹಿಸಿದ ಎಸ್‌ಐಟಿ

11:18 AM Jul 25, 2017 | Team Udayavani |

ಬೆಂಗಳೂರು: ಜಂತಕಲ್‌ ಮೈನಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಾಜಿ ಮುಖ್ಯಮಂತ್ರಿ ಎನ್‌.ಧರ್ಮಸಿಂಗ್‌ ಅವರಿಗೆ ಪ್ರಶ್ನಾವಳಿಗಳನ್ನು ಕಳುಹಿಸಿಕೊಟ್ಟಿದೆ. ಜತೆಗೆ ಇದೇ ಜುಲೈ 30ರೊಳಗೆ ಪ್ರಶ್ನೆಗಳಿಗೆ ಸೂಕ್ತ ಉತ್ತರಿಸುವಂತೆ ತಿಳಿಸಿದೆ ಎಂದು ಎಸ್‌ಐಟಿಯ ಮೂಲಗಳು ತಿಳಿಸಿವೆ.

Advertisement

ಸುಪ್ರೀಂಕೋರ್ಟ್‌ ಆದೇಶದ ಮೇರೆಗೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಪ್ರತಿಯೊಬ್ಬರನ್ನು ವಿಚಾರಣೆಗೊಳಪಡಿಸುತ್ತಿದೆ. ಅದೇ ರೀತಿ ಧರ್ಮಸಿಂಗ್‌ ಮುಖ್ಯಮಂತ್ರಿಯಾಗಿದ್ದ ವೇಳೆ ಜಂತಕಲ್‌ ಮೈನಿಂಗ್‌ಗೆ ಅಕ್ರಮವಾಗಿ ಅನುಮತಿ ನೀಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಲಿಖೀತವಾಗಿ ಮಾಹಿತಿ ನೀಡುವಂತೆ ಅವರಿಗೆ ಕೇಳಿಕೊಂಡಿದ್ದೇವೆ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಧರ್ಮಸಿಂಗ್‌ ಅನಾರೋಗ್ಯದಿಂದ ಬಳಲುತ್ತಿದ್ದು, ನಡೆದಾಡಲು ಸಾಧ್ಯವಿಲ್ಲ. ಹೀಗಾಗಿ ಎಸ್‌ಐಟಿ ಮುಂದೆ ಹಾಜರಾತಿಗೆ ವಿನಾಯಿತಿ ಕೋರಿದ್ದರು. ಈ ಹಿನ್ನೆಲೆಯಲ್ಲಿ ತನಿಖೆಗೆ ಅಗತ್ಯವಿರುವ ಪ್ರತಿಯೊಂದು ಪ್ರಶ್ನಾವಳಿಗೆ ಉತ್ತರ ನೀಡುವಂತೆ ಸೂಚಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಮೀಸಲು ಅರಣ್ಯದಲ್ಲಿ ಗಣಿಗಾರಿಕೆ ನಡೆಸಲು ವಿನೋದ್‌ ಗೋಯಲ್‌ ಮಾಲೀಕತ್ವದ ಜಂತಕಲ್‌ ಮೈನಿಂಗ್‌ ಸಂಸ್ಥೆಗೆ ಅನುಮತಿ ನೀಡಲಾಗಿತ್ತು. ಸಂಸ್ಥೆಯು ಅವ್ಯವಹಾರ ನಡೆಸಿದ್ದರಿಂದ ಕಪ್ಪುಪಟ್ಟಿಗೆ ಸೇರಿಸಲಾಗಿತ್ತು.

ಆದರೂ, ಅಕ್ರಮ ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ ಎಂಬ ಆರೋಪಗಳಿದ್ದು, ಅದು ನಿಜವೇ? ಅನುಮತಿ ನೀಡಿದ್ದರೂ ಯಾವ ಕಾರಣಕ್ಕಾಗಿ ಅನುಮತಿ ನೀಡಲಾಗಿದೆ ಎಂಬಂತಹ ಪ್ರಮುಖ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ. ಪ್ರಕರಣ ಸಂಬಂಧ ಅಧಿಕಾರಿಗಳು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ.ಗಂಗಾರಾಮ್‌ ಬಡೇರಿಯಾ ಸೇರಿದಂತೆ ಹತ್ತಾರು ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆ ನಡೆಸಲಾಗಿದೆ. ಅಲ್ಲದೇ ಗಂಗಾರಾಮ್‌ ಬಡೇರಿಯಾ ಅವರನ್ನು ಬಂಧಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next