ಲಕ್ನೋ: ಉತ್ತರ ಪ್ರದೇಶದಲ್ಲಿ ಚುನಾವಣಾ ಮೈತ್ರಿ ಮಾಡಿಕೊಂಡಿರುವ ಎಸ್ಪಿ-ಬಿಎಸ್ಪಿ ಗುರುವಾರ ತಾವು ಸ್ಪರ್ಧಿಸಲಿರುವ ಸ್ಥಾನಗಳ ವಿವರ ಪ್ರಕಟಿಸಿವೆ. ಎಸ್ಪಿ 37, ಬಿಎಸ್ಪಿ 38 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಕೇಂದ್ರದ ಮಾಜಿ ಸಚಿವ ಅಜಿತ್ ಸಿಂಗ್ ನೇತೃತ್ವದ ರಾಷ್ಟ್ರೀಯ ಲೋಕದಳ ಮೂರು ಸ್ಥಾನಗಳಲ್ಲಿ ಅದೃಷ್ಟಪರೀಕ್ಷೆ ನಡೆಸಲಿದೆ. ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ವಾರಾಣಸಿ ಕ್ಷೇತ್ರದಿಂದ ಸಮಾಜವಾದಿ ಪಕ್ಷ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಾಗಿ ಘೋಷಣೆ ಮಾಡಿದೆ. ಕಾಂಗ್ರೆಸ್ಗೆ ಸೋನಿಯಾ ಗಾಂಧಿ ಪ್ರತಿನಿಧಿಸುವ ರಾಯ್ಬರೇಲಿ ಮತ್ತು ರಾಹುಲ್ ಗಾಂಧಿ ಸದಸ್ಯರಾಗಿರುವ ಅಮೇಠಿಯನ್ನು ಮಾತ್ರ ಬಿಟ್ಟುಕೊಡಲಾಗಿದೆ. ಎಸ್ಪಿ ಅಧ್ಯಕ್ಷ ಅಖೀಲೇಶ್ ಯಾದವ್, ಬಿಎಸ್ಪಿ ನಾಯಕಿ ಮಾಯಾವತಿ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ವಿವರ ನೀಡಿದ್ದಾರೆ. ಹಿಂದಿನ ಒಪ್ಪಂದದ ಪ್ರಕಾರ 2 ಪಕ್ಷಗಳೂ ತಲಾ 38 ಸ್ಥಾನಗಳಲ್ಲಿ ಸ್ಪರ್ಧಿಸುವ ಇರಾದೆ ಹೊಂದಿದ್ದವು. ಆರ್ಎಲ್ಡಿಗೆ ಅವಕಾಶ ನೀಡುವ ದೃಷ್ಟಿಯಿಂದ ಎಸ್ಪಿ 1 ಸ್ಥಾನವನ್ನು ಬಿಎಸ್ಪಿಗೆ ನೀಡಿದೆ. ಇದೇ ವೇಳೆ ಎಸ್ಪಿ-ಬಿಎಸ್ಪಿ ಮೈತ್ರಿ ಬಗ್ಗೆ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.