Advertisement

ಕಾಂಗ್ರೆಸ್ ನಾಯಕರ ವಿರುದ್ಧ ಜೆಡಿಎಸ್‌ ಕಿಡಿ

11:28 PM Apr 14, 2019 | Team Udayavani |

ಬೆಂಗಳೂರು: ಮಂಡ್ಯ, ಹಾಸನ ಹಾಗೂ ತುಮಕೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನ ಕೆಲವು ನಾಯಕರು ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿ ಪರ ಕೆಲಸ ಮಾಡುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ವರಿಷ್ಠರು ಸ್ಥಳೀಯ ನಾಯಕರ ಮೇಲೆ ಒತ್ತಡ ಹೇರಿದ್ದಾರೆ.

Advertisement

ಜೆಡಿಎಸ್‌ ರಾಜ್ಯ ಘಟಕ ಹಾಗೂ ಕೆಪಿಸಿಸಿ ವತಿಯಿಂದ ಎರಡೂ ಪಕ್ಷಗಳ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದು ಸಮ್ಮಿಶ್ರ ಸರ್ಕಾರ ನಡೆಸುತ್ತಿರುವ ಕಾಂಗ್ರೆಸ್‌-ಜೆಡಿಎಸ್‌ ಲೋಕಸಭೆ ಚುನಾವಣೆಯಲ್ಲಿ ಸೀಟು ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸಲಿದ್ದು, ಸ್ಥಳೀಯ ಕಾರ್ಯಕರ್ತರು ಹಾಗೂ ಮುಖಂಡರು ಒಟ್ಟಾಗಿ ಕೆಲಸ ಮಾಡಬೇಕು.

ಸಣ್ಣಪುಟ್ಟ ಭಿನ್ನಾಭಿಪ್ರಾಯ ಇದ್ದರೂ ರಾಷ್ಟ್ರೀಯ ಹಿತಾಸಕ್ತಿಗಾಗಿ ಅವುಗಳನ್ನು ಬದಿಗೊತ್ತಿ ಒಗ್ಗಟ್ಟು ಪ್ರದರ್ಶಿಸಬೇಕೆಂದು ತಿಳಿಸಿದೆ. ಅಲ್ಲದೆ, ಕೆಲವರು ಪಕ್ಷದ ಆದೇಶಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದು, ಅಂತವರ ಹೆಸರನ್ನು ಪಟ್ಟಿ ಮಾಡಿರುವ ಜೆಡಿಎಸ್‌ ಕೆಪಿಸಿಸಿಗೆ ನೀಡಿದೆ.

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಬೆಂಗಳೂರಿಗೆ ಬಂದಾಗ ಮೂರು ಕ್ಷೇತ್ರಗಳಲ್ಲಿನ ವಿದ್ಯಮಾನಗಳ ಕುರಿತು ರಾಹುಲ್‌ಗೆ ಪತ್ರ ನೀಡಿದ್ದ ದೇವೇಗೌಡರು, ನಂತರ ಸಿದ್ದರಾಮಯ್ಯ ಅವರಿಗೆ ಮನವೊಲಿಕೆಯ ಹೊಣೆ ನೀಡಿದ್ದರು.

ನಂತರವೂ ಮಂಡ್ಯ, ಹಾಸನ, ತುಮಕೂರು ಕ್ಷೇತ್ರಗಳಲ್ಲಿ ಕೆಲವು ನಾಯಕರು ಬಿಜೆಪಿ ಪರ ಬಹಿರಂಗವಾಗಿಯೇ ಕೆಲಸ ಮಾಡುತ್ತಿರುವುದಕ್ಕೆ ದೇವೇಗೌಡರು ಬೇಸರ ವ್ಯಕ್ತಪಡಿಸಿದ್ದಾರೆಂದು ಹೇಳಲಾಗಿದೆ. ಮಂಡ್ಯದಲ್ಲಿ ಚೆಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ, ರಮೇಶ್‌ ಬಂಡಿಸಿದ್ದೇಗೌಡ ಪ್ರಮುಖವಾಗಿ ಪಕ್ಷದ ಆದೇಶ ಉಲ್ಲಂಘಿಸಿದ್ದಾರೆ.

Advertisement

ರಾಹುಲ್‌ಗಾಂಧಿ ಪ್ರಚಾರ ಸಭೆಗೂ ಗೈರು ಹಾಜರಾಗಿದ್ದಾರೆ. ಸಿದ್ದರಾಮಯ್ಯ-ದೇವೇಗೌಡ-ಕುಮಾರಸ್ವಾಮಿಯವರ ಜಂಟಿ ಪ್ರಚಾರಕ್ಕೆ ಬಂದಿಲ್ಲ. ಹೀಗಾಗಿ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಂಡ್ಯ ಜಿಲ್ಲಾ ಕಾಂಗ್ರೆಸ್‌ನಿಂದಲೂ ಒತ್ತಡ ಇದ್ದು, ಜೆಡಿಎಸ್‌ ನಾಯಕರು ಇದನ್ನೇ ಅಸ್ತ್ರವಾಗಿಸಿಕೊಂಡಿದ್ದಾರೆ.

ಇನ್ನು, ತುಮಕೂರು ಹಾಗೂ ಹಾಸನದಲ್ಲಿ ಕೆಲವು ನಾಯಕರು ಒಳಗೊಳಗೆ ಬಿಜೆಪಿ ಪರ ಕೆಲಸ ಮಾಡುತ್ತಿರುವುದು ಜೆಡಿಎಸ್‌ ನಾಯಕರ ಗಮನಕ್ಕೆ ಬಂದಿದ್ದು, ಅವರ ವಿರುದ್ಧ ಕ್ರಮ ಕೈಗೊಂಡು ಕಠಿಣ ಸಂದೇಶ ರವಾನಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಜೆಡಿಎಸ್‌ ನಾಯಕರ ವಿರುದ್ಧ ದೂರು: ಈ ಮಧ್ಯೆ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್‌ನ ಕೆಲವು ನಾಯಕರು ಬಿಜೆಪಿ ಪರ ಕೆಲಸ ಮಾಡುತ್ತಿರುವ ಆರೋಪಗಳಿವೆ. ಕೋಲಾರದಲ್ಲಿ ಜೆಡಿಎಸ್‌ ಶಾಸಕ ಶ್ರೀನಿವಾಸಗೌಡರು ಹಾಲಿ ಸಂಸದ ಕೆ.ಎಚ್‌.ಮುನಿಯಪ್ಪ ಜತೆಗಿನ ಹಳೇ ದ್ವೇಷ ಮುಂದುವರಿಸಿ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆಂದು

-ಅಲ್ಲಿನ ಕಾಂಗ್ರೆಸ್‌ ನಾಯಕರು ರಾಹುಲ್‌ಗಾಂಧಿ ಪ್ರಚಾರ ಸಭೆಯ ನಂತರ ಸಚಿವ ಡಿ.ಕೆ.ಶಿವಕುಮಾರ್‌ ಅವರ ಗಮನಕ್ಕೆ ತಂದಿದ್ದಾರೆ. ನಂತರ, ದೇವೇಗೌಡ ಹಾಗೂ ಕುಮಾರಸ್ವಾಮಿಯವರಿಗೂ ಈ ಕುರಿತು ಮಾಹಿತಿ ನೀಡಿದ್ದು, ಶ್ರೀನಿವಾಸಗೌಡರ ಜತೆ ಚರ್ಚಿಸಿ ಸರಿಪಡಿಸುವುದಾಗಿ ಇಬ್ಬರೂ ನಾಯಕರು ಕೆ.ಎಚ್‌.ಮುನಿಯಪ್ಪ ಅವರಿಗೆ ಭರವಸೆ ನೀಡಿದ್ದಾರೆಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next