Advertisement

ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿ

05:12 PM May 20, 2022 | Team Udayavani |

ದೊಡ್ಡಬಳ್ಳಾಪುರ: ನೌಕರರು ಒತ್ತಡದಿಂದ ಕಾರ್ಯ ನಿರ್ವಹಿಸಬೇಕಾದರೆ ದೈಹಿಕ ಕ್ಷಮತೆ ಇರಬೇಕಿದೆ. ನೌಕರರು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ನಿವಾರಣೆಯಾಗಿ, ದೈಹಿಕ ಸದೃಢತೆಗೆ ಸಹಕಾರಿಯಾಗಲಿದೆ ಎಂದು ಬೆಂ.ಗ್ರಾ. ಜಿಪಂ ಸಿಇಒ ಕೆ.ರೇವಣಪ್ಪ ಹೇಳಿದರು.

Advertisement

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಸಹಯೋಗದೊಂದಿಗೆ ನಗರದ ಭಗತ್‌ಸಿಂಗ್‌ ಕ್ರೀಡಾಂಗಣದಲ್ಲಿ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ 2022ರ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು ಮಾತನಾಡಿ, ಜಿಲ್ಲೆಯ ಸರ್ಕಾರಿ ನೌಕರರು ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲೂ ವಿಜೇತರಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕ್ರೀಡಾ ವಿಭಾಗದಲ್ಲಿ ಕೀರ್ತಿ ತರಬೇಕು ಎಂದು ಹೇಳಿದರು.

ಕ್ರೀಡಾ ಸಾಧಕರಿಗೆ ಉದ್ಯೋಗದಲ್ಲಿ ಮೀಸಲಾತಿ: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಟಿ. ವೆಂಕಟರಮಣಯ್ಯ ಮಾತನಾಡಿ, ನಾಲ್ಕು ತಾಲೂಕುಗಳ ಸರ್ಕಾರಿ ನೌಕರರು ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿರುವುದು ಹಬ್ಬದ ವಾತಾವರಣ ಮೂಡಿ, ಸಂತಸ ತಂದಿದೆ. ಕ್ರೀಡೆಯಲ್ಲಿ ಸೋತವರು ಕುಗ್ಗದೇ, ಗೆದ್ದವರು ಬೀಗದೇ ಇದ್ದು ಭಾಗವಹಿಸುವಿಕೆಯೇ ಮುಖ್ಯವಾಗಿದೆ. ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ಉದ್ಯೋಗದಲ್ಲಿ ಮೀಸಲಾತಿ ಇದ್ದು, ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದರೆ ಹೆಚ್ಚಿನ ಅನುಕೂಲಗಳಿವೆ ಎಂದು ಹೇಳಿದರು.

ಏಳು ಮಂದಿಗೆ ಸರ್ವೋತ್ತಮ ಪ್ರಶಸ್ತಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಗಂಗಾಧರಪ್ಪ ಮಾತನಾಡಿ, ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳು, ನೌಕರರಿಗೆ ಪ್ರತಿ ವರ್ಷ ಸರ್ವೋತ್ತಮ ಪ್ರಶಸ್ತಿ ನೀಡಲಾಗುತ್ತದೆ. ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಏಳು ಜನರಿಗೆ ಈ ವರ್ಷ ಜಿಲ್ಲಾ ಮಟ್ಟದ ಸರ್ವೋತ್ತಮ ಪ್ರಶಸ್ತಿ ನೀಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತರು, ಕ್ರೀಡಾ ಸಾಧಕರು ಹಾಗೂ ಕಳೆದ ವರ್ಷ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟದಲ್ಲಿ ವಿಜೇತರಾದವರನ್ನು ಅಭಿನಂದಿಸಲಾಯಿತು. ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾ ಯಣ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ಉಪ ವಿಭಾಗಾಧಿಕಾರಿ ತೇಜಸ್‌ ಕುಮಾರ್‌, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ತಹಶೀಲ್ದಾರ್‌ ಮೋಹನಕುಮಾರಿ ಸೇರಿದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪದಾಧಿಕಾರಿಗಳು, ನಾಲ್ಕು ತಾಲೂಕುಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು.

Advertisement

ಸರ್ಕಾರಿ ನೌಕರರು ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿರುವುದು ಹಬ್ಬದ ವಾತಾವರಣ ಮೂಡಿ, ಸಂತಸ ತಂದಿದೆ. ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯವಾಗಿದೆ. ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ಉದ್ಯೋಗದಲ್ಲಿ ಮೀಸಲಾತಿಯಿದ್ದು, ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದರೆ ಹೆಚ್ಚಿನ ಅನುಕೂಲವಿದೆ.
● ಟಿ.ವೆಂಕಟರಮಣಯ್ಯ, ಶಾಸಕ

Advertisement

Udayavani is now on Telegram. Click here to join our channel and stay updated with the latest news.

Next